ವಿಜಯಪುರ: ‘ಮುಖ್ಯಮಂತ್ರಿ ಬೊಮ್ಮಾಯಿ ಅವರು ನನಗೆ ವಿಜಯಪುರ ಉಸ್ತುವಾರಿ ಜವಾಬ್ದಾರಿ ನೀಡಿರುವುದು ಖುಷಿ ನೀಡಿದೆ’ ಎಂದು ಸಚಿವ ಉಮೇಶ ಕತ್ತಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಶಾಸಕರೊಡಗೂಡಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಬಾಗಲಕೋಟೆ ಬದಲು ವಿಜಯಪುರ ಜಿಲ್ಲೆ ಉಸ್ತುವಾರಿ ನೀಡಿರುವುದಕ್ಕೆ ಬೇಸರ, ಅಸಮಾಧಾನ ಇಲ್ಲ. ಬೇಸರ ಮಾಡಿಕೊಳ್ಳಲು ನಮಗೇನು ಪಾಕಿಸ್ತಾನದ ಉಸ್ತುವಾರಿ ವಹಿಸಿಲ್ಲ ಎಂದರು.
ಪದೇ ಪದೇ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನೆಡೆಯಾಗುವುದಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲಾಧಿಕಾರಿಗಳನ್ನು ಸರ್ಕಾರ ಆಗಾಗ ವರ್ಗಾವಣೆ ಮಾಡುತ್ತಿರುತ್ತದೆ. ಇದರಿಂದ ಜಿಲ್ಲೆಗಳ ಅಭಿವೃದ್ಧಿಗೆ ಹಿನ್ನೆಡೆಯಾಗುತ್ತದೆಯೇ? ಹಾಗೇನಿಲ್ಲ, ಉಸ್ತುವಾರಿ ಸಚಿವರ ಬದಲಾವಣೆಯಿಂದ ಅಭಿವೃದ್ಧಿಗೆ ತೊಡಕಿಲ್ಲ ಎಂದು ಸಮರ್ಥಿಸಿಕೊಂಡರು.
ವಿಜಯಪುರ ಜಿಲ್ಲೆಯಲ್ಲಿ ಯಥೇಚ್ಚವಾಗಿ ಬೆಳೆಯುವಲಿಂಬೆ ಹಣ್ಣನ್ನು ಉಪ್ಪಿನಕಾಯಿ ಮಾಡಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದೊಂದಿಗೆ ನೀಡಲು ಸಾಧ್ಯವೇ ಎಂಬುದನ್ನು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.
ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟ ವಿಸ್ತರಣೆ ಎಂಬುದು ‘ನಿರಂತರ ಜ್ಯೋತಿ’ ಇದ್ದಂತೆ ಎಂದು ಹಾಸ್ಯ ಚಟಾಕಿ ಹಾರಿಸಿದರು.
ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಚಿವರಾಗುವುದು ನಿಶ್ಚಿತ ಎಂದು ಹೇಳಿದರು.
ಬಿಜೆಪಿಯಿಂದ ಯಾರೊಬ್ಬರೂ ಕಾಂಗ್ರೆಸ್ಗೆ ಹೋಗುವುದಿಲ್ಲ. ಬಿಜೆಪಿಯಿಂದ ಕಾಂಗ್ರೆಸ್ಗೆ ಕೆಲ ಶಾಸಕರು ಹೊರಟಿದ್ದಾರೆ ಎಂಬುದು ಊಹಾಪೂಹ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.