ಮುದ್ದೇಬಿಹಾಳ: ದೇಶದ ಪ್ರತಿಷ್ಠಿತ ಐ.ಸಿ.ಎ.ಆರ್ ಕುಕ್ಕುಟ ಸಂಶೋಧನಾ ನಿರ್ದೇಶನಾಲಯ ಮತ್ತು ಮುದ್ದೇಬಿಹಾಳದ ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಗಳೆರೆಡು ಜಂಟಿ ಸಹಭಾಗಿತ್ವದಲ್ಲಿ ಒಟ್ಟಾಗಿ ಕೆಲಸ ಮಾಡುವ ಸಂಬಂಧ ಒಪ್ಪಂದ ಮಾಡಿಕೊಂಡಿವೆ.
ಈ ಕುರಿತು ಮಾಹಿತಿ ಹಂಚಿಕೊಂಡ ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಅರವಿಂದ ಹು. ಕೊಪ್ಪ ಅವರು, ಗ್ರಾಮೀಣ ಮತ್ತು ವಾಣಿಜ್ಯ ಕೋಳಿ ಉದ್ಯಮ ನಡೆಸುವ ರೈತರಿಗೆ ಸೂಕ್ತ ಪ್ರೋತ್ಸಾಹ ನೀಡಲಾಗುವುದು. ರಾಜ್ಯದಲ್ಲಿ ಕೋಳಿ ಸಾಕಾಣಿಕೆ ಪ್ರದೇಶ ವಿಸ್ತರಣೆ ಮತ್ತು ಉತ್ಪಾದನೆಗೆ ಒತ್ತು ನೀಡಲಾಗುತ್ತಿದೆ. ಕೋಳಿ ಮೊಟ್ಟೆ ಮತ್ತು ಮಾಂಸದ ಬಗ್ಗೆ ಜಾಗೃತಿ ಮೂಡಿಸಿ ಮಾರುಕಟ್ಟೆ ಸಂಪರ್ಕ ಹೆಚ್ಚಿಸಲಾಗುವುದು ಎಂದರು.
ಸಂಸ್ಕರಣೆ, ಮೌಲ್ಯವರ್ಧನೆ ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರಾಂಡಿಂಗ್ ಇತ್ಯಾದಿ ವಿಷಯಗಳ ಬಗ್ಗೆ ಕಾರ್ಯಾಚರಣೆಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಗ್ರಾಮೀಣ ಕೋಳಿ ಸಾಕಾಣಿಕೆಯನ್ನು ಮರುಸ್ಥಾಪಿಸುವ ಬಗ್ಗೆ ವಿನಿಮಯ ಆಧಾರದಲ್ಲಿ ಪರಸ್ಪರ ಒಪ್ಪಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕ ಡಾ. ಆರ್.ಎನ್ ಚಟರ್ಜಿ, ಕುಕ್ಕುಟ ಸಂಶೋಧನಾ ನಿರ್ದೇಶನಾಲಯದ ಪ್ರಧಾನ ವಿಜ್ಞಾನಿ ಡಾ. ಎಂ. ಆರ್ ರೆಡ್ಡಿ, ಹಿರಿಯ ವಿಜ್ಞಾನಿ ಡಾ. ವಿಜಯಕುಮಾರ, ಡಾ.ಸಾಯಿಕಾಂತ ದಮಾ, ಕಂಪನಿ ಕಾನೂನು ತಜ್ಞ ಸಬಜೀತ ಶಹಾ, ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಯ ನಿರ್ದೇಶಕ ಬಿ.ಜಿ ಮಠ(ನಾಗರಬೆಟ್ಟ), ಆರ್.ಬಿ ಸಜ್ಜನ, ಆನಂದ ದೇಸಾಯಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.