ADVERTISEMENT

ವಿಜಯಪುರ ಜಿಲ್ಲಾ ಅಭಿವೃದ್ಧಿ ಯೋಜನೆ| ಸಮಗ್ರ, ನಿಖರ ದತ್ತಾಂಶ ಒದಗಿಸಿ: ಡಾ.ಆನಂದ ಕೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 2:23 IST
Last Updated 24 ಜನವರಿ 2026, 2:23 IST
ಡಾ.ಆನಂದ ಕೆ.
ಡಾ.ಆನಂದ ಕೆ.   

ವಿಜಯಪುರ: ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031ರ ವರದಿ ತಯಾರಿಕೆಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಸರಿಯಾದ ಸಮಗ್ರ ಹಾಗೂ ನಿಖರ ದತ್ತಾಂಶ ಮಾಹಿತಿಯನ್ನು ಕಾಲ‌ಮಿತಿಯೊಳಗೆ ಒದಗಿಸುವ ಮೂಲಕ ಉತ್ತಮ ಫಲಿತಾಂಶಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031ರ ವರದಿಯನ್ನು ಸಿದ್ಧಪಡಿಸುವ ಸಂಬಂಧ ಶುಕ್ರವಾರ ಆಯೋಜಿಸಲಾಗಿದ್ದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ವರದಿಯ ಮೂಲಕ ಜಿಲ್ಲೆಯ ಜನಸಂಖ್ಯೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದ ಸಮಾನ ಒಳಗೊಳ್ಳುವಿಕೆ ಸಂಬಂಧಿತ ಸ್ಥಿತಿಗತಿಗಳನ್ನು ವಿಶ್ಲೇಷಿಸಿ, ಅಭಿವೃದ್ಧಿ ಕಾರ್ಯತಂತ್ರಗಳನ್ನು ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದರು.

ADVERTISEMENT

ಮಾನವ ಅಭಿವೃದ್ಧಿಯ ಪ್ರಮುಖ ಅಂಶಗಳಾದ ಶಿಕ್ಷಣ, ಆರೋಗ್ಯ, ಆದಾಯ, ಜೀವನಮಟ್ಟ, ಲಿಂಗ ಸಮಾನತೆ ಹಾಗೂ ಸಾಮಾಜಿಕ ಭದ್ರತೆಯನ್ನು ಕೇಂದ್ರೀಕರಿಸಿ ಜಿಲ್ಲೆಯ ವಾಸ್ತವಿಕ ಸ್ಥಿತಿಯನ್ನು ಅಂಕಿ-ಅಂಶಗಳ ಮೂಲಕ ಅವಲೋಕಿಸಿ ವರದಿ ತಯಾರಿಸಲಾಗುವುದು. ಅಧಿಕಾರಿಗಳೂ ನಿರ್ಲಕ್ಷ್ಯ ವಹಿಸದೇ ನಿಖರ ಮಾಹಿತಿಯುಳ್ಳ ದತ್ತಾಂಶ ಒದಗಿಸಬೇಕು ಎಂದು ಅವರು ಹೇಳಿದರು.

ಜಿಲ್ಲೆಯ ಮಾನವ ಅಭಿವೃದ್ಧಿ ಸೂಚ್ಯಂಕವನ್ನು ಸುಧಾರಿಸುವುದು, ಅಭಿವೃದ್ಧಿಯ ಫಲಗಳು ಸಮಾಜದ ಎಲ್ಲ ವರ್ಗಗಳಿಗೂ ಸಮಾನವಾಗಿ ತಲುಪುವಂತೆ ಮಾಡುವುದು. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು, ಅಂಗವಿಕಲರು ಹಾಗೂ ಹಿಂದುಳಿದ ಸಮುದಾಯಗಳ ಸಬಲೀಕರಣಕ್ಕೆ ಆದ್ಯತೆ ನೀಡುವುದು ಮುಖ್ಯ ಗುರಿಯಾಗಿದೆ ಎಂದರು.

ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವುದು. ಆರೋಗ್ಯ ಸೇವೆಗಳ ಲಭ್ಯತೆ ಮತ್ತು ಗುಣಮಟ್ಟವನ್ನು ಸುಧಾರಿಸುವುದು, ಪೌಷ್ಟಿಕಾಂಶ ಕೊರತೆ ನಿವಾರಣೆ, ಕುಡಿಯುವ ನೀರು ಮತ್ತು ಸ್ವಚ್ಛತೆ ವ್ಯವಸ್ಥೆಗಳನ್ನು ಬಲಪಡಿಸುವುದಕ್ಕೂ ಈ ವರದಿಯ ಮೂಲಕ ವಿಶೇಷ ಒತ್ತು ನೀಡಲಾಗಿದೆ ಎಂದು ಅವರು ಹೇಳಿದರು.

ಗುಣಮಟ್ಟದ ಮತ್ತು ಸಮಾನ ಶಿಕ್ಷಣವನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡಿ ಸಾಕ್ಷರತೆ, ಶಾಲಾ ದಾಖಲಾತಿ ಹಾಗೂ ಕಲಿಕಾ ಫಲಿತಾಂಶಗಳನ್ನು ಸುಧಾರಿಸುವುದು ಈ ಮಾನವ ಅಭಿವೃದ್ಧಿಯ ಉದ್ದೇಶವಾಗಿದೆ ಎಂದರು.

ಆರೋಗ್ಯ ಸೇವೆಗಳ ಲಭ್ಯತೆ, ಪ್ರವೇಶಾರ್ಹತೆ, ಗುಣಮಟ್ಟವನ್ನು ಹೆಚ್ಚಿಸಿ ಪೌಷ್ಟಿಕಾಂಶ ಕೊರತೆ, ತಾಯಿ-ಮಗು ಮರಣ ಪ್ರಮಾಣ ಮತ್ತು ಸಾಂಕ್ರಾಮಿಕ ರೋಗಗಳನ್ನು ಕಡಿಮೆ ಮಾಡುವುದು. ಕೃಷಿ, ಕೈಗಾರಿಕೆ ಮತ್ತು ಸೇವಾ ಕ್ಷೇತ್ರಗಳಲ್ಲಿ ಸಮತೋಲಿತ ಹಾಗೂ ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದು. ಕುಡಿಯುವ ನೀರು, ಸ್ವಚ್ಛತೆ, ವಸತಿ, ಸಾರಿಗೆ ಮತ್ತು ಇತರ ಮೂಲಸೌಕರ್ಯಗಳ ಅಭಿವೃದ್ಧಿಯ ಮೂಲಕ ಜನರ ಜೀವನಮಟ್ಟವನ್ನು ಸುಧಾರಿಸಲು ಆದ್ಯತೆ ನೀಡಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್‌ ಮಾತನಾಡಿ, ಎಲ್ಲ ಅಧಿಕಾರಿಗಳು ಸ್ಪಷ್ಟ ಮಾಹಿತಿ ನೀಡಿ, ಯಾವುದೇ ಸಮಸ್ಯೆಗಳಿದ್ದರೆ ಈ ಕಾರ್ಯಾಗಾರದಲ್ಲಿ ಪರಿಹಾರ ಕಂಡುಕೊಳ್ಳಬೇಕು. ನೈಸರ್ಗಿಕ ಸಂಪನ್ಮೂಲಗಳ ಸರಿಯಾದ ಬಳಕೆ ಮಾಡುವುದರ ಮೂಲಕ ನಮ್ಮ ಮುಂದಿನ ಪೀಳಿಗೆಗೆ ನೀಡುವ ಮಹತ್ವದ ಉದ್ದೇಶವನ್ನು ವರದಿ ಒಳಗೊಳ್ಳುತ್ತದೆ. ಅಧಿಕಾರಿಗಳು ಸಮನ್ವಯದಿಂದ ದತ್ತಾಂಶ ವರದಿ ಸಿದ್ಧಪಡಿಸಿ ಒದಗಿಸಬೇಕು ಎಂದು ಹೇಳಿದರು.

ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಮತ್ತು ಸಾಂಖ್ಯಿಕ ಇಲಾಖೆಯ ಮಾನವ ಅಭಿವೃದ್ಧಿ ವಿಭಾಗದ ಹಿರಿಯ ನಿರ್ದೇಶಕ ಬಸವರಾಜ್ ಎಸ್. ಮಾತನಾಡಿದರು.

2031ರ ವೇಳೆಗೆ ಜಿಲ್ಲೆಯನ್ನು ಆರ್ಥಿಕವಾಗಿ ಸಮೃದ್ಧ ಮತ್ತು ಸುಸ್ಥಿರ ಅಭಿವೃದ್ಧಿಯ ಮಾದರಿ ಜಿಲ್ಲೆಯಾಗಿ ರೂಪಿಸುವುದಕ್ಕಾಗಿ ಜಿಲ್ಲೆಯ ಎಲ್ಲ ಅಧಿಕಾರಿಗಳು ನಿಖರ‌ ಹಾಗೂ ಸಮಗ್ರ ಮಾಹಿತಿ ನೀಡಬೇಕು
ಡಾ.ಆನಂದ್‌ ಕೆ. ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.