
ವಿಜಯಪುರ: ಜಿಲ್ಲೆಯಲ್ಲಿ ಸರ್ಕಾರದಿಂದಲೇ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಘೊಷಿಸಿದ ಹಿನ್ನಲೆಯಲ್ಲಿ ಗುರುವಾರ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಪರಿಷತ್ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮನಿ ಮಾತನಾಡಿ, ಜಿಲ್ಲೆಯ ಎಲ್ಲ ಪ್ರಗತಿಪರ ಸಂಘಟನೆಗಳ ಮತ್ತು ಹೋರಾಟಗಾರರ ಹಾಗೂ ವಿದ್ಯಾರ್ಥಿ ಯುವಜನರ ಹೋರಾಟದ ಪ್ರತಿಫಲವಾಗಿ ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲು ಘೋಷಣೆ ಆಗಿದ್ದು ಸ್ವಾಗತಾರ್ಹ. ಹೋರಾಟಗಾರರ ಬೇಡಿಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಧನ್ಯವಾದಗಳು. ಆದಷ್ಟು ಬೇಗನೆ ಕಾಲೇಜು ಶಂಕು ಸ್ಥಾಪನೆಯಾಗಬೇಕು ಈ ಕುರಿತು ಮುಖ್ಯಮಂತ್ರಿಗಳು ಗಮನ ಹರಿಸಬೇಕು ಜೊತೆಗೆ ಮೆಡಿಕಲ್ ಕಾಲೇಜು ಸ್ಥಾಪನೆಗೆ ಹೋರಾಡಿ ಜೈಲಿಗೆ ಹೋದ ಹೋರಾಟಗಾರರನ್ನು ಆದಷ್ಟು ಬೇಗನೆ ಬಿಡುಗಡೆಗೊಳಿಸಬೇಕೆಂದು ಅಗ್ರಹಿಸಿದರು.
ಪರಿಷತ್ ಜಿಲ್ಲಾ ಉಪಾಧ್ಯಕ್ಷ ಮಹಾದೇವ ಚಲವಾದಿ ಮಾತನಾಡಿ, ಜಿಲ್ಲೆಯ ವಿದ್ಯಾರ್ಥಿ ಯುವಜನರ ಬಹುದಿನಗಳ ಬೇಡಿಕೆಯಾಗಿರುವ ಸಂಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು, ಸ್ಥಾಪನೆ ಮಾಡುತ್ತೇವೆ ಎಂದು ಘೋಷಣೆ ಮಾಡಿದ ಮುಖ್ಯಮಂತ್ರಿಗಳಿಗೆ ಹಾಗೂ ಈ ಬಗ್ಗೆ ಶ್ರಮಿಸಿದ ಜಿಲ್ಲೆಯ ಜನಪ್ರತಿನಿಧಿಗಳಿಗೆ ಅಭಿನಂದನೆಗಳು. ಘೋಷಣೆ ಬರೆ ಘೋಷಣೆಯಾಗಿ ಉಳಿಯದೆ, ಆದಷ್ಟು ಬೇಗನೆ ಶಂಕು ಸ್ಥಾಪನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಕಾಲೇಜನ್ನು ಉದ್ಘಾಟಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪ್ರತಾಪ್, ಸಾಯಬಣ್ಣ, ಭೀಮು ಹುಚ್ಚಪ್ಪ, ಯಾಸಿನ್, ಆದಿತ್ಯ, ನಿಂಗಣ್ಣ, ಮಂಜು, ಪ್ರವೀಣ, ಆಕಾಶ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.