ADVERTISEMENT

ವಿಜಯಪುರಕ್ಕೆ ₹45 ಸಾವಿರ ಕೋಟಿ ಬಂಡವಾಳ ಹೂಡಿಕೆ: ಸಚಿವ ಎಂ.ಬಿ.ಪಾಟೀಲ

ಜಿಲ್ಲಾಡಳಿತದಿಂದ ಗಣರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಚಿವ ಎಂ.ಬಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 27 ಜನವರಿ 2026, 5:20 IST
Last Updated 27 ಜನವರಿ 2026, 5:20 IST
ವಿಜಯಪುರ ಜಿಲ್ಲಾಡಳಿತದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಕ್ರೀಡಾ ಸಾಧಕರನ್ನು ಗಣ್ಯರು ಸನ್ಮಾನಿಸಿದರು 
ವಿಜಯಪುರ ಜಿಲ್ಲಾಡಳಿತದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಕ್ರೀಡಾ ಸಾಧಕರನ್ನು ಗಣ್ಯರು ಸನ್ಮಾನಿಸಿದರು    

ವಿಜಯಪುರ: ‘ಹೆಸರಾಂತ ಕಂಪನಿಗಳು ವಿಜಯಪುರ ಜಿಲ್ಲೆಯಲ್ಲಿ ₹45 ಸಾವಿರ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದ್ದು, ಇದರಿಂದ ಜಿಲ್ಲೆಯು ಭವಿಷ್ಯದಲ್ಲಿ ಮ್ಯಾನ್ಯುಫ್ಯಾಕ್ಚರಿಂಗ್ ಕ್ಲಸ್ಟರ್ ಆಗಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಜಿಲ್ಲಾಡಳಿತದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ಇತ್ತೀಚಿಗೆ ನಡೆದ ವಿಶ್ವ ಆರ್ಥಿಕ ಸಮಾವೇಶದಲ್ಲಿ ನೋಕಿಯಾ, ಟಾಟಾ ಸ್ಪೇಸ್ ಮುಂತಾದ 50ಕ್ಕೂ ಹೆಚ್ಚು ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಬಂಡವಾಳ ಹೂಡಿಕೆ ಕುರಿತು ಮಾತುಕತೆ ನಡೆಸಿದ್ದು, ಈ ಪೈಕಿ ಆರ್.ಪಿ.ಗೊಯೆಂಕಾ ಕಂಪನಿಯು ಮರು ಬಳಕೆ ಇಂಧನ ಕ್ಷೇತ್ರದಲ್ಲಿ ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆ ಮಾಡಲಿದೆ. ಇದರಿಂದ ಜಿಲ್ಲೆಯ ಯುವ ಜನರಿಗೆ ಉಜ್ವಲ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದರು.

ADVERTISEMENT

ಪಂಚ ಗ್ಯಾರಂಟಿ ಯೋಜನೆಗಳಲ್ಲಿ ವಿಜಯಪುರ ಜಿಲ್ಲೆಯಲ್ಲಿ ಒಟ್ಟು ₹3,788 ಕೋಟಿ ಖರ್ಚನ್ನು ಭರಿಸಲಾಗಿದ್ದು, ಹೆಮ್ಮೆಯ ವಿಷಯವಾಗಿದೆ ಎಂದರು.

ಸರ್ಕಾರ ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಕೃಷ್ಣಾ ನ್ಯಾಯಾಧೀಕರಣ-2 ರ ಅಂತಿಮ ತೀರ್ಪಿನ ಗೆಜೆಟ್ ಪ್ರಕಟಣೆ ಪಡೆದು ಮುಳುಗಡೆಯಾಗುವ 184 ಗ್ರಾಮಗಳ ಜಮೀನುಗಳ ಭೂಸ್ವಾಧೀನತೆ, 20 ಗ್ರಾಮಗಳ ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಹಾಗೂ ಯು.ಕೆ.ಪಿ ಹಂತ-3 ರಡಿ ಬರುವ 5.94 ಲಕ್ಷ ಹೆಕ್ಟೇರ್ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಕಾಲುವೆ ಜಾಲದ ನಿರ್ಮಾಣವನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಳ್ಳಲು ಕಂಕಣ ಬದ್ಧವಾಗಿದೆ ಎಂದು  ಹೇಳಿದರು.

ಆಕರ್ಷಕ ಪಥಸಂಚಲನ:

ಜಿಲ್ಲೆ ವಿವಿಧ ಶಾಲಾ, ಕಾಲೇಜು, ಎನ್ ಸಿಸಿ, ಎನ್ ಎಸ್ ಎಸ್ ಎಸ್, ಸ್ಕೌಟ್ಸ್‌ ಅಂಡ್ ಗೈಡ್ಸ್, ಅಗ್ನಿ ಶಾಮಕ, ಪೊಲೀಸ್, ಪೊಲೀಸ್ ವಾದ್ಯವೃಂದ, ಐಆರ್ ಬಿ, ಸೈನಿಕ ಶಾಲೆ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚನ ನಡೆಯಿತು.

ಶಾಲಾ, ಕಾಲೇಜು ವಿದ್ಯಾರ್ಥಿಗಳು ದೇಶಭಕ್ತಿಗೀತೆಗಳಿಗೆ ಆಕರ್ಷಕ ನೃತ್ಯ ಪ್ರದರ್ಶಿಸಿದರು. ಜಿಲ್ಲೆಯ ವಿವಿಧ ಕ್ಷೇತ್ರದ ಸಾಧರನ್ನು ಸಚಿವರು ಸನ್ಮಾನಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕೌಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ, ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್‌, ಪ್ರೊಬೇಷನರಿ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ಇದ್ದರು.

ವಿಜಯಪುರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಶಾಲಾ ವಿದ್ಯಾರ್ಥಿಗಳು ಮಲ್ಲಕಂಬ ಕಸರತ್ತು ಪ್ರದರ್ಶಿಸಿದರು 
ವಿಜಯಪುರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಶಾಲಾ ವಿದ್ಯಾರ್ಥಿನಿಯರು ದೇಶಭಕ್ತಿಗೀತೆಗೆ ನೃತ್ಯ ಪ್ರದರ್ಶಿಸಿದರು –ಪ್ರಜಾವಾಣಿ ಚಿತ್ರ
ವಿಜಯಪುರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಕ್ರೀಡಾ ಸಾಧಕರನ್ನು ಗಣ್ಯರು ಸನ್ಮಾನಿಸಿದರು –ಪ್ರಜಾವಾಣಿ ಚಿತ್ರ

- ಪ್ರಜಾಪ್ರಭುತ್ವದಲ್ಲಿ ಸಂವಿಧಾನವು ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಬ್ಬ ವ್ಯಕ್ತಿಯ ಘನತೆ ಎತ್ತಿ ಹಿಡಿಯುತ್ತದೆ. ಹಕ್ಕುಗಳನ್ನು ರಕ್ಷಿಸುತ್ತದೆ ಮತ್ತು ಭಿನ್ನಾಭಿಪ್ರಾಯಗಳನ್ನು ಹಿಂಸೆಯಿಲ್ಲದೆ ಬಗೆಹರಿಸಲು ವೇದಿಕೆ ನೀಡುತ್ತದೆ

- ಎಂ.ಬಿ.ಪಾಟೀಲ ಸಚಿವ 

ನವರಸಪುರ ಉತ್ಸವ ಉದ್ಯೋಗ ಮೇಳ

ವಿಜಯಪುರ: ‘ನವರಸಪುರ ಉತ್ಸವ ಮಾರ್ಚ್ ಕೊನೆಯಲ್ಲಿ ಅರ್ಥ ಪೂರ್ಣವಾಗಿ ಆಯೋಜಿಸಲಾಗುವುದು’ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ನವರಸಪುರ ಉತ್ಸವ ಬಹಳ ವರ್ಷಗಳಿಂದ ಆಚರಿಸಲಾಗಿರಲಿಲ್ಲ. ಈ ಬಾರಿ ಉತ್ಸವಕ್ಕೆ ಮರು ಚಾಲನೆ ನೀಡಲಾಗುವುದು’ ಎಂದರು. ‘ಕೌಶಲಾಭಿವೃದ್ಧಿ ನಿಗಮದಿಂದ ವಿಜಯಪುರದಲ್ಲಿ ಫೆ‌.2ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು 150 ಕಂಪನಿಗಳು ಭಾಗವಹಿಸಲಿವೆ. ಜಿಲ್ಲೆಯ ಸಾವಿರಾರರು ಯುವ ಜನರಿಗೆ ಉದ್ಯೋಗ ಲಭಿಸಲಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.