
ವಿಜಯಪುರ: ‘ಜಿಲ್ಲೆಯಲ್ಲಿ ಶನಿವಾರ ನಡೆದ ದ್ವಿತೀಯ ಪಿಯುಸಿ ಕನ್ನಡ ಮತ್ತು ಅರೆಬಿಕ್ ಭಾಷಾ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 25,834 ವಿದ್ಯಾರ್ಥಿಗಳ ಪೈಕಿ, 24,478 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 1,356 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ. ಸಿ ಕೆ ಹೊಸಮನಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ನಗರದ ವಿಬಿ ದರ್ಬಾರ್ ಕಾಲೇಜ್, ಎಸ್.ಎಸ್.ಪದವಿಪೂರ್ವ ಕಾಲೇಜ್ ಹಾಗೂ ಖೇಡ ಕಾಲೇಜಿನಲ್ಲಿ ನಡೆದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಸುಸೂತ್ರ ಹಾಗೂ ಸುಗಮ ಪರೀಕ್ಷೆ ನಡೆಸಲು ಕೈಗೊಳ್ಳಲಾದ ವ್ಯವಸ್ಥೆ ಕುರಿತಾಗಿ ಪರಿಶೀಲನೆ ನಡೆಸಿದರು.
ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿಗಳ ಮಾಹಿತಿ, ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಆಸನ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಮೂಲ ಸೌಲಭ್ಯ, ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತಾ ಹಾಗೂ ವೈದ್ಯಕೀಯ ವ್ಯವಸ್ಥೆ ಕಲ್ಪಿಸಿರುವ ಕುರಿತು ಮಾಹಿತಿ ಪಡೆದುಕೊಂಡರು.
ಇದೇ ವೇಳೆ ಪ್ರಥಮ ಚಿಕಿತ್ಸಾ ವ್ಯವಸ್ಥೆಯ ಕಿಟ್ಗಳನ್ನು ಪರಿಶೀಲಿಸಿದರು. ಎಲ್ಲ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಮೊಬೈಲ್ ಸ್ವಾಧೀನಾಧಿಕಾರಿಗಳು ನಿಯಮಾನುಸಾರ ಕರ್ತವ್ಯ ನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಅನ್ಯ ಹಾಗೂ ಬಾಹ್ಯ ವ್ಯಕ್ತಿಗಳು ಇಲ್ಲದೇ ಇರುವುದನ್ನೂ ಸಹ ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಸಮಸ್ಯೆಗಳು ಉಂಟಾಗದಂತೆ ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ಶಿಸ್ತಿನಿಂದ ನಡೆಸುವುದು, ವಿದ್ಯಾರ್ಥಿಗಳು ಕುಳಿತುಕೊಳ್ಳುವ ಆಸನಗಳ ಮಧ್ಯದಲ್ಲಿ ಹೆಚ್ಚಿನ ಅಂತರ ಕಾಯ್ದುಕೊಳ್ಳಬೇಕು ಸೂಚಿಸಿದರು.
ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲಾಗಿರುವುದರಿಂದ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆ ದೂರಿಗೆ ಆಸ್ಪದ ನೀಡದೇ ಎಚ್ಚರಿಕೆ ವಹಿಸಬೇಕುಡಾ.ಆನಂದ.ಕೆಜಿಲ್ಲಾಧಿಕಾರಿ
ವೆಬ್ ಕಾಸ್ಟಿಂಗ್ ಪರಿಶೀಲಿಸಿದ ರಿಷಿ ಆನಂದ್
ವಿಜಯಪುರ: ದ್ವಿತೀಯ ಪಿಯುಸಿ ಪರೀಕ್ಷೆ ಪಾರದರ್ಶಕ ಮತ್ತು ನಕಲು ಮುಕ್ತವಾಗಿ ನಡೆಸುವ ದೃಷ್ಟಿಯಿಂದ ನಗರದ ಜಿಲ್ಲಾ ಪಂಚಾಯಿತಿ ಸಂಪನ್ಮೂಲ ಕೇಂದ್ರದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರ ಹಾಗೂ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಅಳವಡಿಸಿರುವ ಗಣಕಯಂತ್ರ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗಳು ಮತ್ತು ಇಂಟರ್ನೆಟ್ ವ್ಯವಸ್ಥೆಗಳನ್ನು ವೀಕ್ಷಿಸಿದರು. ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಯಾವುದೇ ಸಿಸಿಟಿವಿ ಕ್ಯಾಮೆರಾ ಸ್ಥಗಿತಗೊಳ್ಳದಂತೆ ನಿಗಾ ವಹಿಸಬೇಕು ಎಂದು ಸೂಚಿಸಿದರು. ಒಂದು ವೇಳೆ ಸಿಸಿಟಿವಿಗಳು ಸ್ಥಗಿತಗೊಂಡಿದ್ದಲ್ಲಿ ತುರ್ತಾಗಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪಗಳು ಉಂಟಾಗದಂತೆ ಕಟ್ಟು-ನಿಟ್ಟಾಗಿ ನಡೆಸಬೇಕು ಎಂದರು. ಬಳಿಕ ಪಿಡಿಜೆ ಪ್ರೌಢಶಾಲೆ ಸಿಕ್ಯಾಬ್ ಕಾಲೇಜು ಹಾಗೂ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿದರು. ಎನ್ ಐಸಿ ಅಧಿಕಾರಿ ಶಿವಾನಂದ ಗೂಗವಾಡ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರದ ಮುಖ್ಯಸ್ಥ ಮಹಾಂತೇಶ ಹಿಪ್ಪರಗಿ ವೆಬ್ ಕಾಸ್ಟಿಂಗ್ ಕೇಂದ್ರದ ಸಹಾಯಕ ಮಹಾಂತೇಶ ಕನ್ನೂರ ಜಿಲ್ಲಾ ಪಂಚಾಯಿತಿ ಎ.ಡಿ.ಪಿ.ಎಂ. ಮಕ್ತುಮಸಾಬ ಮುಲ್ಲಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.