
ವಿಜಯಪುರ ನಗರದಲ್ಲಿ ಶನಿವಾರ ನಡೆದ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿದರು. ಚೇರ್ಮನ್ ಬಸಯ್ಯ ಹಿರೇಮಠ, ಸಂಗು ಸಜ್ಜನ ಇದ್ದಾರೆ
ವಿಜಯಪುರ: ನಗರದ ಆರಾಧ್ಯ ದೈವ ಸಿದ್ದೇಶ್ವರ ಜಾತ್ರೆ ಜನವರಿ 11ರಿಂದ 17ರ ವರೆಗೆ ನಡೆಯಲಿದೆ ಎಂದು ಶ್ರೀ ಸಿದ್ದೇಶ್ವರ ಸಂಸ್ಥೆ ಚೇರ್ಮನ್ ಬಸಯ್ಯ ಹಿರೇಮಠ ತಿಳಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.11 ರಂದು ಸಂಜೆ ಗೋಮಾತೆ ಪೂಜೆ, ನಂದಿ ಧ್ವಜಗಳ ಮೆರವಣಿಗೆಯೊಂದಿಗೆ ಜಾತ್ರೆಗೆ ಚಾಲನೆ ನೀಡಲಾಗುವುದು ಎಂದರು.
ಜ.12ರಂದು ನಂದಿ ಧ್ವಜಗಳ ಉತ್ಸವ, 770 ಲಿಂಗಗಳಿಗೆ ಎಣ್ಣೆ ಮಜ್ಜನದೊಂದಿಗೆ ಅಭಿಷೇಕ, ಭಜನಾ ಕಾರ್ಯಕ್ರಮ, ಜ.13ರಂದು ಅಕ್ಷತಾರ್ಪಣೆ, ಭೋಗಿ ಕಾರ್ಯಕ್ರಮ, ಜ.14 ರಂದು ಸಂಕ್ರಮಣ, ಹೋಮ ಹವನ, ಪಲ್ಲಕ್ಕಿಗಳೊಂದಿಗೆ ನಂದಿ ಧ್ವಜಗಳ ಉತ್ಸವ, ಜ.15ರಂದು ನಂದಿ ಧ್ವಜಗಳ ಮೆರವಣಿಗೆ, ಆಕರ್ಷಕ ಮದ್ದು ಸುಡುವ ಕಾರ್ಯಕ್ರಮ, ಜ.16ರಂದು ಭಾರ ಎತ್ತುವ ಸ್ಪರ್ಧೆ, ಜ. 17ರಂದು ಎಸ್.ಎಸ್.ಹೈಸ್ಕೂಲ್ ಕ್ರೀಡಾಂಗಣದಲ್ಲಿ ಜಂಗಿ ನಿಖಾಲಿ ಕುಸ್ತಿ ಸ್ಪರ್ಧೆ ನಡೆಯಲಿದೆ ಎಂದರು.
ಸಂಸ್ಥೆಯ ಅಧ್ಯಕ್ಷರಾದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ಸಿದ್ದೇಶ್ವರ ಜಾನುವಾರು ಜಾತ್ರೆ ವರ್ಷದಿಂದ ವರ್ಷಕ್ಕೆ ಕಳೆಗುಂದಿದೆ. ಜಾನುವಾರು ಪ್ರದರ್ಶನದಲ್ಲಿ ಉತ್ತಮ ರಾಸುಗಳಿಗೆ ಆಕರ್ಷಕ ಪ್ರಶಸ್ತಿ ನೀಡಿ ಪ್ರೋತ್ಸಾಹ ನೀಡಲಾಗುವುದು ಎಂದರು.
ಜಾತ್ರೆ ಅಂಗವಾಗಿ ಪ್ರತಿದಿನ ಭಕ್ತರಿಗೆ ಅನ್ನ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
ಸಂಸ್ಥೆಯು ಅನೇಕ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸುತ್ತಿದೆ. ಮುಂದಿನ ದಿನಗಳಲ್ಲಿ ಕೃಷಿ ಮಹಾವಿದ್ಯಾಲಯ, ವೈದ್ಯಕೀಯ ಕಾಲೇಜು, ಪಶುಸಂಗೋಪನಾ ಕಾಲೇಜು ಆರಂಭಿಸುವ ಉದ್ದೇಶವಿದೆ ಎಂದರು.
ಸಂಸ್ಥೆ ಸದ್ಯ ₹450 ಕೋಟಿ ಆಸ್ತಿ, 150 ಎಕರೆ ಜಮೀನು, ಗೋಶಾಲೆಯಲ್ಲಿ 1500 ಆಕಳು ಇವೆ. ಉತ್ತಮ ಕೆಲಸ ಮಾಡುತ್ತಿದೆ ಎಂದರು.
ಸಿದ್ದೇಶ್ವರ ಗುಡಿಯಲ್ಲಿ ಪ್ರತಿದಿನ ಮಧ್ಯಾಹ್ನ ಭಕ್ತರಿಗೆ ಅನ್ನ ದಾಸೋಹ ಮಾಡಲಾಗುತ್ತಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೂರದಿಂದ ವಿಜಯಪುರಕ್ಕೆ ಪ್ರವಾಸಕ್ಕೆ ಬರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಉಳಿಯಲು ಶಿವಾನುಭವ ಮಂಟಪದಲ್ಲಿ ಅವಕಾಶ ಮಾಡಿದ್ದೇವೆ. ಜೊತೆಗೆ ಊಟದ ವ್ಯವಸ್ಥೆ ಮಾಡಿದ್ದೇವೆ ಎಂದರು.
ಶ್ರೀ ಶೈಲ, ಪಂಢರಾಪುರ ಪಾದಯಾತ್ರಿಗಳಿಗೆ ಉಳಿಯಲು ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.