ವಿಜಯಪುರ: ಜಿಲ್ಲೆಯಲ್ಲಿ ಪಿಪಿಪಿ ಮಾದರಿಯನ್ನು ಕೈ ಬಿಟ್ಟು, ಸಂಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲು ಆಗ್ರಹಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯಿಂದ ಗುರುವಾರ ಪ್ರತಿಭಟನೆ ಮಾಡಲಾಯಿತು.
ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಮಾತನಾಡಿ, ಕಳೆದ 20 ವರ್ಷಗಳಿಂದ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯಿಂದ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕೆಂದು ಹೋರಾಟ ನಡೆಸಿದೆ, ಜನರ ಹೋರಾಟದ ಫಲವಾಗಿ ಇಂದು ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ಸರ್ಕಾರ ನಿರ್ಧರಿಸಿದ್ದು ಸ್ವಾಗತಾರ್ಹ. ಆದರೆ, ಇದರಲ್ಲಿ ಖಾಸಗಿ ಸಹಭಾಗಿತ್ವ ಎಐಡಿಎಸ್ಓ ಸಂಘಟನೆಯು ಒಪ್ಪುವುದಿಲ್ಲ ಎಂದರು.
ಈಗಾಗಲೇ ಜಿಲ್ಲೆಯಲ್ಲಿ ಎರಡು ಖಾಸಗಿ ಮೆಡಿಕಲ್ ಕಾಲೇಜುಗಳಿವೆ. ಶಿಕ್ಷಣ ಎನ್ನುವುದು ಕೆಲವೇ ಜನರ ಸ್ವತ್ತಾಗದೆ, ಎಲ್ಲರ ಸ್ವತ್ತಾಗಬೇಕು. ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಿಗಬೇಕಾದರೆ ಸರ್ಕಾರವೇ ಸಂಪೂರ್ಣ ಆರ್ಥಿಕ ಜವಾಬ್ದಾರಿ ತೆಗೆದುಕೊಳ್ಳಬೇಕು. ಆಗ ಮಾತ್ರ ಬಡವರು, ಕಾರ್ಮಿಕರ, ರೈತರ ಮಕ್ಕಳಿಗೆ ಶಿಕ್ಷಣ ಸಿಗುತ್ತದೆ ಎಂದರು.
ಎಐಡಿಎಸ್ಓ ಮುಖಂಡರು ಗೋವಿಂದ ರವರು ಮಾತನಾಡಿ, ವಿಜಯಪುರ ಜಿಲ್ಲೆಯು ನಿರಂತರವಾಗಿ ಬರಗಾಲಕ್ಕೆ ತುತ್ತಾಗುತ್ತಾ ಬಂದಿದ್ದು ಬಹುತೇಕ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳು ಕಷ್ಟ ಪಟ್ಟು ಅಭ್ಯಾಸ ಮಾಡಿ ಮುಂದೆ ಬರಬೇಕೆಂದರೆ ಉನ್ನತ ಶಿಕ್ಷಣ ಪಡೆಯಲು ಇಡೀ ಜಿಲ್ಲೆಯಲ್ಲಿ ಒಂದೇ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲ. ಖಾಸಗಿ ಕಾಲೇಜುಗಳಲ್ಲಿ ಡೋನೆಷನ್ ಕೊಟ್ಟು ಕಲಿಯುವದಂತೂ ನಮ್ಮ ಜಿಲ್ಲೆಯ ಬಡ ಜನಗಳಿಗೆ, ರೈತ ಮತ್ತು ಕೂಲಿಕಾರ್ಮಿಕರ ಮಕ್ಕಳಿಗೆ ಖಂಡಿತ ಸಾಧ್ಯವಿಲ್ಲ. ಆದ್ದರಿಂದ ಸರ್ಕಾರವು ವಿಶೇಷ ಮುತುವರ್ಜಿವಹಿಸಿ ವಿಜಯಪುರ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮೀನಾಕ್ಷಿ, ವಿದ್ಯಾ, ಮಾಹೇರಾ, ವರದಾ, ಅಲೀಶಾ, ಅರ್ಪಿತಾ ಹಾಗೂ ಇನ್ನೀತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.