ADVERTISEMENT

ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಅವಘಡ: ಇಬ್ಬರು ಸಾವು

ವಿಜಯಪುರ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2021, 14:32 IST
Last Updated 8 ಸೆಪ್ಟೆಂಬರ್ 2021, 14:32 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ವಿಜಯಪುರ: ನಗರದ ಹೊರ ವಲಯದ ಇಂಡಿ ರಸ್ತೆಯಲ್ಲಿರುವ ವಿಜಯಪುರ ಮಹಾನಗರ ಪಾಲಿಕೆ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬುಧವಾರ ಮಧ್ಯಾಹ್ನ ತ್ಯಾಜ್ಯ ವಿಲೇವಾರಿ ಯಂತ್ರವೊಂದನ್ನು ದುರಸ್ತಿ ಮಾಡುವಾಗ ಇಬ್ಬರು ಪೌರ ಕಾರ್ಮಿಕರು ಆಕಸ್ಮಿಕವಾಗಿ ಸಾವಿಗೀಡಾಗಿದ್ದಾರೆ.

ಮಹಾ ನಗರ ಪಾಲಿಕೆ ಕಾಯಂ ಪೌರಕಾರ್ಮಿಕ ರಫೀಕ್ ಬಾಬುಸಾಬ್‌(41) ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಅಯೂಬ್ ಶೇಖ್‌ (55) ಸಾವಿಗೀಡಾದವರು ಎಂದು ಗುರುತಿಸಲಾಗಿದೆ.

ತ್ಯಾಜ್ಯ ವಿಲೇವಾರಿ ಘಟಕದ ‘ಸ್ಕಿಡ್‌ ರೋಲರ್‌ ಮಷಿನ್‌’ ರಿಪೇರಿ ಮಾಡುವಾಗ ಈ ದುರ್ಘಟನೆ ನಡೆದಿದ್ದು, ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ADVERTISEMENT

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಮಹಾನಗರ ಪಾಲಿಕೆ ಆಯುಕ್ತ ವಿಜಯ್‌ ಮೆಕ್ಕಳಕಿ, ಕಾಯಂ ಪೌರಕಾರ್ಮಿಕ ರಫೀಕ್‌ ಬಾಬುಸಾಬ್‌ ಅವರಿಗೆ ಸರ್ಕಾರದಿಂದ ಲಭಿಸುವ ಎಲ್ಲ ಪರಿಹಾರದ ಜೊತೆಗೆ ಕುಟುಂಬದ ಸದಸ್ಯರೊಬ್ಬರಿಗೆ ಕೆಲಸ ನೀಡಲಾಗುವುದು. ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ ಚಾಲಕನ ಕುಟುಂಬಕ್ಕೆ ₹ 2 ಲಕ್ಷ ಪರಿಹಾರ ನೀಡಲಾಗುವುದು’ ಎಂದು ತಿಳಿಸಿದರು.

ದುರಂತ ನಡೆದಿರುವುದು ತುಂಬಾ ಬೇಸರದ ಸಂಗತಿ. ಇಂತಹ ಘಟನೆ ನಡೆಯಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.