ADVERTISEMENT

ನಗರದ ಅಭಿವೃದ್ಧಿಗೆ ಶ್ರಮಿಸುವೆ: ಡಾ.ಸಂಬಣ್ಣಿ

ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ.ಸಂಬಣ್ಣಿ ಪದಗ್ರಹಣ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 2:40 IST
Last Updated 7 ಫೆಬ್ರುವರಿ 2026, 2:40 IST
   

ವಿಜಯಪುರ: ‘ಸಚಿವರು, ಪಕ್ಷದ ವರಿಷ್ಠರು, ಜಿಲ್ಲಾ ಮುಖಂಡರು ನನ್ನ ಮೇಲೆ ಇಟ್ಟ ಭರವಸೆಯನ್ನು ಉಳಿಸಿಕೊಳ್ಳುತ್ತೇನೆ. ನಗರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಎಲ್ಲರಿಗೂ  ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ’ ಎಂದು ವಿಡಿಎ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಡಾ.ಗಂಗಾಧರ ಸಂಬಣ್ಣಿ ಹೇಳಿದರು.

ನಗರದಲ್ಲಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ‘ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ನನ್ನ ಮೇಲೆ ವಿಶ್ವಾಸವಿಟ್ಟು ಈ ಸ್ಥಾನಕ್ಕೆ ನೇಮಿಸಿದ್ದಾರೆ. ಅವರ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಋಣಿ’ ಎಂದರು.

ವಿಧಾನ ಪರಿಷತ್‌ ಸದಸ್ಯ ಸುನೀಲಗೌಡ ಬಿ.ಪಾಟೀಲ, 27 ವರ್ಷಗಳ ಕಾಲ ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಮತ್ತು ಎಲ್ಲ ಹಂತದ ಚುನಾವಣೆಗಳಲ್ಲಿ ಸಕ್ರಿಯವಾಗಿ ಭಾಗಿ ಆಗಿರುವ ಡಾ.ಗಂಗಾಧರ ಸಂಬಣ್ಣಿ ಅವರ ಸೇವೆ ಗುರುತಿಸಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದರು.

ADVERTISEMENT

ಸಚಿವ ಎಂ.ಬಿ.ಪಾಟೀಲ ಅವರ ನೇತೃತ್ವದಲ್ಲಿ ನಾನು ಮತ್ತು ಶಾಸಕ ವಿಠ್ಠಲ ಕಟಕದೊಂಡ, ಲೋಕಸಭಾ ಅಭ್ಯರ್ಥಿ ಪ್ರೊ.ರಾಜು ಆಲಗೂರ, ಮುಖಂಡ ಹಮೀದ ಮುಶ್ರಿಫ್ ಅವರು ಡಾ.ಗಂಗಾಧರ ಸಂಬಣ್ಣಿ ಅವರನ್ನೇ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೆವು. ಮನವಿಗೆ ಸ್ಪಂದಿಸಿದ ಸಿ.ಎಂ ಡಾ.ಗಂಗಾಧರ ಸಂಬಣ್ಣಿ ಅವರನ್ನು ವಿಡಿಎ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ ಎಂದರು.

ರಾಜಕೀಯದಲ್ಲಿ ಏರಿಳಿತ ಕಂಡಿದ್ದರೂ ಪಕ್ಷವನ್ನು ತೊರೆಯದೇ ನಿಷ್ಠಾವಂತ ಕಾರ್ಯಕರ್ತರಾಗಿ ಡಾ.ಗಂಗಾಧರ ಸಂಬಣ್ಣಿ ಕಾಂಗ್ರೆಸ್ ಏಳಿಗೆಗೆ ಸೇವೆ ಸಲ್ಲಿಸುತ್ತಿದ್ದಾರೆ.
- ಸುನೀಲಗೌಡ ಬಿ.ಪಾಟೀಲ, ವಿಧಾನ ಪರಿಷತ್‌ ಸದಸ್ಯ 

ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಮಾತನಾಡಿ, ಮುಂಬರುವ ಗ್ರಾಮ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಬಲವರ್ಧನೆಗೆ ಮತ್ತಷ್ಟು ಶ್ರಮಿಸಲಿ ಎಂದು ಶುಭ ಹಾರೈಸಿದರು.

ಮಾಜಿ ಶಾಸಕ ಪ್ರೊ.ರಾಜು ಆಲಗೂರ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ  ಸಂಗಮೇಶ ಬಬಲೇಶ್ವರ, ಹಮೀದ್‌ ಮುಶ್ರಿಫ್, ವಿಡಿಎ ಮಾಜಿ ಅಧ್ಯಕ್ಷ ಕನ್ನಾನ ಮುಶ್ರಿಫ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರ ಬಕ್ಷಿ, ಡಾ.ಪ್ರಭುಗೌಡ ಪಾಟೀಲ, ಮೊಹಮ್ಮದ ರಫಿಕ ಟಪಾಲ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.