ವಿಜಯಪುರ: ಭಾರತ ಶ್ರೀಮಂತ ಸಂಸ್ಕೃತಿ ಪೋಷಿಸುತ್ತ ಸಾರ್ವತ್ರಿಕ ಮೌಲ್ಯಗಳನ್ನು ಜಗತ್ತಿಗೆ ಬಿತ್ತರಿಸುತ್ತಿದೆ. ಅಂತಹ ಮೌಲ್ಯಾಧಾರಿತ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಲು ಇಂದಿನ ಯುವ ಜನಾಂಗ ಹಿಂದೆಟು ಹಾಕುತ್ತಿರುವುದು ವಿಷಾದದ ಸಂಗತಿ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತರ ಫೆಡರೇಶನ್ ರಾಷ್ಟ್ರೀಯ ಅಧ್ಯಕ್ಷ ಜಾವೀದ್ ಜಮಾದಾರ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಫ್. ಆಯುರ್ವೇದ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ 2025ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪಾಶ್ಚಾತ್ಯ ಸಂಸ್ಕೃತಿಯ ಅತಿಯಾದ ವ್ಯಾಮೋಹದಿಂದ ಯುವಜನತೆ ನಮ್ಮ ಸಂಸ್ಕೃತಿಯ ಬಗ್ಗೆ ಒಲವು ಬೆಳೆಸಿಕೊಳ್ಳುತ್ತಿಲ್ಲ. ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಕರಣೆ ಮಾಡುವುದಕ್ಕಿಂತ ನಮ್ಮ ನೆಲದ ಭವ್ಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕು ಎಂದರು.
ಜಾನಪದ ಸಂಸ್ಕೃತಿ ಉಳಿಸಿ, ಬೆಳೆಸಲು ಪ್ರತಿಯೊಬ್ಬರು ಪಣತೊಡಬೇಕಾಗಿದೆ. ಜನಪದ ಕಲೆಗಳು ಮಾನವೀಯ ಸಂಬಂಧದ ಸರಪಳಿ ಜಾನಪದ ಕಲೆ ನಮ್ಮ ಪೂರ್ವಜರು ನೀಡಿದ ಅನುಪಮ ಕೊಡುಗೆ, ಯುವಜನರು ಕಲೆ, ಸಾಹಿತ್ಯ ಆರಾಧಕರಾಗಿರಬೇಕು ಹಾಗೂ ಸಾಂಸ್ಕೃತಿಕ ರಾಯಭಾರಿಗಳಾಗಿ ತನ್ಮೂಲಕ ದೇಶದ ಕೀರ್ತಿ ಬೆಳೆಸಬೇಕು ಎಂದರು.
ಅರವಿಂದ ಕೊಪ್ಪ ಮಾತನಾಡಿ, ವಿಜಯಪುರ ಜಿಲ್ಲೆ ಜನಪದ ಕಲೆಗಳ ತವರೂರು. ಇಲ್ಲಿನ ಯುವಕ, ಯುವತಿಯರು ಜನಪದ ಕಲೆಗಳನ್ನು ಪ್ರೀತಿಸಬೇಕು. ಯುವಜನರು ಮನಸ್ಸು ಮಾಡಿದರೆ ದೇಶದ ಚಿತ್ರಣವನ್ನೇ ಬದಲಿಸಬಹುದು. ಬದಲಾದ ಜೀವನ ಶೈಲಿ ಒತ್ತಡಗಳಿಂದ ಜೀವನ ಮೌಲ್ಯಗಳು ಅಪಾಯದ ಅಂಚಿಗೆ ಸರಿಯುತ್ತಿದೆ. ಯುವಜನರು ಸಾಂಸ್ಕೃತಿಕವಾಗಿ ವಿಮುಖರಾಗಬಾರದು ಎಂದರು.
ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಅಶೋಕ ಪಾಟೀಲ ಮಾತನಾಡಿ, ನಮ್ಮ ಸಂಸ್ಕೃತಿ ಬಗ್ಗೆ ಒಲವು ಬೆಳೆಸಿಕೊಳ್ಳಬೇಕು. ಜನಪದ ಕಲಿಕೆಗಾಗಿ ಹೆಚ್ಚಿನ ಒತ್ತನ್ನು ನೀಡಬೇಕಾಗಿದೆ. ಯುವಕರಿಗೆ ಶಿಕ್ಷಣದ ಜೊತೆಗೆ ಸಂಸ್ಕೃತಿ, ಕ್ರೀಡೆ, ಜೀವನ ಮೌಲ್ಯಗಳ ಬಗ್ಗೆ ಹೆಚ್ಚಿನ ಒತ್ತನ್ನು ನೀಡಬೇಕಾಗಿದೆ. ಶಾಲಾ ಕಾಲೇಜುಗಳಲ್ಲಿ ನಮ್ಮ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕಿದೆ ಎಂದರು.
ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಸಂಜು ಕೋತ, ಎಕ್ಸಲೆಂಟ್ ಕಾಲೇಜಿನ ಪ್ರಾಚಾರ್ಯ ಶ್ರೀಕಾಂತ, ಡಾ. ಡಿ.ಎನ್. ಧರಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.