ವಿಜಯಪುರ: ಜಿಲ್ಲೆಯ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಅವರನ್ನು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆಯ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಲಿಂಗಾಯತ ಪಂಚಮಸಾಲಿ ಸಮಾಜದ ಪ್ರಭಾವಿ ಮುಖಂಡರಾಗಿರುವ ವಿಜುಗೌಡ ಪಾಟೀಲ ಅವರು ಬಸವನ ಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಅವರ ಸಹೋದರರಾಗಿದ್ದಾರೆ.
ಬಬಲೇಶ್ವರ ವಿಧಾನಸಭಾ ಕ್ಷೇತ್ರದಿಂದ 2008 ಮತ್ತು 2013ರಲ್ಲಿ ಜೆಡಿಎಸ್ನಿಂದ ಹಾಗೂ 2018ರಲ್ಲಿ ಬಿಜೆಪಿಯಿಂದ ಕಾಂಗ್ರೆಸ್ನ ಎಂ.ಬಿ.ಪಾಟೀಲ ವಿರುದ್ಧ ವಿಜುಗೌಡ ಸ್ಪರ್ಧಿಸಿ, ಜಿದ್ದಾಜಿದ್ದಿನ ಹೋರಾಟದಲ್ಲಿ ಪರಾಭವಗೊಂಡಿದ್ದಾರೆ.
ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆಯ ಅಧ್ಯಕ್ಷರಾಗಿ ನೇಮಕವಾದ ಬಳಿಕ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಪರಾಜಿತ ಅಭ್ಯರ್ಥಿಯನ್ನು ಮುಖ್ಯಮಂತ್ರಿಯವರು ಗುರುತಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಯಡಿಯೂರಪ್ಪ ಸರ್ಕಾರದಲ್ಲಿ ಪ್ರಾಮಾಣಿಕರಿಗೆ ಅವಕಾಶ ಸಿಗುತ್ತದೆ ಎಂಬುದಕ್ಕೆ ನನ್ನ ನೇಮಕವೇ ಸಾಕ್ಷಿ’ ಎಂದರು.
‘ರಾಜ್ಯ ಹಾಗೂ ಜಿಲ್ಲೆಯ ರೈತರ ಪರ ಪ್ರಾಮಾಣಿಕ ಕೆಲಸ ಮಾಡುವ ಮೂಲಕ ಪಕ್ಷಕ್ಕೆ, ಸರ್ಕಾರಕ್ಕೆ ಹೆಸರು ತರುತ್ತೇನೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.