ADVERTISEMENT

ಉದ್ಯಮಶೀಲತಾ ಅಭಿವೃದ್ಧಿ ತರಬೇತಿ

​ಪ್ರಜಾವಾಣಿ ವಾರ್ತೆ
Published 3 ಜುಲೈ 2012, 5:50 IST
Last Updated 3 ಜುಲೈ 2012, 5:50 IST

ಯಾದಗಿರಿ:  ಜವಳಿ ಉದ್ಯಮದಲ್ಲಿ ನಾನಾ ಯೋಜನೆಗಳು ಅನುಷ್ಠಾನಗೊಳ್ಳುತ್ತಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಜವಳಿ ಇಲಾಖೆ ಹಮ್ಮಿಕೊಂಡಿದೆ. ಜಿಲ್ಲೆಯ ಜನರು ಈ ಕಾರ್ಯಕ್ರಮಗಳ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಗುರುನೀತ ತೇಜ್ ಮೆನನ್ ಸಲಹೆ ನೀಡಿದರು.

ಕೈಮಗ್ಗ ಮತ್ತ ಜವಳಿ ಇಲಾಖೆ, ಜಿಲ್ಲಾ ಪಂಚಾಯಿತಿಗಳ ಆಶ್ರಯದಲ್ಲಿ ಸೋಮವಾರ ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಈ ಕಾರ್ಯಕ್ರಮಗಳ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯ ಎಂದ ಅವರು, ಜೀವನದಲ್ಲಿ ಪ್ರಗತಿ ಸಾಧಿಸಲು ಸತತ ಪರಿಶ್ರಮ ಅವಶ್ಯಕ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಉಡುಪು ನೀತಿ ಯೋಜನಾ ನಿರ್ದೇಶಕ ವಿಜಯಕುಮಾರ ನಿರಾಣಿ ಮಾತನಾಡಿ, ಜವಳಿ ಉದ್ಯಮದ ಬೆಳವಣಿಗೆ ಹಾಗೂ ಜವಳಿ ಉದ್ಯಮಗಳ ಸ್ಥಾಪನೆಗೆ ಪ್ರೋತ್ಸಾಹ, ಪ್ರಾಂತೀಯ ಬೆಳವಣಿಗೆಗಳ ಉದ್ದೇಶದಿಂದ ಸುವರ್ಣ ವಸ್ತ್ರ ನೀತಿ ಜಾರಿಗೆ ತರಲಾಗಿದೆ. ಇದರಿಂದ ಉದ್ಯೋಗಾಕಾಶಗಳು ಹೆಚ್ಚಾಗಲಿದ್ದು, ಇದರ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.

ಸಣ್ಣ ಮತ್ತು ಮಧ್ಯಮ ಜವಳಿ ಉದ್ಯಮ ಸ್ಥಾಪಿಸುವ ಉದ್ದಿಮೆದಾರರಿಗೆ ಸುವರ್ಣ ವಸ್ತ್ರ ನೀತಿಯಡಿಯಲ್ಲಿ ಇಲಾಖೆಯಿಂದ ದೊರಕುವ ಸೌಲಭ್ಯ ಹಾಗೂ ರಾಜ್ಯದ ಜವಳಿ ವಲಯದಲ್ಲಿನ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ 6 ದಿನಗಳ ಅವಧಿಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಎಚ್.ಡಿ.ಎಫ್.ಸಿ ಬ್ಯಾಂಕ್ ವ್ಯವಸ್ಥಾಪಕ ರಾಜು, ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ಧನಂಜಯ ಒಡೆಯರ, ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕ ಶಿವರಾಜ ಕುಲಕರ್ಣಿ, ಜವಳಿ ತನಿಖಾಧಿಕಾರಿ ಜಯಚಂದ್ರ ಪಾಟೀಲ ಮುಂತಾದವರು ವೇದಿಕೆಯಲ್ಲಿದ್ದರು. 

 ನೂರಾರು ಜನರು ತರಬೇತಿಯಲ್ಲಿ ಪಾಲ್ಗೊಂಡಿದ್ದರು. ರಶ್ಮಿ ಮತ್ತು ಸುಹಾಸಿನಿ ಪಾರ್ಥಿಸಿದರು. ಮಲ್ಲಯ್ಯಸ್ವಾಮಿ ಇಟಗಿ ಸ್ವಾಗತಿಸಿದರು. ರಂಗನಾಥ ರಾಜು ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.