ಯಾದಗಿರಿ: ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿಯುವ ಹಂತದಲ್ಲಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆಗಳಿಗೆ ದಿನಗಣನೆ ಆರಂಭವಾಗಿದೆ. ಮಾ.28 ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿಯಾದರೂ, ಜಿಲ್ಲೆಯ ಫಲಿತಾಂಶ ಸುಧಾರಣೆ ಆಗಲಿದೆಯೇ ಎನ್ನುವ ಜಿಜ್ಞಾಸೆ ಪಾಲಕರನ್ನು ಕಾಡುತ್ತಿದೆ.
ಹಲವಾರು ಕೊರತೆಗಳನ್ನು ಎದುರಿಸುತ್ತಿರುವ ಸಾರ್ವಜನಿಕ ಶಿಕ್ಷಣ ಇಲಾಖೆಗೆ, ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಯು ಒಂದು ಸವಾಲಾಗಿ ಪರಿಣಮಿಸಿದ್ದು, ಕೊರತೆಗಳ ಮಧ್ಯೆಯೂ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಸುಧಾರಿಸಲು ಶಿಕ್ಷಣ ಇಲಾಖೆ ವಿಶೇಷ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು,13 ಅಂಶಗಳ ಕಾರ್ಯಕ್ರಮ ಇದಾಗಿದೆ.
ಪ್ರತಿ ಬಾರಿಯೂ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾದಾಗ ಜಿಲ್ಲೆಯ ಜನರು ನಿರಾಸೆ ಅನುಭವಿಸುವುದು ಸಾಮಾನ್ಯ ಎನ್ನುವಂತಾಗಿದೆ. ಫಲಿತಾಂಶದಲ್ಲಿ ಜಿಲ್ಲೆಯು ಕೊನೆಯ ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವಂತಾಗಿದೆ. ಈ ಬಾರಿಯಾದರೂ ಮೊದಲ 10 ಸ್ಥಾನಗಳಲ್ಲಿ ಜಿಲ್ಲೆಯ ಹೆಸರು ಇರಲಿದೆಯೇ ಎನ್ನುವ ಪ್ರಶ್ನೆ ಮಾತ್ರ ಫಲಿತಾಂಶ ಬಂದ ನಂತರವಷ್ಟೇ ಉತ್ತರ ದೊರೆಯಲಿದೆ.
ಎಸ್ಸೆಸ್ಸೆಲ್ಸಿಯಲ್ಲಿ ಕಳೆದ ವರ್ಷ ಜಿಲ್ಲೆಯ ಸಾಧನೆ ತಪ್ತಿಕರವಾಗಿತ್ತು. ಶೇ 72 ರಷ್ಟು ಫಲಿತಾಂಶ ಪಡೆಯುವ ಮೂಲಕ ಜಿಲ್ಲೆಯು ಗಮನಾರ್ಹ ಸಾಧನೆಯನ್ನು ಮಾಡಿತ್ತು. ಈ ಬಾರಿ ಅದಕ್ಕಿಂತ ಹೆಚ್ಚಿನ ಫಲಿತಾಂಶ ಪಡೆಯಲು ಕೆಲವೊಂದು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.
13 ಅಂಶಗಳ ಕಾರ್ಯಕ್ರಮಗಳನ್ನು ಈ ಶೈಕ್ಷಣಿಕ ವರ್ಷದಲ್ಲಿ ಜಾರಿಗೆ ತಂದಿದ್ದು, ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಿದ್ಧ ಮಾಡಲಾಗಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ತರಬೇತಿಗೊಳಿಸುವ ಕಾರ್ಯವೂ ಇದರಲ್ಲಿ ಸೇರಿದೆ.
ಈಗಾಗಲೇ ಶಿಕ್ಷಕರಿಗೆ ಕಾರ್ಯಾಗಾರಗಳನ್ನು ಏರ್ಪಡಿಸುವ ಮೂಲಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಬೋಧನೆ ಮಾಡುವ ಬಗೆಯನ್ನು ವಿವರಿಸಲಾಗಿದೆ. ಅಲ್ಲದೇ ಸರಣಿ ಪರೀಕ್ಷೆಗಳನ್ನು ಏರ್ಪಡಿಸುವ ಮೂಲಕ ವಿದ್ಯಾರ್ಥಿಗಳ ಸಾಮರ್ಥ್ಯವನ್ನೂ ಅಳೆಯಲಾಗಿದೆ. ಸರಣಿ ಪರೀಕ್ಷೆಗಳಲ್ಲಿ ಕಡಿಮೆ ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಇದರಿಂದ ಹಿಂದುಳಿದ ಮಕ್ಕಳೂ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಅನುಕೂಲ ಆಗುವಂತೆ ನೋಡಿಕೊಳ್ಳಲಾಗಿದೆ.
ಇನ್ನೊಂದೆಡೆ ಪರೀಕ್ಷೆಯಲ್ಲಿ ಫಲಿತಾಂಶ ಕಡಿಮೆ ಬರುವುದಕ್ಕೆ ವಿದ್ಯಾರ್ಥಿಗಳ ಗೈರು ಹಾಜರಿಯೂ ಬಹುದೊಡ್ಡ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಿಸುವ ನಿಟ್ಟಿನಲ್ಲೂ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಎಸ್ಸೆಸ್ಸೆಲ್ಸಿ ನೊಡೆಲ್ ಅಧಿಕಾರಿಯಾಗಿರುವ ವಿಷಯ ಪರಿವೀಕ್ಷಕ ಟಿ.ರಾಮಲಿಂಗಪ್ಪ ಹೇಳುತ್ತಾರೆ.
ಅಲ್ಲದೇ ವಿದ್ಯಾರ್ಥಿಗಳಿಗೆ ವರ್ಕ್ ಬುಕ್ಗಳನ್ನು ನೀಡುವ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸುಲಭವಾಗಿ ಉತ್ತರ ಪತ್ರಿಕೆ ಬಿಡಿಸುವುದನ್ನು ಹೇಳಿಕೊಡಲಾಗಿದೆ. ಇಂತಹ ಹಲವಾರು ಕಾರ್ಯಕ್ರಮಗಳ ಮೂಲಕ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸುತ್ತಾರೆ.
39 ಕೇಂದ್ರ: 10,245 ವಿದ್ಯಾರ್ಥಿಗಳು
ಯಾದಗಿರಿ: ಜಿಲ್ಲೆಯಾದ್ಯಂತ 39 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, 10,245 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಯಾದಗಿರಿ ತಾಲ್ಲೂಕಿನಲ್ಲಿ 16, ಸುರಪುರ ತಾಲ್ಲೂಕಿನಲ್ಲಿ 12 ಹಾಗೂ ಶಹಾಪುರ ತಾಲ್ಲೂಕಿನಲ್ಲಿ 11 ಪರೀಕ್ಷಾ ಕೇಂದ್ರಗಳನ್ನು ಆರಂಭಿಸಲಾಗಿದೆ. 10,245 ವಿದ್ಯಾರ್ಥಿಗಳಲ್ಲಿ 750 ಖಾಸಗಿ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ.
ತಾಲ್ಲೂಕು ಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತನಿಖಾ ತಂಡ ಹಾಗೂ ಆಯಾ ತಾಲ್ಲೂಕುಗಳಲ್ಲಿ ಸ್ಥಾನಿಕ ಜಾಗೃತ ದಳ ನೇಮಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಟಿ. ರಾಮಲಿಂಗಪ್ಪ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.