ADVERTISEMENT

`ಡೆಂಗೆ ನಿಯಂತ್ರಣಕ್ಕೆ ಸ್ವಚ್ಛತೆ ಕಾಪಾಡಿ'

​ಪ್ರಜಾವಾಣಿ ವಾರ್ತೆ
Published 4 ಜೂನ್ 2013, 10:13 IST
Last Updated 4 ಜೂನ್ 2013, 10:13 IST

ಯಾದಗಿರಿ: ರಾಜ್ಯದಾದ್ಯಂತ ಹರಡುತ್ತಿರುವ ಡೆಂಗೆ ಜ್ವರದ ಬಗ್ಗೆ ಎಚ್ಚರ ವಹಿಸಬೇಕು. ಈ ರೋಗಕ್ಕೆ ಕಾರಣವಾಗಿರುವ ಸೊಳ್ಳೆಯ ನಿಯಂತ್ರಣಕ್ಕಾಗಿ ನೀರಿನ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ ತಿಳಿಸಿದರು. ಸೋಮವಾರ ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಡೆಂಗೆ ಜ್ವರ ಮುನ್ನೆಚ್ಚರಿಕೆ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡೆಂಗೆ ಜ್ವರವು ವೈರಸ್‌ನಿಂದ ಉಂಟಾಗುವ ಕಾಯಿಲೆ. ಸೋಂಕು ಹೊಂದಿದ ಈಡಿಸ್ ಇಜಿಪ್ಟೈ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸಾಮಾನ್ಯವಾಗಿ ಈ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಸಂತನಾಭಿವೃದ್ಧಿ ಮಾಡುವ ಹಿನ್ನೆಲೆಯಲ್ಲಿ, ಎಲ್ಲರೂ ನೀರಿನ ಸ್ವಚ್ಛತೆ ಬಗ್ಗೆ ಜಾಗೃತಿ ವಹಿಸುವಂತೆ ತಿಳಿಸಿದರು.

ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಜಾಗೃತಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು.
ಡೆಂಗೆ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇಲ್ಲವಾದ್ದರಿಂದ ಈ ರೋಗದ ಲಕ್ಷಣ ಕಂಡು ಬಂದ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಬೇಕು. ಈ ರೋಗದ ಹತೋಟಿಗೆ ನೀರು ಶೇಖರಿಸುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್, ಬ್ಯಾರಲ್, ಮಣ್ಣಿನ ಮಡಿಕೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಿಬೇಕು. ಸಾರ್ವಜನಿಕರು ಮತ್ತು ಅಧಿಕಾರಿಗಳು ಈ ಕುರಿತು ಎಚ್ಚರ ವಹಿಸಲು ಸಲಹೆ ನೀಡಿದರು.

ಡೆಂಗೆ ಜ್ವರದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಲ್ಲಿಕಾರ್ಜನ ಮುಕ್ಕಾ, ಡೆಂಗೆ ಜ್ವರ ನಿಯಂತ್ರಣಕ್ಕೆ ನೀರು ಶೇಖರಣಾ ತೊಟ್ಟಿಗಳನ್ನು ಭದ್ರವಾಗಿ ಮುಚ್ಚಬೇಕು. ಜಿಲ್ಲೆಯಲ್ಲಿ ಕಳೆದ ವರ್ಷ 15 ಪ್ರಕರಣಗಳು ಪತ್ತೆಯಾಗಿದ್ದವು.
ಈ ವರ್ಷ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ. ಈ ರೋಗ ನಿಯಂತ್ರಣಕ್ಕೆ ಎಲ್ಲರೂ ನೀರಿನ ಸ್ವಚ್ಛತೆ ಮತ್ತು ಪರಿಸರ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡುವಂತೆ ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಎ. ಜಿಲಾನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕಷ್ಣ, ಆರೋಗ್ಯ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.