ADVERTISEMENT

`ನವೆಂಬರ್‌ನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ'

​ಪ್ರಜಾವಾಣಿ ವಾರ್ತೆ
Published 18 ಜುಲೈ 2013, 7:14 IST
Last Updated 18 ಜುಲೈ 2013, 7:14 IST

ಯಾದಗಿರಿ: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರಥಮ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜಿಲ್ಲಾ ಕೇಂದ್ರದಲ್ಲಿ ನವೆಂಬರ್‌ನಲ್ಲಿ ಆಯೋಜಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ಧಪ್ಪ ಹೊಟ್ಟಿ ಹೇಳಿದರು.

ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಾದಗಿರಿ ಜಿಲ್ಲೆಯಾದ ನಂತರ ಮೊದಲ ಬಾರಿಗೆ ಈ ಸಮ್ಮೇಳನವನ್ನು ಆಯೋಜಿಸುತ್ತಿದ್ದು, ಸಂಭ್ರಮ ಹಾಗೂ ಅದ್ಧೂರಿಯಾಗಿ ಆಯೋಜಿಸುವ ನಿರ್ಧಾರ ಹೊಂದಿದ್ದೇವೆ.

ಈ ಮೊದಲು ಸಾಹಿತ್ಯ ಸಮ್ಮೇಳನ ಆಯೋಜಿಸುವ ಉದ್ದೇಶ ಹೊಂದಿದ್ದರೂ, ಸಮಯದ ಅಭಾವ ಹಾಗೂ ಚುನಾವಣೆಗಳ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಇದುವರೆಗೂ ಸಮ್ಮೇಳನ ಆಯೋಜಿಸುವ ಕುರಿತು ಪ್ರಸ್ತಾಪಿಸಿರಲಿಲ್ಲ ಎಂದರು.

ನವೆಂಬರ್ ತಿಂಗಳು ನಾಡಿನಾದ್ಯಂತ ಕನ್ನಡದ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿದ್ದು, ನವೆಂಬರನಲ್ಲೇ ಜಿಲ್ಲಾ ಸಮ್ಮೇಳನ ಆಯೋಜಿಸುವ ಮೂಲಕ ಸಮ್ಮೇಳನವನ್ನು ಅಭೂತಪೂರ್ವಕವಾಗಿ ನಡೆಸುವ ಗುರಿ ಜಿಲ್ಲಾ ಘಟಕದ್ದಾಗಿದೆ. ಬರುವ ಡಿಸೆಂಬರ್ ಅಥವಾ ಜನವರಿಯಲ್ಲಿ ಜಿಲ್ಲೆಯ ಶಹಾಪುರ ಹಾಗೂ ಸುರಪುರ ತಾಲ್ಲೂಕುಗಳಲ್ಲೂ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸುವಂತೆ ತಾಲ್ಲೂಕು ಘಟಕದ ಅಧ್ಯಕ್ಷರಿಗೆ ತಿಳಿಸಿದರು.

ಜಿಲ್ಲಾ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಪೂರಕವಾಗಿ ಕೂಡಲೇ ಕಾರ್ಯ ಪ್ರವೃತ್ತರಾಗುವಂತೆ ಪದಾಧಿಕಾರಿಗಳಿಗೆ ತಿಳಿಸಿದರು.ಸಮ್ಮೇಳನವನ್ನು ಜಿಲ್ಲಾ ಕೇಂದ್ರದಲ್ಲಿ, ನವೆಂಬರ್ ತಿಂಗಳಲ್ಲಿ ಆಯೋಜಿಸುವ ಜಿಲ್ಲಾ ಘಟಕದ ಅಧ್ಯಕ್ಷರ ಹೇಳಿಕೆಗೆ ಕಾರ್ಯಕಾರಿ ಮಂಡಳಿ ಸಂಪೂರ್ಣವಾಗಿ ಒಪ್ಪಿಗೆ ನೀಡಿತು.

ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಡಾ.ಸುಭಾಷಚಂದ್ರ ಕೌಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರವ ಕಾರ್ಯದರ್ಶಿ ಪ್ರಕಾಶ ಅಂಗಡಿ ಕನ್ನಳ್ಳಿ ನಿರೂಪಿಸಿದರು. ಕೋಶಾಧ್ಯಕ್ಷ ಬಸವರಾಜ ಮೋಟ್ನಳ್ಳಿ ಸ್ವಾಗತಿಸಿದರು. ದೇವರಾಜ ವರ್ಕನಳ್ಳಿ ವಂದಿಸಿದರು.

ಶಹಾಪುರ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ಲಿಂಗಣ್ಣ ಆನೇಗುಂದಿ, ಸುರಪುರ ತಾಲ್ಲೂಕು ಘಟಕದ ಅಧ್ಯಕ್ಷ ಶಾಂತಪ್ಪ ಬೂದಿಹಾಳ, ಯಾದಗಿರಿ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ ಕರ್ಲಿ, ಪರಿಷತ್ತಿನ ಪದಾಧಿಕಾರಿಗಳಾದ ಅಯ್ಯಣ್ಣ ಹುಂಡೇಕಾರ್, ವಿ.ಸಿ.ರೆಡ್ಡಿ ಬಸವಂತರಾಯ ಗೌಡ ಮಾಲೀಪಾಟೀಲ್, ಆರ್.ಮಹಾದೇವಪ್ಪ ಅಬ್ಬೆತುಮಕೂರು, ಲಿಂಗಣ್ಣ ಪಡಿಶೆಟ್ಟಿ, ನೂರಂದಪ್ಪ, ಚನ್ನಪ್ಪ, ಭಾಗ್ಯವತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT