ADVERTISEMENT

ನೈರ್ಮಲ್ಯ ಕಾಪಾಡಲು ಅರಿವು ಅವಶ್ಯ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2012, 6:00 IST
Last Updated 19 ಅಕ್ಟೋಬರ್ 2012, 6:00 IST

ಯಾದಗಿರಿ: ನಗರದಲ್ಲಿ ನೈರ್ಮಲ್ಯ ಕಾಪಾಡುವುದರ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯ ಎಂದು ಸಂಪನ್ಮೂಲ ವ್ಯಕ್ತಿ ಎಸ್.ಡಿ. ಕುಣಚಿ ಹೇಳಿದರು.ಗುರುವಾರ ನಗರಸಭೆ ಸಭಾಂಗಣದಲ್ಲಿ ನಗರ ನೈರ್ಮಲೀಕರಣ ಯೋಜನೆ ಅನುಷ್ಠಾನ, ತಿಳಿವಳಿಕೆ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಅವರು  ಮಾತನಾಡಿದರು.

ಮನೆ, ಪರಿಸರ ಸ್ವಚ್ಛವಾಗಿ ಇಟ್ಟುಕೊಂಡರೆ ರೋಗರುಜಿನುಗಳು ಬರುವುದಿಲ್ಲ. ಮನುಷ್ಯ ತನ್ನ ದೇಹವನ್ನು ಎಷ್ಟು ಸ್ವಚ್ಛವಾಗಿ ಇಟ್ಟು ಕೊಳ್ಳುತ್ತಾನೋ, ಅದರಂತೆ ಸುತ್ತಲಿನ ಪ್ರದೇಶಕ್ಕೂ ಸ್ವಚ್ಛತೆ ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಗರ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಲು ಅನೇಕ ಯೋಜನೆಗಳನ್ನು ಜಾರಿಗೆ ತಂದು ಕೋಟ್ಯಂತರ ಖರ್ಚು ಮಾಡುತ್ತಿದೆ. ಸ್ವಚ್ಛತೆಯ ಬಗ್ಗೆ ಜನರಲ್ಲಿ ತಿಳಿವಳಿಕೆ ಕೊರತೆಯಿಂದ ಸಂಪೂರ್ಣ ನೈರ್ಮಲ್ಯ ಸಾಧಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. 

ರಾಜ್ಯದ ಪ್ರಮುಖ 7 ನಗರದಲ್ಲಿ ನಗರ ನೈರ್ಮಲೀಕರಣ ಯೋಜನೆ ಜಾರಿಗೊಳಿಸಲಾಗಿದೆ. ಶೇ. 60 ರಷ್ಟು ಕೇಂದ್ರ ಸರ್ಕಾರ ಹಾಗೂ ಶೇ. 40 ರಷ್ಟು ಅನುದಾನವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ತಿಳಿದರು.
 
ಈ ಯೋಜನೆಗಳ ಬಗ್ಗೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಮತ್ತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿ ಯೋಜನಾ ವರದಿ ಸಿದ್ಧಪಡಿಸಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಅಗತ್ಯ ಅನುದಾನ ಬಿಡುಗಡೆ ಆಗಲಿದೆ ಎಂದರು. ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ ಉದ್ಘಾಟಿಸಿದರು. ಪೌರಾಯುಕ್ತ ಮಹ್ಮದ್ ಮುನೀರ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜಯ ಕುಲಕರ್ಣಿ, ಉಪಾಧ್ಯಕ್ಷ ನರಸಿಂಗ ಲಿಂಗೇರಿ, ವ್ಯವಸ್ಥಾಪಕ ನೀಲಕಂಠರಾಯ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.