ಯಾದಗಿರಿ: ಶಹಾಪುರ ತಾಲ್ಲೂಕಿನ ಹಯ್ಯಾಳ(ಬಿ) ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ಬಾಲಕರ ವಸತಿ ನಿಲಯದ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಕರವೇ ಹೋಬಳಿ ಘಟಕದ ಅಧ್ಯಕ್ಷ ರವಿಕುಮಾರ ದೇವರಮನಿ, ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಈಚೆಗೆ ಮನವಿ ಸಲ್ಲಿಸಿದ್ದಾರೆ.
ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕುಡಿಯಲು ನೀರಿಲ್ಲ, ವಿದ್ಯುತ್ ವ್ಯವಸ್ಥೆ ಇಲ್ಲ, ಸರಿಯಾಗಿ ಊಟ ಕೊಡುವುದಿಲ್ಲ. ವೈದ್ಯಕೀಯ ಚಿಕಿತ್ಸೆ ಕೊಡಿಸುವುದಿಲ್ಲ, ವಾಚನಾಲಯದ ಸೌಲಭ್ಯವಿಲ್ಲ, ವಸತಿ ನಿಲಯದ ಮೇಲ್ವಿಚಾರಕರು ಬರುವುದೇ ಇಲ್ಲ. ಇದರಿಂದಾಗಿ ಭಯದ ನೆರಳಿನಲ್ಲಿ ವಿದ್ಯಾರ್ಥಿಗಳು ಕಾಲ ಕಳೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಸ್ನಾನಕ್ಕೆ ನೀರು ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಸಾರ್ವಜನಿಕ ಕೊಳವೆಬಾವಿಗೆ ಹೋಗಿ ಸ್ನಾನ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸಮಸ್ಯೆಗಳು ಇದ್ದರೂ ವಸತಿನಿಲಯದ ಮೇಲ್ವಿಚಾರಕರು ಕ್ರಮ ತೆಗೆದುಕೊಂಡಿಲ್ಲ. ಅವರನ್ನು ವರ್ಗಾವಣೆ ಮಾಡಿ, ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಒಂದು ವಾರದಲ್ಲಿ ಬಗೆಹರಿಸದಿದ್ದರೆ ಹೋಬಳಿ ಮತ್ತು ಗ್ರಾಮ ಘಟಕಗಳ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಕಾರ್ಯಕರ್ತರಾದ ಶರಣಗೌಡ ಪಾಟೀಲ, ಸುಪ್ರೀತ ಮಾಳಿಕೇರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.