ADVERTISEMENT

ಹೈ.ಕ. ಅಭಿವೃದ್ಧಿಗೆ ಇಚ್ಛಾಶಕ್ತಿ ಕೊರತೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2011, 9:35 IST
Last Updated 15 ಸೆಪ್ಟೆಂಬರ್ 2011, 9:35 IST

ಯಾದಗಿರಿ: ಹೈದರಾಬಾದ್ ನಿಜಾಮನ ಆಡಳಿತದಿಂದ ಮುಕ್ತಿ ಪಡೆದು ಆರು ದಶಕಗಳು ಕಳೆದರೂ ನಮಗೆ ನಿಜವಾದ ಸ್ವಾತಂತ್ರ್ಯ ಇನ್ನೂ ಬಂದಿಲ್ಲ. ಪ್ರಭಾವಿ ರಾಜಕಾರಣಿಗಳ ನಿರ್ಲಕ್ಷ್ಯ, ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಈ ಭಾಗದ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ ಎಂದು ನಗರಸಭೆ ಅಧ್ಯಕ್ಷೆ ನಾಗರತ್ನಾ ಅನಪೂರ ವಿಷಾದ ವ್ಯಕ್ತಪಡಿಸಿದರು.

ಜಿಲ್ಲಾಡಳಿತ ಹಾಗೂ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸಮಿತಿ ವತಿಯಿಂದ ನಗರದ ಡಾನ್ ಬಾಸ್ಕೋ ಸಂಸ್ಥೆಯಲ್ಲಿ ಸೋಮವಾರ ಏರ್ಪಡಿಸಿದ್ದ `ಅಂದಿನ ನಿಜಾಮ ಆಡಳಿತ: ಇಂದಿನ ಪ್ರಜಾಡಳಿತ~ ಕುರಿತ ವಿಚಾರ ಸಂಕಿರಣದಲ್ಲಿ ಅತಿಥಿಗಳಾಗಿ ಅವರು ಮಾತನಾಡಿದರು.

ಅಂದಿನ ಮಹನೀಯರ ತ್ಯಾಗ, ಬಲಿದಾನದ ಫಲವಾಗಿ ಹೈದರಾಬಾದ್ ಕರ್ನಾಟಕ ಪ್ರದೇಶ ಸ್ವಾತಂತ್ರ್ಯವಾಗಿದೆ. ಸರ್ದಾರ್ ವಲಭಭಾಯಿ ಪಟೇಲ್‌ರಂತದ ದಿಟ್ಟ ನಾಯಕರ ಗಟ್ಟಿ ನಿರ್ಧಾರದಿಂದಾಗಿ ಇಂದು ಸ್ವಾತಂತ್ರ್ಯದ ಸುಖವನ್ನು ಅನುಭವಿಸುತ್ತಿದ್ದೇವೆ. ಅದನ್ನು ಉಳಿಸಿಕೊಳ್ಳುವುದರ ಜೊತೆಗೆ ನಮ್ಮ ಭಾಗದ ಅಭಿವೃದ್ಧಿಗೆ ನಾವೇ ಸಿದ್ಧರಾಗಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಹೈದರಾಬಾದ್ ಕರ್ನಾಟಕದ ವಿಮೋಚನೆಗೆ ಕಾರಣೀಕರ್ತರಾದ ಸರ್ದಾರ್ ವಲಭಭಾಯಿ ಪಟೇಲ್‌ರ ಪುತ್ಥಳಿಯನ್ನು ನಗರದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಲಾಗಿದ್ದು, ಈ ಬಗ್ಗೆ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅಯ್ಯಣ್ಣ ಹುಂಡೇಕಾರ, ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಯ ಬಗ್ಗೆ ಈ ಭಾಗದ ಜನಪ್ರತಿನಿಧಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಲಹೆ ಮಾಡಿದರು.

ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ಧಾರೆಡ್ಡಿ ಬಲಕಲ್ ಅಧ್ಯಕ್ಷತೆ ವಹಿಸಿದ್ದರು. ಡಾನ್ ಬಾಸ್ಕೋ ಸಂಸ್ಥೆ ಆಡಳಿತಾಧಿಕಾರಿ ಫಾ.ಸನ್ನಿ, ಪತ್ರಕರ್ತರಾದ ಶೇಖರಗೌಡ ಬೆನಕನಹಳ್ಳಿ, ನಾರಾಯಣ ಹೆಗಡೆ, ರಾಜು ಹೆಂದೆ, ಉಪನ್ಯಾಸಕ ಭೀಮರಾಯ ಲಿಂಗೇರಿ ಮುಂತಾದವರು ವೇದಿಕೆಯಲ್ಲಿದ್ದರು.

ಕಮಲಾ ಮತ್ತು ಯಂಕಮ್ಮ ಪ್ರಾರ್ಥಿಸಿದರು. ಪ್ರಾಂಶುಪಾಲ ಸುರೇಶ ಬಾಬು ಸ್ವಾಗತಿಸಿದರು. ಉಪನ್ಯಾಸಕ ಅತೀಕ್ ಅಹ್ಮದ್ ನಿರೂಪಿಸಿದರು. ಉಪನ್ಯಾಸಕ ಅಂಬು ನಾಯಕ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.