ಹುಣಸಗಿ: ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಗೆ ನೀರು ಸ್ಥಗಿತಗೊಳಿಸಿದ್ದರಿಂದ ಬಹುತೇಕ ರೈತರಿಗೆ ತೊಂದರೆಯಾಗುತ್ತಿದೆ. ತಕ್ಷಣದಿಂದಲೇ ಕಾಲುವೆಗೆ ನೀರು ಹರಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡುವುದಾಗಿ ಮಾಜಿ ಸಚಿವ ನರಸಿಂಹನಾಯಕ(ರಾಜುಗೌಡ) ತಿಳಿಸಿದ್ದಾರೆ.
ಮಾರ್ಚ್ ಅಂತ್ಯದವರೆಗೆ ನೀರು ಕೊಡುವುದಾಗಿ ಹೇಳಿ ಅಧಿಕಾರ ಹಿಡಿದಿರುವ ಜನಪ್ರತಿನಿಧಿಗಳು ಈಗ ಮಾಡಿದ್ದು ಏನು? ಎಂದು ಪ್ರಶ್ನಿಸಿರುವ ಅವರು, ಹಿಂದೆ ಪಾದಯಾತ್ರೆ ಮಾಡಿದವರು ಈಗೇನು ಮಾಡುತ್ತಿದ್ದಾರೆ. ತಮ್ಮದೇ ಸರ್ಕಾರ ಇದ್ದರೂ ನೀರಿಗಾಗಿ ಹೋರಾಟ ಮಾಡುತ್ತೇನೆ ಎನ್ನುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.
ಕಳೆದ ವರ್ಷ ತಾವು ಸಚಿವರಾಗಿದ್ದಾಗ ಆಗಿನ ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡಿ ರೈತರಿಗೆ ನೀರು ಒದಗಿಸಲಾಗಿತ್ತು. ಆದರೆ, ಈ ವರ್ಷ ಜಲಾಶಯದಲ್ಲಿ ಸಾಕಷ್ಟು ನೀರು ಇದ್ದರೂ, ಕಾಲುವೆಗೆ ನೀರು ಸ್ಥಗಿತಗೊಳಿಸಿರುವುದರ ಹಿಂದಿನ ಹುನ್ನಾರವಾದರೂ ಏನು? ಎಂದು ಪ್ರಶ್ನಿಸಿದ್ದಾರೆ.
ಕೃಷ್ಣಾ ಭಾಗ್ಯ ಜಲ ನಿಗಮದ ಹಿರಿಯ ಅಧಿಕಾರಿಗಳು ತಕ್ಷಣವೇ ಕಾಲುವೆಗೆ ನೀರು ಹರಿಸಬೇಕು. ಇಲ್ಲದಿದ್ದರೆ ಮುಂದಾಗುವ ಅನಾಹುತಗಳಿಗೆ ಅವರೇ ಹೊಣೆ ಎಂದು ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.