ADVERTISEMENT

ರಾಷ್ಟ್ರೀಯ ಮತದಾರರ ದಿನಾಚರಣೆ: ತಪ್ಪದೇ ಮತ ಚಲಾಯಿಸಿ –ಡಾ.ರಾಗಪ್ರಿಯಾ

12ನೇ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 3:27 IST
Last Updated 26 ಜನವರಿ 2022, 3:27 IST
ಯಾದಗಿರಿ ನಡೆದ 12ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿಎಲ್‌ಒ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಯಿತು
ಯಾದಗಿರಿ ನಡೆದ 12ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿಎಲ್‌ಒ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಯಿತು   

ಯಾದಗಿರಿ: ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದ್ದು, ತಪ್ಪದೇ ಎಲ್ಲರೂ ಮತ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ 12ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಯಾವುದೇ ಮತದಾರ ಮತದಾನದಿಂದ ಹೊರಗೆ ಉಳಿಯಬಾರದು. ಮತಚಲಾಯಿಸುವ ಮೂಲಕ ಸದೃಢ ಪ್ರಜಾಪ್ರಭುತ್ವ ನಿರ್ಮಾಣ ಮಾಡಬಹುದು ಎಂದರು.

ADVERTISEMENT

ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆಯಾದ ಯುವ ಮತದಾರರಿಗೆ ಮತ್ತೊಂದು ಜವಾಬ್ದಾರಿ ಪಡೆದಂತಾಗಿದೆ. ಮುಂಬರುವ ಎಲ್ಲ ಚುನಾವಣೆಗಳಲ್ಲಿ ಯಾವುದೇ ಆಮಿಷಕ್ಕೆ ಒಳಗಾಗದೆ, ನಿರ್ಭೀತಿಯಿಂದ ಮತ ಚಲಾಯಿಸಿ. ಪ್ರತಿಯೊಂದು ಮತ ಅಮೂಲ್ಯವಾದದ್ದು. ಸಂಬಂಧಪಟ್ಟ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸಿ ಎಂದು ನುಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಇಎಲ್‌ಸಿ ಕ್ಲಬ್‌ನವರು, ಸ್ವೀಪ್ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳು ಉತ್ತಮವಾಗಿ ಜವಾಬ್ದಾರಿ ನಿರ್ವಹಿಸಿ ಯಶಸ್ವಿಗೊಳಿಸಿದ್ದಾರೆ ಎಂದರು.

ಪ್ರತಿ ವರ್ಷ ‘ರಾಷ್ಟ್ರೀಯ ಮತದಾರರ ದಿನ’ವನ್ನು ಒಂದು ವಿಶೇಷತೆ ಇಟ್ಟುಕೊಂಡು ಆಚರಿಸಲಾಗುತ್ತಿದೆ. ಈ ವರ್ಷ ಚುನಾವಣೆಗಳನ್ನು ಒಳಗೊಳ್ಳುವ, ಸುಗಮ ಮತ್ತು ಭಾಗವಹಿಸುವಂತೆ ಮಾಡುವುದು ಎಂಬ ಉದ್ದೇಶ ಇರಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

2011ರ ಜನವರಿ 25ರಂದು ‘ರಾಷ್ಟ್ರೀಯ ಮತದಾರರ ದಿನ’ ಎಂದು ಘೋಷಿಸಲಾಯಿತು. ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವುದು, ಮತದಾನದ ಪ್ರಮಾಣ ಹೆಚ್ಚಿಸುವುದು, ಅರ್ಹ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವುದು. 18 ವರ್ಷ ಮೇಲ್ಪಟ್ಟ ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕೆಂಬ ಸಂದೇಶ ಸಾರುವುದು ಇದರಲ್ಲಿ ಒಳಗೊಂಡಿದೆ ಎಂದು ವಿವರಿಸಿದರು.

ಪ್ರಶಸ್ತಿ ಪ್ರದಾನ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಬಿಎಲ್‌ಒ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರಶಂಸೆ ಪತ್ರ ನೀಡಿ, ಸನ್ಮಾನಿಸಲಾಯಿತು.

ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರೌಢಶಾಲಾ, ಪಿಯು ಮತ್ತು ಪದವಿ ಹಂತಗಳಲ್ಲಿ ರಸಪ್ರಶ್ನೆ, ಪ್ರಬಂಧ ಸ್ಪರ್ಧೆ ಮತ್ತು ಭಿತ್ತಿ ಚಿತ್ರ ಸ್ಪರ್ಧೆ ಆಯೋಜಿಸಲಾಯಿತು. ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಿ ಸನ್ಮಾನಿಸಲಾಯಿತು.

ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅಶೋಕ ತೋಟದ, ಡಿವೈಎಸ್ಪಿ ವೀರೇಶ, ಚುನಾವಣೆ ತಹಶೀಲ್ದಾರ್‌ ಸಂತೋಷರಾಣಿ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಚುನಾವಣೆ ಶಾಖೆಯ ಸಿಬ್ಬಂದಿ ಖಲೀಲ್, ಶಾಲಾ ಕಾಲೇಜು ವಿದ್ಯಾರ್ಥಿಗಳು ಇದ್ದರು.ಸುಭಾಷ್‌ ಚಂದ್ರ ಕೌಲಗಿ ನಿರೂಪಿಸಿದರು.

ಜಿಲ್ಲೆಯಲ್ಲಿ10.23 ಲಕ್ಷ ಮತದಾರರು
ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 5,11,830 ಪುರುಷ ಮತದಾರರು, 5,11,417 ಮಹಿಳಾ ಮತದಾರರು ಒಟ್ಟು 10,23,247 ಮತದಾರರು ಹೆಸರು ನೋಂದಾಯಿಸಿ ಕೊಂಡಿದ್ದಾರೆ. ಪ್ರಸ್ತುತ ವರ್ಷದ ಪರಿಷ್ಕರಣೆ ಅವಧಿಯಲ್ಲಿ 10,470 ಮತದಾರರು ಹೊಸದಾಗಿ ನೋಂದಾಯಿಸಿದ್ದಾರೆ. ಶೇ 67.99 ಪ್ರತಿಶತ ದಷ್ಟು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌ ಮಾಹಿತಿ ನೀಡಿದರು.

ಮತದಾರರ ಪಟ್ಟಿಯು ಶೇ 100 ರಷ್ಟು ಭಾವಚಿತ್ರವಿರುವ ಎಪಿಕ್ ಕಾರ್ಡ್‌ ಅನ್ನು ಹೊಂದಿರುತ್ತದೆ. ಮತದಾರರ ಪಟ್ಟಿಯ ಪ್ರಮುಖ ಉದ್ದೇಶ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದಾಗಿದೆ. ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಯುವ ಮತದಾರರಿಗೆ ಎಪಿಕ್ ಕಾರ್ಡ್‌ ಅನ್ನು ಉಚಿತವಾಗಿ ಎಪಿಕ್ ಕಾರ್ಡ್‌ ನೀಡಲಾಗುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.