ಯಾದಗಿರಿ: ‘ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಸೆಪ್ಟೆಂಬರ್ 1ರಿಂದ ಡಿಸೆಂಬರ್ 31ರವರೆಗೆ 21ನೇ ರಾಷ್ಟ್ರೀಯ ಜಾನುವಾರು ಗಣತಿ ನಡೆಯಲಿದೆ’ ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಜಾನುವಾರು ಗಣತಿಯ ಮಾಹಿತಿಯ ಕರಪತ್ರ ಮತ್ತು ಜಾನುವಾರು ಗಣತಿಯ ಸೂಚನಾ ಕೈಪಿಡಿ ಬಿಡುಗಡೆ ಮಾಡಿ ಅವರು ಮಾತನಾಡಿದರು.
‘ಗಣತಿದಾರರು ನಗರ ಮತ್ತು ಗ್ರಾಮೀಣ ಭಾಗದ ಪ್ರತಿಯೊಂದು ಮನೆ, ಉದ್ಯಮ, ಸಂಸ್ಥೆಗಳಿಗೆ ಭೇಟಿ ನೀಡಿ ಎಲ್ಲಾ ತರಹದ ಸಾಕು ಪ್ರಾಣಿಗಳು ಹಾಗೂ ಕುಕ್ಕುಟಗಳ ಮಾಹಿತಿ ಸಂಗ್ರಹಿಸುವರು. ಇದಕ್ಕೆ ಸಾರ್ವಜನಿಕರು, ರೈತರು ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಕೋರಿದರು.
‘ಜಾನುವಾರು ಸಾಕಾಣಿಕೆದಾರರು ಸಾಕಲಾಗುವ ಪಕ್ಷಿ ಮತ್ತು ಪ್ರಾಣಿಗಳ ಮಾಹಿತಿ ಪಡೆಯಲಾಗುತ್ತದೆ. ಸಾರ್ವಜನಿಕವಾಗಿ ಬಿಟ್ಟಿರುವ ಬಿಡಾಡಿ ದನ, ನಾಯಿಗಳ ಮಾಹಿತಿಯನ್ನೂ ಸೇರಿಸಲಾಗುತ್ತದೆ. ದೇವಸ್ಥಾನದಲ್ಲಿ ಪ್ರಾಣಿಗಳನ್ನು ಸಾಕುವುದಿದ್ದರೆ ಗೋಶಾಲೆಗಳಿದ್ದರೆ ಮಾಹಿತಿ ಪಡೆಯಲಾಗುತ್ತದೆ. 10 ಕ್ಕಿಂತ ಜಾಸ್ತಿ ದನಗಳಿದ್ದರೆ, 1000ಕ್ಕಿಂತ ಜಾಸ್ತಿ ಕೋಳಿ ಸಾಕಿದರೆ, 50ರ ಮೇಲ್ಪಟ್ಟು ಆಡು ಸಾಕಾಣಿಕೆ ಇದ್ದರೆ, ಅವುಗಳನ್ನು ಫಾರಂ ಎಂದು ಪರಿಗಣಿಸಿ ಮಾಹಿತಿ ನಮೂದಿಸುತ್ತಾರೆ’ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಉಪವಿಭಾಗಾಧಿಕಾರಿ ಹಂಪಣ್ಣ ಸಜ್ಜನ್, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ರಾಜು ದೇಶಮುಖ, ಡಿಡಿಪಿಯು ಚನ್ನಬಸಪ್ಪ ಕುಳಗೇರಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸರೋಜಕಾ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರವೀಣಕುಮಾರ, ತಹಶೀಲ್ದಾರ್ ಸುರೇಶ ಅಂಕಲಗಿ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸುಲೈಮಾನ್ ನದಾಫ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.