ಯಾದಗಿರಿ: ಕೊರೊನಾ ವೈರಸ್ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪರೀಕ್ಷೆ ಮಾಡಲು ಸಂಗ್ರಹಿಸಿದ ಒಟ್ಟು 3 ವ್ಯಕ್ತಿಗಳ ಮಾದರಿಗಳಲ್ಲಿ 2 ನೆಗೆಟಿವ್ ಫಲಿತಾಂಶ ಬಂದಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಆಸ್ಪತ್ರೆಯಲ್ಲಿ ಒಬ್ಬ ಮತ್ತು ಸುರಪುರ ಆಸ್ಪತ್ರೆಯಲ್ಲಿ ಒಬ್ಬರನ್ನು ಪ್ರತ್ಯೇಕವಾಗಿರಿಸಿ, ಐಸೋಲೇಷನ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಶಂಕಿತ ಅಥವಾ ಖಚಿತ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ. ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಆತಂಕ ಪಡಬಾರದು ಎಂದು ಮನವಿ ಮಾಡಿದ್ದಾರೆ.
ಯಾದಗಿರಿ ತಾಲ್ಲೂಕಿನಲ್ಲಿ 27, ಶಹಾಪುರ ತಾಲ್ಲೂಕಿನಲ್ಲಿ 16 ಹಾಗೂ ಸುರಪುರ ತಾಲ್ಲೂಕಿನಲ್ಲಿ 21 ಸೇರಿದಂತೆ ಮಾರ್ಚ್ 26ರವರೆಗೆ ಜಿಲ್ಲೆಯಲ್ಲಿ ಒಟ್ಟು 64 ಜನ ದುಬೈ, ಕತಾರ್, ಸೌದಿ, ಮದಿನಾ ಪ್ರವಾಸದಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ವೈದ್ಯಕೀಯ ತಪಾಸಣೆ ಗೊಳಪಡಿಸಲಾಗಿದೆ. ಯಾವುದೇ ರೋಗಲಕ್ಷಣಗಳು ಕಂಡು ಬಂದಿರುವುದಿಲ್ಲ. ಕಾರಣ ಇವರಿಗೆ ಹೋಮ್ ಐಸೋಲೇಷನ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಯಾದಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 15, ಶಹಾಪುರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 2 ಹಾಗೂ ಸುರಪುರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 10 ಸೇರಿದಂತೆ ಒಟ್ಟು 27 ಐಸೋಲೇಷನ್ ಬೆಡ್ಗಳ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಸಹಾಯವಾಣಿ-104 ಕ್ಕೆ ಬರುವ ಕರೆಗಳಿಗಾಗಿ 3 ಸಿಬ್ಬಂದಿ ಮೀಸಲಿರಿಸಿದೆ. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಗೆ 11 ಕರೆಗಳು ಸ್ವೀಕೃತವಾಗಿವೆ ಎಂದು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.