ಹುಣಸಗಿ: ಹುಣಸಗಿ ಹಾಗೂ ಸುರಪುರ ತಾಲ್ಲೂಕಿನ 32 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿಗಳ ಮುಖಾಂತರ ₹ 25 ಕೋಟಿ ಮೊತ್ತದ ಸಾಲವನ್ನು ವಿತರಿಸ ಲಾಗುವುದು ಎಂದು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ ಸಜ್ಜನ ತಿಳಿಸಿದರು.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವರ್ಷಗಳ ಕೋವಿಡ್ ಸಂಕಟದಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಅವರ ನೆರವಿಗೆ ಬರುವ ನಿಟ್ಟಿನಲ್ಲಿ ಹುಣಸಗಿ, ಕೊಡೇಕಲ್ಲ, ಕಕ್ಕೆರಾ, ಮುದನೂರು, ದೇವತಕಲ್ಲ ಭಾಗದ ಎಂಟು ಸಾವಿರ ರೈತರಿಗೆ ಈ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದು ಹೇಳಿದರು.
ಈಗಾಗಲೇ ಕಲಬುರ್ಗಿ– ಯಾದಗಿರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ರಾಜಕುಮಾರ ಪಾಟೀಲ ತೇಲ್ಕೂರು ಅವರ ಸೂಚನೆಯಂತೆ ಬ್ಯಾಂಕ್ ವತಿಯಿಂದ ಎರಡು ಜಿಲ್ಲೆಗಳ ರೈತರಿಗೆ ಈಗಾಗಲೆ ಸಾಲ ವಿತರಣೆಗೆ ಚಾಲನೆ ನೀಡಲಾಗಿದೆ. ಅದರಂತೆ ಸುರಪುರ ಹಾಗೂ ಹುಣಸಗಿ ತಾಲ್ಲೂಕಿನಲ್ಲಿ ಶಾಸಕ ನರಸಿಂಹನಾಯಕ ಅವರ ನೇತೃತ್ವದಲ್ಲಿ ಆಗಸ್ಟ್ 30ರಂದು ಸಾಲ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಬಾಪುಗೌಡ ಪಾಟೀಲ ಮಾತನಾಡಿ, ತಾಲ್ಲೂಕು ಕೇಂದ್ರವಾಗಿರುವ ಹುಣಸಗಿಯಲ್ಲಿ ಬ್ಯಾಂಕ್ ಶಾಖೆ ತೆರೆಯುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು. ನಬಾರ್ಡ್ ಸಾಲ ಸೌಲಭ್ಯ, ಹೊಸ ರೈತರಿಗೆ ಸಾಲ ನೀಡುವ ಕುರಿತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.