ಹುಣಸಗಿ: ‘ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಹಾಗೂ ರಾಜ್ಯದ ಕೃಷ್ಣಾ ನದಿ ಪಾತ್ರದಲ್ಲಿ ಕಳೆದ ಎರಡು ದಿನಗಳಿಂದ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದ್ದರಿಂದ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ’ ಎಂದು ಡ್ಯಾಂ ಡಿವಿಜನ್ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ನಾಯ್ಕೊಡಿ ತಿಳಿಸಿದ್ದಾರೆ.
‘ಗುರುವಾರ ಬೆಳಿಗ್ಗೆಯಿಂದಲೇ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಬುಧವಾರ ಬೆಳಿಗ್ಗೆ 15 ಸಾವಿರ ಕ್ಯುಸೆಕ್ ಇದ್ದ ಒಳ ಹರಿವು ಗುರುವಾರ ಬೆಳಿಗ್ಗೆ 20 ಸಾವಿರಕ್ಕೆ ಏರಿಕೆಯಾಗಿದ್ದರಿಂದ ಸಂಜೆಯ ಹೊತ್ತಿಗೆ 50 ಸಾವಿರ ಕ್ಯುಸೆಕ್ ಹೆಚ್ಚಾಗಿದೆ. ಇದರಿಂದಾಗಿ ಜಲಾಶಯದ ಮಟ್ಟ 491.46 ಮೀ ಕಾಯ್ದುಕೊಂಡು 7 ಗೇಟ್ಗಳ ಮುಖಾಂತರ ಸುಮಾರು 49 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತದೆ’ ಎಂದು ವಿವರಿಸಿದರು.
ಎಚ್ಚರಿಕೆಯಿಂದಿರಲು ಸೂಚನೆ:‘ಕೃಷ್ಣಾ ನದಿಗೆ ಸುಮಾರು 1 ಲಕ್ಷ ಕ್ಯುಸೆಕ್ ವರೆಗೂ ನೀರು ಹರಿಸುವ ಸಾಧ್ಯತೆ ಇರುವುದರಿಂದ ನದಿ ಪಾತ್ರದಲ್ಲಿರುವ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರಬೇಕು. ನದಿಯತ್ತ ಜನ ಜಾನುವಾರುತೆರಳದಂತೆ ಜಾಗ್ರತೆ ವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.