ADVERTISEMENT

ನರೇಗಾದಲ್ಲಿ ₹1.95 ಕೋಟಿ ಅವ್ಯವಹಾರ: ಆರೋಪ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2018, 7:28 IST
Last Updated 2 ಫೆಬ್ರುವರಿ 2018, 7:28 IST

ಯಾದಗಿರಿ: ‘ಸುರಪುರ ತಾಲ್ಲೂಕಿನಲ್ಲಿ ನರೇಗಾ ಯೋಜನೆಯ ಒಗ್ಗೂಡಿಸುವ ಕಾಮಗಾರಿಗಳಲ್ಲಿ ಅಧಿಕಾರಿಗಳು ಬೋಗಸ್‌ ಬಿಲ್‌ ಸೃಷ್ಟಿಸಿ ಸುಮಾರು ₹1.95 ಕೋಟಿ ದುರ್ಬಳಕೆ ಮಾಡಿರು ವುದು ಕಂಡುಬಂದಿದ್ದರೂ, ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ’ ಎಂದು ಬಿಜೆಪಿ ಎಸ್‌ಟಿ ಮೋರ್ಚಾ ಅಧ್ಯಕ್ಷ ರಾಜೂಗೌಡ ಆರೋಪಿಸಿದರು.

ನಗರದಲ್ಲಿ ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುರಪುರ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಅವ್ಯವಹಾರ ನಡೆಸಲಾಗಿದೆ. ಒಟ್ಟು ₹10 ಕೋಟಿಗೂ ಹೆಚ್ಚು ಅವ್ಯವಹಾರ ನಡೆಸಿರುವುದು ಕಂಡುಬಂದಿದೆ. ಆದರೆ, ತನಿಖೆ ವೇಳೆ ಕೇವಲ ₹1.95 ಕೋಟಿಯಷ್ಟೇ ಕಂಡುಬಂದಿದೆ. ಸಮಗ್ರ ತನಿಖೆ ನಡೆಸಿದರು ಭಾರೀ ಅವ್ಯವಹಾರ ಬೆಳಕಿಗೆ ಬರಲಿದೆ’ ಎಂದು ತಿಳಿಸಿದರು.

ಕ್ರಿಯಾಯೋಜನೆ ಇಲ್ಲದೆ ಒಟ್ಟು 180ಕ್ಕೂ ಹೆಚ್ಚು ಕಾಮಗಾರಿಗಳಿಗೆ ಬೋಗಸ್‌ ಬಿಲ್‌ ಸೃಷ್ಟಿಸಿದ್ದಾರೆ. ಈ ಕೃತ್ಯದಲ್ಲಿ ಅಧಿಕಾರಿಗಳು, ಸಿಬ್ಬಂದಿ ಕೈಜೋಡಿಸಿದ್ದಾರೆ. ದೂರಿನ ಮೇಲೆ ಪ್ರಾಮಾಣಿ ಕವಾಗಿ ತನಿಖೆ ನಡೆಸಿರುವ ಜಿಲ್ಲಾ ಪಂಚಾಯಿತಿ ಸಿಇಒ ಅವಿನಾಶ್ ಮೆನನ್‌ ರಾಜೇಂದ್ರನ್‌ ಅವರ ಮೇಲೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಸಕರು ಒತ್ತಡ ಹೇರುತ್ತಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

‘ವಾಸ್ತವಾಗಿ ಉದ್ಯೋಗ ಖಾತ್ರಿ ಯೋಜನೆಯ ಕೆಲವು ಗುತ್ತಿಗೆದಾರರು ಕಾಮಗಾರಿಗಳನ್ನು ಮಾಡಿದ್ದಾರೆ. ಆದರೆ, ಅವರಿಗೆ ಸಂದಾಯವಾಗಬೇಕಿದ್ದ ಹಣವನ್ನು ವಂಚಿಸಿ ಬೋಗಸ್‌ ಬಿಲ್‌ ಸೃಷ್ಟಿಸಿ ಅಧಿಕಾರಿಗಳು ಕಬಳಿಸಿದ್ದಾರೆ. ಈ ಭ್ರಷ್ಟಾಚಾದಲ್ಲಿ ಶಾಮೀಲಾಗಿರುವ ಗುತ್ತಿಗೆದಾರರು ತನಿಖೆಗೆ ಸಹಕರಿಸಿದ ಸ್ಥಳೀಯ ಯುವಕರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ’ ಎಂದು ದೂರಿದರು.

‘ಆರೋಪಿಗಳಿಗೆ ಜನ ಪ್ರತಿನಿಧಿಗಳ ಬೆಂಬಲ ಇರುವುದರಿಂದ ಪ್ರಕರಣವನ್ನು ಮುಚ್ಚಿ ಹಾಕುವ ಅನುಮಾನ ಇದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಸಮಗ್ರ ತನಿಖೆ ನಡೆಸಬೇಕು’ ಎಂದರು. ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಚಂದ್ರಶೇಖರಗೌಡ ಮಾಗನೂರು, ಭೀಮಣ್ಣ ಮೇಟಿ, ದೇವೇಂದ್ರನಾಥ ನಾದ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.