ಯಾದಗಿರಿ: ‘ಮಕ್ಕಳ ಸಾಕ್ಷರತೆ ಹೆಚ್ಚಿಸಿದರೆ ಮೂಢನಂಬಿಕೆ ಹೋಗಲಾಡಿಸಬಹುದು. ಆ ನಿಟ್ಟಿನಲ್ಲಿ ಮಕ್ಕಳನ್ನು ಸಂರಕ್ಷಣೆ ಮಾಡಬೇಕಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಕೆಎಸ್ಆರ್ಡಿಪಿಆರ್ಯು- ಮಕ್ಕಳ ಹಕ್ಕುಗಳು ಮತ್ತು ಆಡಳಿತ ಕೋಶ, ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಅಧಿನಿಯಮ ಹಾಗೂ ಮಕ್ಕಳ ಸಂರಕ್ಷಣೆ ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ಹಾಗೂ ನಾಗರಿಕ ಸಂಸ್ಥೆಗಳ ಸಹಭಾಗಿತ್ವ ಕುರಿತು ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಮಕ್ಕಳ ಹಕ್ಕುಗಳ ಗ್ರಾಮ ಸಭೆಗಳನ್ನು ನಡೆಸುವ ಮೂಲಕ ಅವರಿಗೆ ತಮ್ಮ ಅಭಿಪ್ರಾಯ, ಸಮಸ್ಯೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ವಾತಾವರಣ ಕಲ್ಪಿಸಿ ಅವರ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಬೇಕಾಗಿದೆ’ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ತಿದ್ದುಪಡಿ ಹಿನ್ನಲೆಯಲ್ಲಿ ಮಕ್ಕಳ ಸಂರಕ್ಷಣೆಯ ಕಾರ್ಯ ವಿಧಾನಗಳ ಅನುಷ್ಠಾನದಲ್ಲಿ ವಿವಿಧ ಇಲಾಖೆಗಲು ಮತ್ತು ನಾಗರಿಕ ಸಂಘ-ಸಂಸ್ಥೆಗಳ ಸಹಭಾಗಿತ್ವ, ಸಮನ್ವಯತೆ, ಸಹಕಾರ ಮತ್ತು ಭಾಗವಹಿಸುವಿಕೆಯ ಮಂಡನೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಬಗ್ಗೆ ಸಂಕ್ಷಿಪ್ತ ಪರಿಚಯ ಮತ್ತು ಅದರ ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ಮತ್ತು ಅಧಿಕಾರಿಗಳ ಜವಾಬ್ದಾರಿ, ಪಾತ್ರಗಳ ಕುರಿತು ಉಪನ್ಯಾಸ ಹಾಗೂ ಚರ್ಚೆಗಳು ನಡೆದವು.
ಕೊಪ್ಪಳದ ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್, ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ಯುನಿಸೆಫ್ ಸಂಯೋಜಕ ಡಾ.ಕೆ.ಲೆನಿನ್ ಬಾಬು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಹಣಮಂತರಾಯ ಕರಡಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯಮಾಳಪ್ಪ ಎಸ್.ವಂಟೂರ್, ಬಾಲ ನ್ಯಾಯ ಮಂಡಳಿ ಸದಸ್ಯೆ ನಿರ್ಮಲಾದೇವಿ ಹೂಗಾರ ಇದ್ದರು. ಗದಗನ ಮಕ್ಕಳ ಹಕ್ಕುಗಳು ಮತ್ತು ಆಡಳಿತ ಕೋಶದ ಸಂಯೋಜಕ ಮುತ್ತುರಾಜ್ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.