ಸುರಪುರ: ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ವಿಶ್ವ ಸಂಸ್ಥೆಯ ಸದಸ್ಯತ್ವ ಪಡೆದ ಅನೇಕ ರಾಷ್ಟ್ರಗಳಲ್ಲಿ ಆಚರಿಸಲಾಗುತ್ತಿದೆ. ಅಂಬೇಡ್ಕರ್ ಅವರು ಜಗತ್ತಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಸೂರ್ಯ ಎಂದು ಸೊನ್ನ ಪಿಯು ಕಾಲೇಜು ಉಪನ್ಯಾಸಕ ನಿಜಲಿಂಗಪ್ಪ ದೊಡ್ಮನಿ ಹೇಳಿದರು.
ಇಲ್ಲಿಯ ತಹಶೀಲ್ದಾರ್ ಕಚೇರಿ ಆವರಣದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಅಂಬೇಡ್ಕರ್ ಅವರ 131ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಲ್ಲಿ ಅವರ ಜಯಂತಿಗೆ ಅರ್ಥ ಬರುತ್ತದೆ. ಇವತ್ತು ದೇಶವನ್ನು ಕಾಡುತ್ತಿರುವ ಪ್ರತಿಯೊಂದು ಸಮಸ್ಯೆಗೆ ಬಾಬಾ ಸಾಹೇಬರು ಕೊಟ್ಟ ಸಂವಿಧಾನದಲ್ಲಿ ಉತ್ತರವಿದೆ. ನಾವೆಲ್ಲರು ಸಂವಿಧಾನವನ್ನು ಚಾಚೂ ತಪ್ಪದೆ ಪಾಲಿಸಿದರೇ ಭಾರತ ವಿಶ್ವಗುರು ಆಗುವುದರಲ್ಲಿ ಸಂದೇಹವಿಲ್ಲ ಎಂದರು.
ಮಸರಕಲ್ ಪಿಯು ಕಾಲೇಜಿನ ಉಪನ್ಯಾಸಕ ಸಿದ್ದಲಿಂಗಪ್ಪ ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್ ತೋರಿದ ಸನ್ಮಾರ್ಗದಲ್ಲಿ ನಡೆದು ಅವರ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿ ಕೊಂಡು ಪಾಲಿಸಿದಲ್ಲಿ ಪ್ರಬುದ್ದ ಭಾರತವಾಗುತ್ತದೆ ಎಂದು ಅವರು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿ, ಡಾ. ಬಾಬಾ ಸಾಹೇಬರು ಸಂವಿಧಾನದ ಮೂಲಕ ಸರ್ವರಿಗೂ ಸಮಬಾಳು, ಸಮಪಾಲು ಕಲ್ಪಿಸಿಕೊಟ್ಟಿದ್ದಾರೆ ಎಂದು ತಿಳಿಸಿದರು.
ಡಿವೈಎಸ್ಪಿ ಡಾ. ದೇವರಾಜ ಮಾತನಾಡಿದರು. ನಗರಸಭೆ ಅಧ್ಯಕ್ಷೆ ಸುಜಾತಾ ಜೇವರ್ಗಿ ಉದ್ಘಾಟಿಸಿದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಸಜ್ಜನ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಆರ್.ವಿ. ನಾಯಕ, ತಾಪಂ ಇ.ಒ. ರವಿಚಂದ್ರ ರೆಡ್ಡಿ, ಸಮಾಜ ಕಲ್ಯಾಣಾಧಿಕಾರಿ ಸತ್ಯನಾರಾಯಣ ದರಬಾರಿ ಇದ್ದರು. ಹಣಮಂತ ಪೂಜಾರಿ ನಿರೂಪಿಸಿ ವಂದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆಗೆ ಶಾಸಕ ರಾಜೂಗೌಡ ಚಾಲನೆ ನೀಡಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ದುರಗಪ್ಪ ಗೋಗಿಕರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.