ADVERTISEMENT

ಸುರಪುರ ರಾಜರ ಚರಿತ್ರೆ ಸ್ಮರಣೀಯ: ಸುನೀಲಕುಮಾರ ಅಭಿಮತ

‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮದಲ್ಲಿ ಸಚಿವ

​ಪ್ರಜಾವಾಣಿ ವಾರ್ತೆ
Published 29 ಮೇ 2022, 4:45 IST
Last Updated 29 ಮೇ 2022, 4:45 IST
ಸುರಪುರದ ಗರುಡಾದ್ರಿ ಕಲಾಮಂದಿರದಲ್ಲಿ ಶನಿವಾರ ಏರ್ಪಡಿಸಿದ್ದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದಲ್ಲಿ ಸಚಿವ ಸುನೀಲಕುಮಾರ ಮಾತನಾಡಿದರು. ಶಾಸಕ ರಾಜೂಗೌಡ, ನಗರಸಭೆ ಅಧ್ಯಕ್ಷೆ ಸುಜಾತಾ ಜೇವರ್ಗಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಸಜ್ಜನ ಇದ್ದರು
ಸುರಪುರದ ಗರುಡಾದ್ರಿ ಕಲಾಮಂದಿರದಲ್ಲಿ ಶನಿವಾರ ಏರ್ಪಡಿಸಿದ್ದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದಲ್ಲಿ ಸಚಿವ ಸುನೀಲಕುಮಾರ ಮಾತನಾಡಿದರು. ಶಾಸಕ ರಾಜೂಗೌಡ, ನಗರಸಭೆ ಅಧ್ಯಕ್ಷೆ ಸುಜಾತಾ ಜೇವರ್ಗಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಸಜ್ಜನ ಇದ್ದರು   

ಸುರಪುರ: ‘1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಸುರಪುರದಿಂದಲೇ ಆರಂಭಗೊಂಡಿರುವುದು ಅವಿಸ್ಮರಣೀಯ. ಇಲ್ಲಿಯ ಅರಸರ ಚರಿತ್ರೆ ಇತಿಹಾಸದ ಪುಟ ಸೇರದಿರುವುದು ವಿಪರ್ಯಾಸ. ಸರ್ಕಾರಗಳ ತಪ್ಪಿನಿಂದ ಅನೇಕ ಅರಸರ ಇತಿಹಾಸ ಮರೆಯಾಗಿ ಹೋಗಿದೆ. ಇತಿಹಾಸ ಮತ್ತು ಸಂಸ್ಕೃತಿಯನ್ನು ಯುವ ಜನಾಂಗಕ್ಕೆ ತಿಳಿಸಿಕೊಡುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲಕುಮಾರ ಹೇಳಿದರು.

ನಗರದ ಗರುಡಾದ್ರಿ ಕಲಾಮಂದಿರದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಆಡಳಿತ ಶನಿವಾರ ಏರ್ಪಡಿಸಿದ್ದ ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸ್ವಾತಂತ್ರ್ಯ ಚಳವಳಿ ನೂರಾರು ವರ್ಷ ನಡೆದ ಹೋರಾಟ. ಅನೇಕರ ತ್ಯಾಗ ಬಲಿದಾನಗಳ ಫಲವಾಗಿ ಸ್ವಾತಂತ್ರ್ಯ ಲಭಿಸಿದೆ. ಹುತಾತ್ಮ ಮನಸ್ಸುಗಳಿಗೆ ವಂದಿಸಿ ಅವರೆಲ್ಲರ ಹೋರಾಟವನ್ನು ನೆನಪಿಸುವ ಮೂಲಕ ಯುವಜನಾಂಗಕ್ಕೆ ನೈಜ ಇತಿಹಾಸ ತಿಳಿಸಿಕೊಡುವುದು ಈ ಕಾರ್ಯಕ್ರಮದ ಉದ್ದೇಶ’ ಎಂದರು.

ADVERTISEMENT

ಶಾಸಕ ರಾಜೂಗೌಡ ಮಾತನಾಡಿ, ‘ಸ್ವಾತಂತ್ರ್ಯ ಚಳವಳಿಯಲ್ಲಿ ಸುರಪುರ ಅರಸರ ಕೊಡುಗೆ ಅಪಾರವಾಗಿದೆ. ಐತಿಹಾಸಿಕ ಪರಂಪರೆಯುಳ್ಳ ಕ್ಷೇತ್ರಕ್ಕೆ ಸಚಿವರು ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ನಮ್ಮ ಸೌಭಾಗ್ಯ’ ಎಂದರು.

ನಗರದ ಆರೋಗ್ಯ ಕೇಂದ್ರದ ಆವರಣದಲ್ಲಿನ 1857ರ ಸ್ವಾತಂತ್ರ್ಯ ಚಳವಳಿಯ ಸ್ಮರಣಾರ್ಥವಾಗಿ ಸ್ಥಾಪಿಸಿರುವ ಸ್ಮಾರಕ ವಿಜಯಸ್ತಂಭದ ಪಕ್ಕದಲ್ಲಿ ಸಾತಂತ್ರ್ಯೋತ್ಸವ ಅಮೃತಮಹೋತ್ಸವ ಸವಿನೆನಪಿಗಾಗಿ ಶಿಲಾನ್ಯಾಸವನ್ನು ಸಚಿವರು ನೆರವೇರಿಸಿದರು. ಅರಸು ಮನೆತನದ ರಾಜಾ ಕೃಷ್ಟಪ್ಪನಾಯಕ ಅವರನ್ನು ಸಚಿವರು ಸರ್ಕಾರದ ಪರವಾಗಿ ಸನ್ಮಾನಿಸಿದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಸಜ್ಜನ, ನಗರಸಭೆ ಅಧ್ಯಕ್ಷೆ ಸುಜಾತ ಜೇವರ್ಗಿ, ಎಸ್ಪಿ ಡಾ.ಸಿ.ಬಿ. ವೇದಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿ.ಪಂ ಸಿ.ಎಸ್. ಅಮರೇಶನಾಯ್ಕ, ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ತಾ.ಪಂ ಇಒ ರವಿಚಂದ್ರರೆಡ್ಡಿ, ಪ್ರಮುಖರಾದ ಡಾ.ಸುರೇಶ ಸಜ್ಜನ, ರಾಜಾ ಹನುಮಪ್ಪ ನಾಯಕ, ಯಲ್ಲಪ್ಪ ಕುರುಕುಂದಿ, ಕಿಶೋರಚಂದ್ ಜೈನ್, ಡಾ.ಬಿ.ಎಂ ಹಳ್ಳಿಕೋಟಿ, ವೇಣುಗೋಪಾಲ ಜೇವರ್ಗಿ, ರಾಜಾ ಮುಕುಂದ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.