ADVERTISEMENT

ಯಾದಗಿರಿ: 26ರಂದು ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 6:53 IST
Last Updated 23 ಫೆಬ್ರುವರಿ 2026, 6:53 IST
ಕೆ. ಸೋಮಶೇಖರ್
ಕೆ. ಸೋಮಶೇಖರ್   

ಯಾದಗಿರಿ: 2026-27ನೇ ಸಾಲಿನ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವ ಧನವನ್ನು ₹ 15,000ಕ್ಕೆ ಏರಿಕೆ, ₹ 2 ಲಕ್ಷ ನಿವೃತ್ತಿ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಫೆಬ್ರುವರಿ 26ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ  ರಾಜ್ಯ ಅಧ್ಯಕ್ಷ ಕೆ. ಸೋಮಶೇಖರ್ ಹೇಳಿದ್ದಾರೆ.

ಅಂದು ಬೆಳಿಗ್ಗೆ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಗೆ ಮನವಿ ಪತ್ರ ಸಲ್ಲಿಕೆ ಮಾಡಲಾಗುವುದು. ಚುನಾವಣೆ ಭರವಸೆಯಂತೆ ಗೌರವ ಧನವನ್ನು ₹15,000ಕ್ಕೆ ಹೆಚ್ಚಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಸುಪ್ರೀಂಕೋರ್ಟ್ ಆದೇಶದಂತೆ ಅಂಗನವಾಡಿ ನೌಕರರಿಗೆ ಗ್ರಾಚ್ಯುಟಿಯನ್ನು ನಿವೃತ್ತಿಯಾದ ಎಲ್ಲಾ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೀಡಬೇಕು. ಈಗಿರುವ ನಿರ್ಬಂಧಗಳನ್ನು ತೆಗೆದು ಹಾಕಬೇಕು. ಸರ್ಕಾರದ ‘ಸಿ’ ಮತ್ತು ‘ಡಿ’ ಗ್ರೂಪ್ ನೌಕರರೆಂದು ಪರಿಗಣಿಸಬೇಕು. ವಿವಿಧ ಗಂಭೀರ ಕಾಯಿಲೆಗಳ ಚಿಕಿತ್ಸೆಗಳಿಗೆ ನೀಡುತ್ತಿರುವ ವೈದ್ಯಕೀಯ ವೆಚ್ಚಗಳ ಸಹಾಯ ಧನ ಕನಿಷ್ಠ ₹2 ಲಕ್ಷಕ್ಕೆ ಹೆಚ್ಚಿಸಬೇಕು ಎಂದಿದ್ದಾರೆ.

ADVERTISEMENT

ಈಗಾಗಲೇ ನಿವೃತ್ತಿಯಾದ ನೌಕರರಿಗೆ ₹50,000 ಮತ್ತು ₹30,000 ನಿವೃತ್ತಿ ಪರಿಹಾರ ಸಿಗುತ್ತಿಲ್ಲ. ಇದನ್ನು ಪರಿಹರಿಸಿ ಸರಳವಾಗಿ ನಿವೃತ್ತಿ ಪರಿಹಾರ ಸಿಗುವಂತೆ ಕ್ರಮವಹಿಸಬೇಕು. ಜೊತೆಗೆ ಸರ್ಕಾರದ ಪಿಂಚಣಿ ಯೋಜನೆಗೆ ಒಳಪಡಿಸಬೇಕು. ಅಲ್ಲಿಯವರೆಗೂ ನಿವೃತ್ತಿ ಪರಿಹಾರ ಇಡುಗಂಟು ₹ 5 ಲಕ್ಷ ನಿಗದಿ ಮಾಡಬೇಕು. ಸೇವಾ ಹಿರಿತನವನ್ನು ಆಧರಿಸಿ ಶೇ 50ರಷ್ಟು ಮತ್ತು ಮೆರಿಟ್ ಆಧರಿಸಿ ಶೇ 50ರಷ್ಟು ಮೇಲಿನ ಹುದ್ದೆಗೆ ಮುಂಬಡ್ತಿಗೆ ಆದೇಶ ಮಾಡಬೇಕು ಎಂದು ಕೋರಿದ್ದಾರೆ.

ಐಸಿಡಿಎಸ್ ಕೆಲಸಗಳನ್ನು ಹೊರತುಪಡಿಸಿ, ಇತರ ಇಲಾಖೆಗಳ ಹೆಚ್ಚುವರಿ ಕೆಲಸಗಳನ್ನು ನೀಡಬಾರದು ಎನ್ನುವ ಆದೇಶವನ್ನು ಎಲ್ಲಾ ಜಿಲ್ಲೆಗಳಲ್ಲಿ ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ವಹಿಸಬೇಕು. ಈಗ ಮಾಡುತ್ತಿರುವ ಹೆಚ್ಚುವರಿ ಕೆಲಸಗಳಿಂದ ಬಿಡುಗಡೆ ಮಾಡಬೇಕು. ಪ್ರತಿ ತಿಂಗಳು 5ನೇ ತಾರೀಖಿನ ಒಳಗಾಗಿ, ಮಾಸಿಕ ವೇತನ ಪಾವತಿ ಮಾಡಬೇಕು. ಮಾತೃ ವಂದನಾ, ಭಾಗ್ಯಲಕ್ಷ್ಮಿ ಕೆಲಸಗಳಿಗೆ ಹೆಚ್ಚುವರಿ ಗೌರವ ಧನವನ್ನು ನೀಡಬೇಕು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.