ADVERTISEMENT

ಮಾಸಿಕ ₹10 ಸಾವಿರ ಗೌರವಧನಕ್ಕೆ ಆದೇಶಿಸಿ: ಆಶಾ ಕಾರ್ಯಕರ್ತೆಯರ ಸಂಘ ಆಗ್ರಹ

ಅಂಗನವಾಡಿ ನೌಕರರನ್ನು ಬಿಎಲ್‌ಒ ಕೆಲಸಗಳಿಂದ ಕೈ ಬಿಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಜುಲೈ 2025, 6:15 IST
Last Updated 16 ಜುಲೈ 2025, 6:15 IST
ಯಾದಗಿರಿ ಜಿಲ್ಲಾ ಪಂಚಾಯಿತಿ ಎದುರು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿ ಜಂಟಿಯಾಗಿ ಬೃಹತ್ ಪ್ರತಿಭಟನೆ ನಡೆಸಲಾಯಿತು
ಯಾದಗಿರಿ ಜಿಲ್ಲಾ ಪಂಚಾಯಿತಿ ಎದುರು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿ ಜಂಟಿಯಾಗಿ ಬೃಹತ್ ಪ್ರತಿಭಟನೆ ನಡೆಸಲಾಯಿತು   

ಯಾದಗಿರಿ: ‘ಮುಖ್ಯಮಂತ್ರಿ ನೀಡಿದ ಭರವಸೆಯಂತೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹10 ಸಾವಿರ ಗೌರವಧನ ವಿತರಣೆಗೆ ಆದೇಶ ಮಾಡಬೇಕು. ಮೌಲ್ಯಮಾಪನ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯುವ ಪ್ರಕ್ರಿಯೆ ಕೈಬಿಡಬೇಕು’ ಎಂದು ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿ ಜಂಟಿಯಾಗಿ ಜಿಲ್ಲಾ ಪಂಚಾಯಿತಿ ಎದುರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

‘ಅಂಗನವಾಡಿ ನೌಕರರನ್ನು ಬಿಎಲ್‌ಒ ಕೆಲಸಗಳಿಂದ ಕೈ ಬಿಡಬೇಕು. ಎಫ್‌ಆರ್‌ಎಸ್ ಫೇಸ್ ಕ್ಯಾಪ್ಚರ್ ಕೆಲಸ ಕೈಬಿಡಬೇಕು. ಕೇಂದ್ರ ಸರ್ಕಾರದ ಗೌರವಧನ ಹೆಚ್ಚಿಸುವುದು’ ಸೇರಿದಂತೆ ಇತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರಾಯಚೂರು ಸಂಸದ ಜಿ.ಕುಮಾರ ನಾಯಕ, ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು, ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಪತ್ರವನ್ನು ಸ್ವೀಕರಿಸಿದ ಸಂಸದ ಕುಮಾರನಾಯಕ ಅವರು, ‘ನಿಮ್ಮ ಬೇಡಿಕೆಗಳು ನ್ಯಾಯಯುತವಾಗಿವೆ. ಈ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತರುತ್ತೇನೆ ಮತ್ತು ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯ ಮಾಡುತ್ತೇನೆ’ ಎಂದರು.

ADVERTISEMENT

ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಹಾಗೂ ಸುರಪುರದ ಶಾಸಕ ರಾಜಾ ವೇಣುಗೋಪಾಲ ನಾಯಕ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ನೌಕರರ ಕುರಿತು ಈ ಮನವಿ ಪತ್ರದಲ್ಲಿ ಇರುವ ವಿಷಯಗಳ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆದು, ಅವುಗಳ ಈಡೇರಿಸಲು ಒತ್ತಾಯಿಸುತ್ತೇವೆ ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ, ಜಿಲ್ಲಾ ಅಧ್ಯಕ್ಷೆ ಡಿ.ಉಮಾದೇವಿ, ಅಂಗನವಾಡಿ ಯೂನಿಯನ್ ಜಿಲ್ಲಾ ಕಾರ್ಯದರ್ಶಿ ರೇಣುಕಾ ಪಾಟೀಲ, ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಕಾರ್ಯದರ್ಶಿ ದೇವಕಿ ಹಾಗೂ ಎರಡೂ ಸಂಘಗಳ ಜಿಲ್ಲಾ ಪದಾಧಿಕಾರಿಗಳಾದ ಪುಷ್ಪಾ, ಅಶ್ವಿನಿ, ಚಾಂದಬಿ, ಶಾಂತಮ್ಮ, ತಾಯಮ್ಮ, ಮಹಾದೇವಿ, ದಾನಮ್ಮ, ರಾಧಾ, ನಿರ್ಮಲಾ, ಶೈಲಜಾ, ಗಿರಿಜಾ, ಶಾರದಾ, ಪ್ರತಿಮಾ, ಅಯ್ಯಮ್ಮ, ಸಾವಿತ್ರಿ, ಏಲಿಜಾ, ಶ್ರೀದೇವಿ, ರಾಜೇಶ್ವರಿ, ವಿಜಯಲಕ್ಷ್ಮೀ, ರಾಗಮ್ಮ, ಅಂಜನಮ್ಮ, ಭಾಗಿರಥಿ, ನಿರ್ಮಲಾ, ರೇಣುಕಾ ಹಾಗೂ ನೂರಾರು ಆಶಾ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.