ADVERTISEMENT

ಯಾದಗಿರಿ: 14ರಂದು ‘ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ’ ಪ್ರದಾನ

​ಪ್ರಜಾವಾಣಿ ವಾರ್ತೆ
Published 1 ಜನವರಿ 2022, 7:34 IST
Last Updated 1 ಜನವರಿ 2022, 7:34 IST
ಬಸವಜಯ ಮೃತ್ಯುಂಜಯಸ್ವಾಮೀಜಿ
ಬಸವಜಯ ಮೃತ್ಯುಂಜಯಸ್ವಾಮೀಜಿ   

ಯಾದಗಿರಿ: ಜನವರಿ 14ಕ್ಕೆ ಪಾದಯಾತ್ರೆ ಆರಂಭಿಸಿ ಒಂದು ವರ್ಷ ಪೂರೈಸಲಿದೆ. ಈ ನಿಟ್ಟಿನಲ್ಲಿ ಕೂಡಲಸಂಗಮದಲ್ಲಿ ವರ್ಷಾಚರಣೆ, ಮೀಸಲಾತಿಗಾಗಿ ಪಂಚಮಸಾಲಿಗಳ ಜಾಗರಣೆ ಮತ್ತು ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಮುಖ್ಯಮಂತ್ರಿ ಸೇರಿದಂತೆ ಗಣ್ಯರು, ಹರ, ಗುರು, ಚರಮೂರ್ತಿಗಳು ಕಾರ್ಯಕ್ರದಲ್ಲಿ ಪಾಲ್ಗೊಳ್ಳಲಿದ್ದು, ಜಿಲ್ಲೆಯಿಂದ ಸಮುದಾಯದ ಜನತೆ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುವಂತೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವುದಾಗಿ ಭರವಸೆ ನೀಡಿದ್ದು, ಸಿಎಂ ಮೇಲೆ ತಮಗೆ ವಿಶ್ವಾಸವಿದೆ. ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೆ.15ರೊಳಗೆ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಮಧ್ಯದಲ್ಲೇ ಅವರು ಅಧಿಕಾರದಿಂದ ನಿರ್ಗಮಿಸಿದ್ದಾರೆ. ಈಗಿನ ಸಿಎಂ ಮೇಲೆ ನಿರಂತರವಾಗಿ ಒತ್ತಡ ಹೇರಲಾಗಿದೆ. ಹೀಗಾಗಿ ಬೊಮ್ಮಾಯಿ ಅವರು ಸತ್ಯಾಗ್ರಹ ಮಾಡದಂತೆ ಮನವಿ ಮಾಡಿದ್ದಲ್ಲದೆ ಮತ್ತೆ 3 ತಿಂಗಳ ಕಾಲಾವಕಾಶ ಕೇಳಿದ್ದಾರೆ ಎಂದರು.

ADVERTISEMENT

16ರಂದು ಬೆಳಗಾವಿಯಲ್ಲಿ ನಾವು ಕರೆದಿದ್ದ ಸಮುದಾಯದ ಹಾಲಿ, ಮಾಜಿ ಶಾಸಕರ ಸಭೆಗೆ ಖುದ್ದಾಗಿ ಮುಖ್ಯಮಂತ್ರಿಗಳೇ ಆಗಮಿಸಿ ಸಮುದಾಯವನ್ನು 2ಎ ಸೇರ್ಪಡೆ ಮಾಡಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಂಚಮಸಾಲಿಯ ದೀಕ್ಷಾದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ, ಅವರಿಗೆ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ನಾವು ಜಾಗೃತಿ ಮೂಡಿಸಲು ಮುಂದಿನ ದಿನಗಳಲ್ಲಿ ಅಭಿಯಾನ ಕೈಗೊಳ್ಳಲಿದ್ದೇವೆ ಎಂದು ಮಾಹಿತಿ ನೀಡಿದರು.

ಪ್ರಮುಖರಾದ ಕಾಂತು ಪಾಟೀಲ ಮದ್ದರಕಿ, ಅವಿನಾಶ ಜಗನ್ನಾಥ, ದೇವಿಂದ್ರಪ್ಪಗೌಡ , ಅನಿತಾ ಮೇಟಿ, ಚನ್ನು ಸಾಹು ವಾಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.