ಹುಣಸಗಿ: ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಆದ್ದರಿಂದ ಯಾವುದೇ ಸಂದರ್ಭದಲ್ಲಿ ಕೃಷ್ಣಾ ನದಿಗೆ ನೀರು ಹರಿಸಬಹುದಾಗಿದೆ. ನದಿ ತೀರದಲ್ಲಿರುವ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಜಲಾಶಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ನಾಯ್ಕೋಡಿ
ತಿಳಿಸಿದ್ದಾರೆ.
ಬಸವಸಾಗರ ಜಲಾಶಯದ ಮಟ್ಟ 490.46 ಮೀ. ಇದ್ದು ಒಟ್ಟು 25 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಒಳಹರಿವು 27 ಸಾವಿರ ಕ್ಯೂಸೆಕ್ ಇದೆ. ಯಾವುದೇ ಸಂದರ್ಭದಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುವ ನಿರೀಕ್ಷೆ ಇದೆ. ಆದ್ದರಿಂದ ಜಲಾಶಯದ ಸುರಕ್ಷಿತ ಮಟ್ಟ ಕಾಯ್ದುಕೊಂಡು ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಐಸಿಸಿ ಸಭೆಗೆ ಒತ್ತಾಯ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಹರಿಸುವ ನಿಟ್ಟಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಕರೆಯಬೇಕು ಎಂದು ಶಾಸಕ ರಾಜೂಗೌಡ ಒತ್ತಾಯಿಸಿದ್ದಾರೆ.
ಈ ಕುರಿತು ಸಮಿತಿಯ ಅಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ವಿನಂತಿಸಿರುವುದಾಗಿ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.