ADVERTISEMENT

‘ದೃಷ್ಟಿದೋಷ ಬರುವ ಮೊದಲೇ ಎಚ್ಚರ ವಹಿಸಿ’

ವಿಶ್ವ ಗ್ಲಾಕೋಮಾ ಸಪ್ತಾಹ ಕಾರ್ಯಕ್ರಮದಲ್ಲಿ ಡಾ.ಭಗವಂತ ಅನವಾರ ಸಲಹೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2020, 10:09 IST
Last Updated 12 ಮಾರ್ಚ್ 2020, 10:09 IST
ಯಾದಗಿರಿ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಬುಧವಾರ ವಿಶ್ವ ಗ್ಲಾಕೋಮಾ ಸಪ್ತಾಹ ಕಾರ್ಯಕ್ರಮ ಜರುಗಿತು
ಯಾದಗಿರಿ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಬುಧವಾರ ವಿಶ್ವ ಗ್ಲಾಕೋಮಾ ಸಪ್ತಾಹ ಕಾರ್ಯಕ್ರಮ ಜರುಗಿತು   

ಯಾದಗಿರಿ: ಗ್ಲಾಕೋಮಾ ಮನುಷ್ಯನ ದೃಷ್ಟಿಯನ್ನು ಕದಿಯುವ ಕಾಯಿಲೆಯಾಗಿದೆ. ದೃಷ್ಟಿದೋಷ ಬರುವ ಮೊದಲೇ ಎಚ್ಚರಿಕೆ ವಹಿಸಬೇಕು. ಪಂಚೇಂದ್ರಿಗಳಲ್ಲಿ ಕಣ್ಣು ಬಹು ಮುಖ್ಯ ಅಂಗವಾಗಿದೆ. ಪ್ರತಿಯೊಬ್ಬರೂ ಕಣ್ಣಿನ ಪರೀಕ್ಷೆ ಮಾಡಿಸಿ, ಕಾಳಜಿ ವಹಿಸಬೇಕು ಎಂದು ಜಿಲ್ಲಾ ಅಂಧತ್ವ ನಿಯಂತ್ರಣ ಅಧಿಕಾರಿ ಡಾ.ಭಗವಂತ ಅನವಾರ ತಿಳಿಸಿದರು.

ನಗರದ ಸರ್ಕಾರಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಅಧಿಕಾರಿ ಕಾರ್ಯಾಲಯ, ಭಾರತೀಯ ವೈದ್ಯಕೀಯ ಸಂಘ ಹಾಗೂ ರೆಡ್ ಕ್ರಾಸ್ ಘಟಕದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಗ್ಲಾಕೋಮಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಕಣ್ಣಿನ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಸೌಲಭ್ಯವಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಗ್ಲಾಕೋಮಾ ಬಗ್ಗೆ ಕುಟುಂಬದವರಿಗೆ ತಿಳಿಸಬೇಕು. ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಗ್ಲಾಕೋಮಾದ ಲಕ್ಷಣಗಳು

ತಲೆನೋವು, ಕಣ್ಣು ಕೆಂಪಾಗುವುದು, ದೃಷ್ಟಿ ಕಡಿಮೆಯಾಗುವಿಕೆ, ಬಣ್ಣ ಬದಲಾವಣೆ ಇವು ಗ್ಲಾಕೋಮಾದ ಲಕ್ಷಣಗಳಾಗಿವೆ ಎಂದು ಡಾ.ಭಗವಂತ ಅನವಾರ ತಿಳಿಸಿದರು.

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ್‍ರಾವ್ ದೊಡ್ಮನಿ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಹೆಚ್ಚಾಗಿ ಮೊಬೈಲ್, ಟಿ.ವಿ ನೋಡುವುದರಿಂದಲೂ ಕಣ್ಣಿನ ಮೇಲೆ ದುಷ್ಪರಿಣಾಮ ಬೀರುತ್ತದೆ. ಕಣ್ಣಿನ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು’ ಎಂದರು.

ವಿಜಯಲಕ್ಷ್ಮಿಆಸ್ಪತ್ರೆಯ ನೇತ್ರ ತಜ್ಞ ಡಾ.ಸಮೀನಾ ನೀಲಕಂಠ ಸೈದಾಪುರ ಮಾತನಾಡಿ, ‘ಗ್ಲಾಕೋಮಾ ರೋಗವು ತಿಳಿಯದ ರೀತಿಯಲ್ಲಿ ಬಂದು ಕಣ್ಣಿನ ನರಗಳನ್ನು ನಿಶ್ಯಕ್ತಗೊಳಿಸಿ, ದೃಷ್ಟಿ ದೋಷ ಕಡಿಮೆ ಮಾಡುತ್ತದೆ. ಈ ದೃಷ್ಟಿದೋಷವು ಹುಟ್ಟಿನಿಂದ ವೃದ್ಧರವರೆಗೂ ಬರಬಹುದು. ಪ್ರತಿಯೊಬ್ಬರೂ ವರ್ಷಕ್ಕೊಮ್ಮೆ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದರು.

ಐಎಂಎ ಜಿಲ್ಲಾಧ್ಯಕ್ಷ ಡಾ.ಸಿ.ಎಂ.ಪಾಟೀಲ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ನಂದಣ್ಣ ಪಾಟೀಲ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯರು ಇದ್ದರು.

ಕಿರಿಯ ಆರೋಗ್ಯ ಸಹಾಯಕ ಶರಣಬಸಪ್ಪ ಹೊಸಮನಿ ಸ್ವಾಗತಿಸಿದರು. ಹಿರಿಯ ಆರೋಗ್ಯ ಸಹಾಯಕ ಮಹಿಪಾಲರೆಡ್ಡಿ ನಿರೂಪಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದಕುಮಾರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.