
ಯಾದಗಿರಿ: ‘ಕ್ಯಾನ್ಸರ್ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪ್ರತಿಯೊಬ್ಬರೂ ತಪಾಸಣೆ ಮಾಡಿಸಿಕೊಳ್ಳಿ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಬಿರಾದಾರ ಹೇಳಿದರು.
ಯಾದಗಿರಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಸಿ.ಡಿ. ವಿಭಾಗ, ಕಲಬುರಗಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಒರಾಕಲ್ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಬಾಯಿ, ಸ್ತನ ಮತ್ತು ಗರ್ಭಕಂಠ ಕ್ಯಾನ್ಸರ್ ಜಾಗೃತಿ ಮತ್ತು ತಡೆಯುವಿಕೆ ಕೈಪಿಡಿ ಬಿಡುಗಡೆ ಹಾಗೂ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
‘ಈಗಾಗಲೇ ಆರೋಗ್ಯ ಇಲಾಖೆ ಮತ್ತು ಕಲಬುರಗಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಸಹಯೋಗದಲ್ಲಿ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ನಡೆಸುತ್ತಿದ್ದು, ಸಾರ್ವಜನಿಕರು ಸದುಪಯೋಗ ಪಡೆಯುತ್ತಿದ್ದಾರೆ’ ಎಂದರು.
ಜಿಲ್ಲಾ ಎನ್.ಸಿ.ಡಿ ಅಧಿಕಾರಿ ಡಾ.ಪದ್ಮಾನಂದ ಗಾಯಕ್ವಾಡ ಮಾತನಾಡಿ, ‘ಕ್ಯಾನ್ಸರ್ನಿಂದ ದೂರವಿರಲು ನಮ್ಮ ಜೀವನ ಪದ್ದತಿ ಮತ್ತು ಆಹಾರ ಪದ್ದತಿ ಸರಿಪಡಿಸಿಕೊಳ್ಳಬೇಕು ಮತ್ತು ಲಕ್ಷಣಗಳು ಕಂಡರೆ ವೈದ್ಯರನ್ನು ಸಂಪರ್ಕಿಸಬೇಕು’ ಎಂದರು.
ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಮಲ್ಲನಗೌಡ ಪಾಟೀಲ ಅವರು ಮಾತನಾಡಿ, ‘ನಮ್ಮ ದೇಶದಲ್ಲಿ ಮಹಿಳೆಯರಿಗೆ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಹೆಚ್ಚಾಗಿ ಬರುತ್ತಿದ್ದು, 30 ವರ್ಷ ಮೇಲ್ಪಟ್ಟ ಎಲ್ಲಾ ವಿವಾಹಿತ ಮಹಿಳೆಯರು ಕಡ್ಡಾಯವಾಗಿ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು’ ಎಂದು ತಿಳಿಸಿದರು.
ಕಲಬುರಗಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಪ್ರಾದೇಶಿಕ ವ್ಯವಸ್ಥಾಪಕ ಗುರುರಾಜ ಕುಲಕರ್ಣೀ ಅವರು ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರಿಗೆ ಬಾಯಿ, ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಕುರಿತು ವಿವರಿಸಿದರು.
ಜಿಲ್ಲಾ ಡಿಪಿಡಿಒ ಅಧಿಕಾರಿ ಡಾ.ಮುದಾಸ್ಸಿರ್ ಅಹ್ಮದ್ ಸಾಜಿದ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಜ್ಯೋತಿ ಕಟ್ಟಿಮನಿ, ಕಲಬುರಗಿಯ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಪ್ರಾದೇಶಿಕ ಸಂಯೋಜನಾಧಿಕಾರಿ ಶ್ರೀನಿದಿ ನಾಯ್ಕಲ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಲಕ್ಷ್ಮಿ ಬಿ ಮುಂಡಾಸ್ ನಿರ್ವಹಿಸಿ, ಡಾ.ರಶೀದ್ ಸ್ವಾಗತಿಸಿ, ತುಳಸಿರಾಮ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.