ADVERTISEMENT

ಸನ್ನತಿ: ಸಭೆ ಕರೆಯಲು ‌ಕೆಪಿಆರ್‌ಎಸ್ ಮನವಿ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2019, 19:45 IST
Last Updated 4 ಡಿಸೆಂಬರ್ 2019, 19:45 IST
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಯಲ್ಲಪ್ಪ ಚಿನ್ನಾಕಾರ ಹಾಗೂ ತಾಲ್ಲೂಕು ಅಧ್ಯಕ್ಷ ಮುದುಕಪ್ಪ ಚಾಮನಳ್ಳಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಯಲ್ಲಪ್ಪ ಚಿನ್ನಾಕಾರ ಹಾಗೂ ತಾಲ್ಲೂಕು ಅಧ್ಯಕ್ಷ ಮುದುಕಪ್ಪ ಚಾಮನಳ್ಳಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು   

ಯಾದಗಿರಿ:ತಾಲ್ಲೂಕಿನ ಚಾಮನಳ್ಳಿ, ಹೋರುಂಚಾ ಗ್ರಾಮಗಳಲ್ಲಿಸನ್ನತಿ ಏತ ನೀರಾವರಿ ಯೋಜನೆಯ ಕಾಲುವೆ ನೀರು ಹರಿಯುವ ಮೊದಲೇ ಕಾಲುವೆಗಳು ಶಿಥಿಲಗೊಂಡಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಕೆಪಿಆರ್‌ಎಸ್ ತಾಲ್ಲೂಕು ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.

ಮಂಗಳವಾರ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಯಲ್ಲಪ್ಪ ಚಿನ್ನಾಕಾರ ಹಾಗೂ ತಾಲ್ಲೂಕು ಅಧ್ಯಕ್ಷ ಮುದುಕಪ್ಪ ಚಾಮನಳ್ಳಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು ಸಮಸ್ಯೆ ವಿವರಿಸಿದರು.

2015-16ನೇ ಸಾಲಿನಲ್ಲಿ ಭೂಸ್ವಾಧೀನ ಪಡಿಸಿಕೊಂಡ ಸುಮಾರು 100 ಎಕರೆ ರೈತರ ಜಮೀನಿಗೆ ಇದುವರೆಗೆ ಪರಿಹಾರ ನೀಡದೇ ಅಧಿಕಾರಿಗಳು ಸತಾಯಿಸುತ್ತಿದ್ದು, ತಕ್ಷಣ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಮತ್ತು ಕಾಮಗಾರಿ ಕಳಪೆಯಾಗಿದ್ದು ಇದನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ತಕ್ಷಣ ಕ್ರಮ ವಹಿಸಿ ಕಳೆದ 4 ವರ್ಷಗಳಿಂದ ಜಮೀನು ಕಳೆದುಕೊಂಡ ರೈತರಿಗೆ ಭೂಸ್ವಾಧೀನದ ಮೊತ್ತ ಪರಿಹಾರ ಬಡ್ಡಿ ಸಮೇತ ನೀಡಬೇಕು. ಕಳಪೆಯಾಗಿರುವ ಕಾಮಗಾರಿ ತನಿಖೆ ನಡೆಸಬೇಕು. ಈ ಯೋಜನೆಯಡಿ ಯರಗೋಳವರೆಗೆ ನೀರು ತಲುಪಿದೆ. ಆದರೆ,ಚಾಮನಳ್ಳಿ, ಹೋರುಂಚಾ ಭಾಗಕ್ಕೆ ನೀರು ಇನ್ನು ಹರಿಯುತ್ತಿಲ್ಲ. ತಕ್ಷಣ ನೀರು ಹರಿಸಲು ಕ್ರಮ ಕೈಗೊಂಡು ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಕ್ಷಣ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆ ಇತ್ಯರ್ಥ ಪಡಿಸಬೇಕು. ಇಲ್ಲವಾದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಅಬ್ದುಲ್ ರಹಿಮಾನ್, ಆಂಜಿನೇಯ ಹೆಡಿಗಿಮುದ್ರಿ, ಚಂದಾಸಾಬ ಹೆಡಿಗಿಮುದ್ರಿ, ಚಂದ್ರಕಾಂತ ಹೆಡಿಗಿಮುದ್ರ, ರಫೀಕ್ ಸುರಪುರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.