ಸುರಪುರ: ‘ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾರ್ವಜನಿಕರಿಗೆ ಕಾನೂನು ಅರಿವು ಅಗತ್ಯವಿದೆ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ದುಡಿಮೆಗೆ ಕಳುಹಿಸದೆ ಶಿಕ್ಷಣ ಪಡೆಯಲು ಕಳುಹಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಹೇಳಿದರು.
ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ, ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಬಾಲ ಕಾರ್ಮಿಕ ಪದ್ಧತಿಗೆ ಬಡತನ ಪ್ರಮುಖ ಕಾರಣ. ಇದರಿಂದಾಗಿ ಮಕ್ಕಳು ಶಾಲೆಗೆ ಹೋಗದೆ ತಮ್ಮ ಪೋಷಕರ ಜತೆ ಜೀವನೋಪಾಯಕ್ಕಾಗಿ ಉದ್ಯೋಗಗಳನ್ನು ಅರಸುತ್ತಾರೆ. ಈ ಪದ್ಧತಿ ಹೋಗಲಾಡಿಸುವುದು ಸಮಾಜದ ಹೊಣೆಗಾರಿಕೆಯಾಗಿದೆ. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರು ಕೈ ಜೋಡಿಸಬೇಕು’ ಎಂದು ತಿಳಿಸಿದರು.
‘14 ವರ್ಷ ವಯಸ್ಸಿನೊಳಗಿನ ಮಕ್ಕಳು ಶಾಲೆಯಲ್ಲಿರಬೇಕೆ ಹೊರತು ದುಡಿಮೆಯಲ್ಲಿ ಅಲ್ಲ. ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ’ ಎಂದು ತಿಳಿಸಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ವಕೀಲ ಭೀಮಪ್ಪ ದೊಡ್ಡಮನಿ ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಫಕೀರವ್ವ ಕೆಳಗೇರಿ, ಪ್ರಧಾನ ದಿವಾನಿ ನ್ಯಾಯಾಧೀಶ ಬಸವರಾಜ, ವಕೀಲರ ಸಂಘದ ಅಧ್ಯಕ್ಷ ರಮಾನಂದ ಕವಲಿ, ಎಪಿಪಿ ಸುರೇಶ ಪಾಟೀಲ, ಉಪ ಪ್ರಾಂಶುಪಾಲ ಯಲ್ಲಪ್ಪ ಬೊಮ್ಮನಳ್ಳಿ, ಕಾರ್ಮಿಕ ನಿರೀಕ್ಷಕ ಶಿವಪ್ಪ ಜಮಾದಾರ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.