ADVERTISEMENT

ಬಾಲ್ಯವಿವಾಹ ಮುಕ್ತ ಭಾರತಕ್ಕೆ ಕೈಜೋಡಿಸಿ: ನ್ಯಾಯಾಧೀಶ ಮರಿಯಪ್ಪ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2026, 4:45 IST
Last Updated 4 ಫೆಬ್ರುವರಿ 2026, 4:45 IST
ಯಾದಗಿ ತಾಲ್ಲೂಕಿನ ಖಾನಹಳ್ಳಿಯಲ್ಲಿ ಈಚೆಗೆ ನಡೆದ  ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಉದ್ಘಾಟಿಸಿದರು. ಪ್ರಮುಖರು ಉಪಸ್ಥಿತರಿದ್ದರು
ಯಾದಗಿ ತಾಲ್ಲೂಕಿನ ಖಾನಹಳ್ಳಿಯಲ್ಲಿ ಈಚೆಗೆ ನಡೆದ  ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಉದ್ಘಾಟಿಸಿದರು. ಪ್ರಮುಖರು ಉಪಸ್ಥಿತರಿದ್ದರು   

ಯಾದಗಿರಿ: ‘ಬಾಲಕಾರ್ಮಿಕ ಹಾಗೂ ಬಾಲ್ಯವಿವಾಹ ಮುಕ್ತ ಭಾರತ ನಿರ್ಮಾಣವಾಗಲು ಸಮುದಾಯದ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಹೇಳಿದರು.  

ತಾಲ್ಲೂಕಿನ ಖಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಜಿಲ್ಲಾ ಕಾನೂನು ಸೇವೆಗಳ ಪಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಹಾಗೂ ವಿವಿಧ ಇಲಾಖೆ ಮತ್ತು ಸಂಘ-ಸಂಸ್ಥೆಗಳ ವತಿಯಿಂದ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅಡಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, ತಿದ್ದುಪಡಿ ಕಾಯ್ದೆ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಬಾಲಕಾರ್ಮಿಕ ಮಕ್ಕಳ ದುಡಿಮೆಯನ್ನು ನಿಷೇಧಿಸಲು ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಜಾರಿಗೆ ತರಲಾಗಿದೆ. ಮಕ್ಕಳನ್ನು ದುಡಿಮೆಯಲ್ಲಿ ತೊಡಗಿಸುವಂತಿಲ್ಲ’ ಎಂದರು.

ADVERTISEMENT

‘ಬಾಲಕಾರ್ಮಿಕ, ಕಿಶೋರ ಕಾರ್ಮಿಕ ಪದ್ಧತಿ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ಶಾಲೆಯನ್ನು ಬಿಟ್ಟು ಹೊಲಗಳಲ್ಲಿ ದುಡಿಯಲು ಹೋದರೆ ತರಗತಿಯ ಪಾಠಗಳು ತಪ್ಪುತ್ತವೆ. ಇದರಿಂದ ಮಗು ಕಲಿಕೆಯಲ್ಲಿ ಹಿಂದುಳಿದು, ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುತ್ತಾನೆ. ಹೀಗಾಗಿ, ಮಕ್ಕಳು ತಮ್ಮ ಪೋಷಕರು ಹೊಲಕ್ಕೆ ಕರೆದರೂ ಹೋಗದೆ ನಿತ್ಯ ಶಾಲೆಗೆ ಬಂದು ಅಭ್ಯಾಸ ಮಾಡಬೇಕು’ ಎಂದು ಹೇಳಿದರು.

ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ ಮಾತನಾಡಿ, ‘ಭಾರತದ ಸಂವಿಧಾನದ 21 ಎ ವಿಧಿಯು 6ರಿಂದ 14 ವರ್ಷದ ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣದ ಹಕ್ಕನ್ನು ನೀಡಿದೆ. ಇದನ್ನು ಪ್ರತಿಯೋಬ್ಬ ವಿದ್ಯಾರ್ಥಿಯು ಬಳಸಿಕೊಳ್ಳಬೇಕು’ ಎಂದರು.  

ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ‘ಓದುವ ಮಕ್ಕಳನ್ನು ಶಾಲೆ ಬಿಡಿಸಿ ಕೆಲಸಕ್ಕೆ ಕಳುಹಿಸುವುದು ಮತ್ತು ಅಂತಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಕಾನೂನು ಬಾಹಿರ. ಇದನ್ನು ಮೀರಿಯೂ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಂಡ ಮಾಲೀಕರ ವಿರುದ್ಧ ₹ 20,000ದಿಂದ ₹50,000 ವರೆಗೆ ದಂಡ, 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು’ ಎಂದು ಹೇಳಿದರು.

ಬಾಲ, ಕಿಶೋರ ಕಾರ್ಮಿಕ ಪದ್ಧತಿ ನಿಷೇಧ ಕುರಿತು ಆಯೋಜಿಸಿದ್ದ ಚಿತ್ರಕಲೆ, ಪ್ರಬಂಧ, ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಮಿಕ ನಿರೀಕ್ಷಕಿ ಸಂಗೀತಾ ಹೊನ್ನೂರು, ಪ್ಯಾನಲ್ ವಕೀಲ ಭೀಮಶಂಕರ ಆಶನಾಳ, ಡಾನ್ ಬೋಸ್ಕೋ ಸಮಾಜ ಸೇವಾ ಕೇಂದ್ರದ ನಿರ್ದೇಶಕ ಫ್ರಾನ್ಸಿಸ್ ಶಾಬು, ಜಿಲ್ಲಾ ಮಕ್ಕಳ ರಕ್ಷಣ ಘಟಕದ ರಾಜೇಂದ್ರ ಕುಮಾರ್, ದೇವಪ್ಪ ಗಿರಿಗಿರಿ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಹಣಮಂತ, ಶಿಕ್ಷಕರಾದ ರೀಟಾ, ಜೈಸುಧಾ, ಚಂದ್ರಭಾಗ, ಅಮೀನ್ ಪಾಷಾ, ಗ್ರಾಮಸ್ಥ ಹಣಮಂತ ಹೊಸಮನಿ, ಕಾರ್ಮಿಕ ಇಲಾಖೆಯ ದೀಪಕ್ ಸಿಂಗ್, ಬಾಲು ನಾಯಕ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.