ಯಾದಗಿರಿ: ‘ಮಕ್ಕಳಲ್ಲಿರುವ ಕಲೆ ಗುರುತಿಸಲು ಬಾಲವೇದಿಕೆ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ’ ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಹಣಮಂತ್ರಾಯ ಕರಡಿ ಹೇಳಿದರು.
ನಗರದ ಲುಂಬಿನಿ ಉದ್ಯಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಬಾಲ ಭವನ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಬಾಲವೇದಿಕೆ ಹಾಗೂ ವಾರಾಂತ್ಯ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಮಕ್ಕಳು ಸಮಯ ವ್ಯರ್ಥ ಮಾಡದೆ 5 ರಿಂದ16 ವರ್ಷದ ಮಕ್ಕಳು ನೃತ್ಯ, ಸಂಗೀತ ಮತ್ತು ಭರತನಾಟ್ಯ ಕಲೆಗಳಲ್ಲಿ ಭಾಗವಹಿಸಬಹುದು. ಜಿಲ್ಲೆಯ ಪ್ರತಿಭಾವಂತ ಮಕ್ಕಳು ಪ್ರತಿ ಭಾನುವಾರ ಲುಂಬಿನಿ ಉದ್ಯಾನದಲ್ಲಿ ಹಮ್ಮಿಕೊಳ್ಳುವ ಬಾಲವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು’ ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಧಾ ಜಿ.ಮಣ್ಣೂರ ಮಾತನಾಡಿ, ‘ಜಿಲ್ಲಾ ಬಾಲ ಭವನ ಸೊಸೈಟಿ ವತಿಯಿಂದ ಜಿಲ್ಲಾ ಹಾಗೂ ತಾಲ್ಲೂಕಿನಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಮೊಬೈಲ್ ಕಡೆಗೆ ವ್ಯಾಮೋಹ ಹೆಚ್ಚಾಗಿದ್ದು, ಇದರಿಂದ ಮಕ್ಕಳ ನಿತ್ಯದ ಚಟುವಟಿಕೆಗಳ ಮೇಲೆ ಪ್ರಭಾವ ಬೀರಿದೆ. ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಹಾಗೂ ಆಸಕ್ತಿಗಳನ್ನು ತಿಳಿದುಕೊಳ್ಳಲು ಬಾಲವೇದಿಕೆ ಕಾರ್ಯಕ್ರಮ ಸಹಕಾರಿಯಾಗಿದೆ’ ಎಂದರು.
ಸಾಹಿತಿ ಶೋಭಾ ಸಾಲಮಂಟಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗೌರಮ್ಮ ದೊಂತಾ, ನಾಗಮ್ಮ ಹಿರೇಮಠ ಹಾಗೂ ಜಿಲ್ಲಾ ಬಾಲ ಭವನ ಕಾರ್ಯಕ್ರಮ ಸಂಯೋಜಕ ಅನಿಲಕುಮಾರ ಪಾಟೀಲ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.