ಯಾದಗಿರಿ: ‘ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಜುಲೈ 10ರಂದು ನಗರ ಬಂದ್ ಆಚರಿಸಲಾಗುವುದು. ನಗರದ ಮೈಲಾಪುರ ಬೇಸ್ನಿಂದ ಗಾಂಧಿ ವೃತ್ತದ ಮಾರ್ಗವಾಗಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು. ಇದರಲ್ಲಿ ಜಿಲ್ಲೆಯ ಪ್ರತಿಯೊಬ್ಬರೂ ಭಾಗವಹಿಸಿ ನಮ್ಮ ಹಕ್ಕು ಪಡೆಯಲು ಭಾಗಿಯಾಗಬೇಕು’ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಮನವಿ ಮಾಡಿದರು.
ಮೆಡಿಕಲ್ ಕಾಲೇಜು ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ನೀಡಿದ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ತಮ್ಮ ಕಾರ್ಯಾಲಯದಲ್ಲಿ ಕರೆಯಲಾಗಿದ್ದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
‘ಈ ಭಾಗಕ್ಕೆ ನಿರಂತರ ಅನ್ಯಾಯ ಮಾಡುತ್ತ ಬರುತ್ತಿರುವವರ ಸಾಲಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಸೇರಿದ್ದಾರೆ. ಇಲ್ಲಿ ಮೆಡಿಕಲ್ ಕಾಲೇಜು ಅಗತ್ಯವಿಲ್ಲ ಎಂದು ಹೇಳಿ ಈ ಭಾಗದ ಜನರ ಸ್ವಾಭಿಮಾನ ಕೆಣಕಿದ್ದಾರೆ. ಇದಕ್ಕೆ ತಕ್ಕ ಉತ್ತರವನ್ನು ಬಂದ್ ಯಶಸ್ವಿಗೊಳಿಸುವ ಮೂಲಕ ಅವರ ಕಣ್ಣು ತೆರೆಸುವ ನಿಟ್ಟಿನಲ್ಲಿ ಹೋರಾಟ ನಡೆಸಬೇಕಿದೆ. ಶಾಂತಿಯುತವಾಗಿ ನಮ್ಮ ಹೋರಾಟ ನಡೆಸಿ ಯಾದಗಿರಿಗೆ ಕಾಲೇಜು ಮತ್ತು ಬೇಕಾದ ಅನುದಾನ ತರಲು ಹಂತ ಹಂತವಾಗಿ ಉಗ್ರ ಹೋರಾಟ ನಡೆಸಲು ಸಿದ್ಧ’ ಎಂದು ಹೇಳಿದರು.
ಈಗಾಗಲೇ ವಾಣಿಜ್ಯೋದ್ಯಮಿಗಳು, ವ್ಯಾಪಾರಸ್ಥರು ಬೆಂಬಲ ಸೂಚಿಸಿದ್ದು, ಇನ್ನುಳಿದಂತೆ ವಿವಿಧ ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಕಾಲೇಜು ವಿದ್ಯಾರ್ಥಿಗಳು ಪ್ರತಿಯೊಬ್ಬ ಸಾರ್ವಜನಿಕರು ಹೋರಾಟದಲ್ಲಿ ಭಾಗಿಯಾಗುವ ಮೂಲಕ ಅನ್ಯಾಯ ಖಂಡಿಸಿ ಹೋರಾಟಕ್ಕೆ ಧುಮುಕಬೇಕೆಂದು’ ಮನವಿ ಮಾಡಿದರು.
ಕರ್ನಾಟಕ ರಣಧೀರ ಪಡೆಯ ಜಿಲ್ಲಾಧ್ಯಕ್ಷ ಡಿ. ಭಾಸ್ಕರ್ ಅಲ್ಲಿಪುರ, ನಮ್ಮ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ರವಿ ರಾಠೋಡ ಮುದ್ನಾಳ, ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಚಂದ್ರಶೇಖರ ದಾಸನಕೇರಿ, ಜಯ ಕರ್ನಾಟಕ ಸಂಘಟನೆ ಮಲ್ಲಿಕಾರ್ಜುನ ಜಲ್ಲಪ್ಪನೋರ್, ಅನಿಲ್ ಮುಂಡ್ರಿಕೆರಿ, ಶಂಕರ ನಾಗ ಆಟೋ ಚಾಲಕರ ಸಂಘದ ಮಲ್ಲಿಕಾರ್ಜುನ ಸಾಂಗ್ಲಿಯಾನ,
ಬೆಂಜಮಿನ್ ಶಿವನೂರು, ವಿದ್ಯಾರ್ಥಿ ಮುಖಂಡ ಪವನಕುಮಾರ, ರೈತ ಸಂಘದ ಪದಾಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.