ಯಾದಗಿರಿ: ದೇಶದಲ್ಲಿ ದಿನದಿಂದ ದಿನಕ್ಕೆ ಆಹಾರ ಪದಾರ್ಥಗಳು, ತೈಲ, ಪೆಟ್ರೋಲಿಯಂ ಉತ್ಪನ್ನಗಳು ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಮುಖಂಡರು ಶನಿವಾರ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಚುನಾವಣೆಯ ಸಮಯದಲ್ಲಿ ನರೇಂದ್ರ ಮೋದಿ ಅವರು ಬಡವರಿಗೆ ಉಚಿತ ಸಿಲಿಂಡರ್ ನೀಡಿದ್ದರು. ಆದರೆ, ಈಗ ಬೆಲೆ ಏರಿಕೆಯಿಂದಾಗಿ ಆ ಕುಟುಂಬಗಳು ಸಿಲಿಂಡರ್ ಖರೀದಿಸಲಾಗದ ಸ್ಥಿತಿ ನಿರ್ಮಾಣವಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನ ಸಾಮಾನ್ಯರ ಸ್ಥಿತಿ ಗಂಭೀರವಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಚನ್ನರೆಡ್ಡಿ ಪಾಟೀಲ್ ತುನ್ನೂರು ಆಕ್ರೋಶ ವ್ಯಕ್ತಪಡಿಸಿದರು.
ಒಂದೆಡೆ ಆಹಾರ ಪದಾರ್ಥಗಳ ಬೆಲೆ ಏರಿದೆ ಇನ್ನೊಂದೆಡೆ ರೈತರ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಕೇಂದ್ರ ಸರ್ಕಾರ ರೈತರ ಹಿತ ಕಾಯುವ ಬದಲು
ಉದ್ಯಮಿಗಳ ಹಿತಕ್ಕಾಗಿ ಕೆಲಸ ಮಾಡುತ್ತಿದೆ. ಇನ್ನು ರಾಜ್ಯದಲ್ಲಿ ಬೊಮ್ಮಾಯಿ ಅವರ ಸರ್ಕಾರ ಜನಪರ ಕಾರ್ಯಗಳನ್ನು ಬಿಟ್ಟು ಧಾರ್ಮಿಕ ವಿಷಯದಲ್ಲಿ
ಹಸ್ತಕ್ಷೇಪ ಮಾಡುವ ಮೂಲಕ ಸಮಾಜದ ಸಾಮರಸ್ಯವನ್ನು ಕದಡುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮರಿಗೌಡ ಹುಲಕಲ್, ಮುಖಂಡರಾದ ಡಾ.ಭೀಮಣ್ಣ ಮೇಟಿ, ಹನುಮೇಗೌಡ ಮರಕಲ್, ಎ.ಸಿ.ಕಾಡ್ಲುರು, ಮಂಜುಳಾ ಗೂಳಿ, ಶ್ರೀನಿವಾಸರೆಡ್ಡಿ ಕಂದಕೂರ, ಲಾಯಕ್ ಹುಸೇನ್ ಬಾದಲ್, ಚಿದಾನಂದಪ್ಪ ಕಾಳಬೆಳಗುಂದಿ, ಮರೆಪ್ಪ ಬಿಳ್ಹಾರ, ಸುದರ್ಶನ ನಾಯಕ, ಮಾಣಿಕರೆಡ್ಡಿ ಕುರಕುಂದಿ, ಮಲ್ಲಣ್ಣ ದಾಸನಕೇರಿ, ಸಿದ್ರಾಮರೆಡ್ಡಿ ಕೌಳೂರು, ಮಹಿಪಾಲರೆಡ್ಡಿ ಹತ್ತಿಕುಣಿ, ವಿಶ್ವನಾಥ ನೀಲಹಳ್ಳಿ, ಬಸ್ಸುಗೌಡ ಬಿಳ್ಹಾರ, ಕುಮಾರ ನಾಯಕ, ಭೀಮಾಶಂಕರ ದೋರನಹಳ್ಳಿ, ಸಂಜೀವಕುಮಾರ ಕಾವಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.