ಯಾದಗಿರಿ: ಕಳೆದ ವರ್ಷ ಕೃಷ್ಣಾ ನದಿ ಪ್ರವಾಹದಿಂದ ಶಹಾಪುರ ಹಾಗೂ ವಡಗೇರಾ ತಾಲ್ಲೂಕಿನ ನದಿ ತೀರದ ಗ್ರಾಮಗಳ ರೈತರ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು. ಆದರೆ, ಇಲ್ಲಿಯವರೆಗೆ ಇನ್ನೂಪರಿಹಾರದ ಹಣ ನೀಡಿಲ್ಲ. ಮತ್ತೆ ಪ್ರವಾಹ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು ಕೊಳ್ಳೂರ, ಯಕ್ಷಂತಿ, ಮದರಕಲ್, ಟೊಣ್ಣೂರು, ಐಕೂರ, ಅನಕಸೂಗುರ ಸೇರಿದಂತೆ ಹಲವಾರು ಗ್ರಾಮಗಳ ರೈತರು ಜಿಲ್ಲಾ ಉಸ್ತುವಾರಿ ಸಚಿವರ ಮುಂದೆ ತಮ್ಮ ನೋವು ತೋಡಿಕೊಂಡರು.
ಈವೇಳೆ ಸಚಿವರು, ಕೃಷಿ ಅಧಿಕಾರಿಗಳನ್ನು ಕರೆದು ತರಾಟೆಗೆ ತೆಗೆದುಕೊಂಡು, ಸಮಗ್ರ ಮಾಹಿತಿ ಜಿಲ್ಲಾಡಳಿತಕ್ಕೆ ಇನ್ನು ಯಾಕೆ ನೀಡಿಲ್ಲ. ಅವರಿಗೆ ನ್ಯಾಯ ಒದಗಿಸಿಕೊಡಿ ಎಂದು ಸೂಚಿಸಿದರು. ಜಿಲ್ಲಾಧಿಕಾರಿ ಕೂರ್ಮಾರಾವ್ಮಧ್ಯೆಪ್ರವೇಶಿಸಿ ರೈತರ ಆಧಾರ್ ಕಾರ್ಡ್ಗಳಲ್ಲಿ ಕೆಲ ಲೋಪದೋಷಗಳು ಕಂಡು ಬಂದಿರುವುದರಿಂದ ಕೆಲ ರೈತರಿಗೆ ಪರಿಹಾರ ಹಣ ಸಂದಾಯವಾಗಿಲ್ಲ.ಸಮಸ್ಯೆ ಬಗೆಹರಿಸುತ್ತೇನೆ ಎಂದು ರೈತರಿಗೆ ಭರವಸೆ ನೀಡಿದರು.
ಇನ್ನು ಕೆಲ ರೈತರು ಫಸಲ್ ಬಿಮಾ ಯೋಜನೆ ಅಡಿ ವಿಮೆ ಹಣ ಕಟ್ಟಿದ್ದೇವೆ. ಬೆಳೆ ನಷ್ಟ ಪರಿಹಾರ ಹಣ ನೀಡಿಲ್ಲ ಎಂದು ದೂರಿದರು. ಈ ವರ್ಷ ನಾವು ಹಣ ಕಟ್ಟುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿ, ಕಂಪನಿಗಳ ಜೊತೆ ಈ ಸಮಸ್ಯೆ ಕುರಿತು ಚರ್ಚಿಸುತ್ತೇನೆ ಎಂದು ಸಮಾಧಾನ ಪಡಿಸಲು ಯತ್ನಿಸಿದರು. ಆದರೂ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಯಾದಗಿರಿ ಮತ ಕ್ಷೇತ್ರದ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.