ಯಾದಗಿರಿ: ದಲಿತರ ಭೂಮಿ ಮತ್ತು ವಸತಿ ಹಕ್ಕಿಗಾಗಿ ಮತ್ತು ಇತರೆ ಬೇಡಿಕೆಗಳಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲ್ಲೂಕು ಸಮಿತಿ ಪದಾಧಿಕಾರಿಗಳು ನಗರದ ತಹಶೀಲ್ದಾರ್ ಕಚೇರಿ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು. ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಮಿತಿ ತಾಲ್ಲೂಕು ಸಂಚಾಲಕ ಆಂಜನೇಯ ಬಳಿಚಕ್ರ, ಜಿಲ್ಲಾ ಸಂಚಾಲಕ ನಿಂಗಣ್ಣ ಬಿರಾನಾಳ, ಅಶೋಕ ನಾಯ್ಕಲ್, ‘ಪರಿಶಿಷ್ಟ ಜಾತಿ ವರ್ಗ ಭೂಹಿನ ತಳ ಸಮುದಾಯಗಳು ಉಳುಮೆ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿ(ದರಕಾಸ್ತು ಮಂಜೂರಾತಿ ಸಕ್ರಮೀಕರಣ) ಕಾಲಮಿತಿ ಒಳಗಾಗಿ ಇತ್ಯರ್ಥಗೊಳಿಸಬೇಕು. ವಿನಾಕಾರಣ ವಜಾಗೊಳಿಸಿರುವ ಬಗರ್ ಹುಕುಂ ಸಾಗುವಳಿ ಅರ್ಜಿಗಳನ್ನು ಮರುಪರಿಶೀಲಿಸಬೇಕು. ಇದಕ್ಕೆ ಅರ್ಜಿ ಹಾಕಿದ ರೈತರಿಗೆ ಭೂಮಿ ನೀಡಬೇಕು’ ಎಂದು ಆಗ್ರಹಿಸಿದರು.
‘ಪರಿಶಿಷ್ಟರ ಪಿಟಿಸಿಎಲ್ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯನ್ನು ಮಾನ್ಯ ಮಾಡಿದ ಕಂದಾಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಭೀಮರಾಯ ಬಳಿಚಕ್ರ, ಮಲ್ಲಿಕಾರ್ಜುನ ಸಂಗವಾರ, ಅನಿಲ್ ಅನ್ವರ್, ಬುಗ್ಗಪ್ಪ ಹಳಿಗೇರಾ, ತಾಯಪ್ಪ ಲಿಂಗೇರಿ, ಹನುಮಂತ ಶೆಟ್ಟಳ್ಳಿ, ಶಿವರಾಜ್ ಗೊಂದಡಗಿ, ಕಾಳಪ್ಪ ಗೊಂದಡಗಿ, ಚನ್ನಮಲ್ಲಪ್ಪ ಕ್ಯಾತನಹಳ್ಳಿ, ನಾಗಪ್ಪ ಕೊಂಡಾಪುರ ಸೇರಿದಂತೆ ಹೋಬಳಿ ಮತ್ತು ಗ್ರಾಮ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.