ADVERTISEMENT

ನೀತಿ ಸಂಹಿತೆ ಪಾಲಿಸಲು ಜಿಲ್ಲಾಧಿಕಾರಿ ಸೂಚನೆ

ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 6:40 IST
Last Updated 31 ಮಾರ್ಚ್ 2023, 6:40 IST
ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಸ್ನೇಹಲ್‌ ಆರ್‌ ಸಭೆ ನಡೆಸಿದರು
ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಸ್ನೇಹಲ್‌ ಆರ್‌ ಸಭೆ ನಡೆಸಿದರು   

ಯಾದಗಿರಿ: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಚುನಾವಣಾ ಆಯೋಗದ ನಿರ್ದೇಶನಗಳನ್ನು ತಪ್ಪದೇ ಪಾಲಿಸಬೇಕು. ಯಾವುದೇ ರಾಜಕೀಯ ಪಕ್ಷಗಳವರು ಸರ್ಕಾರಿ ವಾಹನ ಬಳಸಬಾರದು. ಯಾವುದೇ ಸಮಾವೇಶ, ಹೆಲಿಪ್ಯಾಡ್‌ಗಳ ಸ್ಥಳಕ್ಕೆ ಸಂಬಂಧಪಟ್ಟಂತೆ ನಿಯಮಾವಳಿಗಳನ್ನು ಪಾಲಿಸಬೇಕು ಎಂದು ಸೂಚಿಸಿದರು.

ADVERTISEMENT

ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಪ್ರಚಾರಕ್ಕಾಗಿ ಕಡ್ಡಾಯವಾಗಿ ಅನುಮತಿ ಪಡೆಯಬೇಕಾಗಿದ್ದು, ಯಾವುದೇ ಪ್ರಚಾರಕ್ಕೆ ಸಂಬಂಧಪಟ್ಟಂತೆ ಬಳಸುವ ಸಾಮಗ್ರಿ, ಸಲಕರಣೆ, ಪ್ರಚಾರ ಸಾಮಗ್ರಿಗಳ ಬಗ್ಗೆ ಅಭ್ಯರ್ಥಿಗಳ ವೆಚ್ಚಕ್ಕೆ ಹೋಗುವುದರಿಂದ ಪೂರ್ವಾನುಮತಿ ಕಡ್ಡಾಯವಾಗಿ ಪಡೆಯಬೇಕು. ಸಭೆ ಸಮಾರಂಭಗಳಿಗಾಗಿ ಆಯಾ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಅಧಿಕಾರಿಗಳಿಂದ ತಪ್ಪದೇ ಅನುಮತಿ ಪಡೆಯಬೇಕೆಂದು ತಿಳಿಸಿದರು.

ಸಾಮೂಹಿಕ ವಿವಾಹ, ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಭ್ಯರ್ಥಿಗಳು ಪಕ್ಷದ ಪರವಾಗಿ ಮತದಾನ ಕೇಳುವುದು, ಆಮಿಷ ಒಡ್ಡುವುದು ಹಾಗೂ ಯಾವುದೇ ರೀತಿಯ ಕಾಣಿಕೆ ನೀಡುವುದು, ಅನುಮತಿ ಇಲ್ಲದೆ ಇಂತಹ ಚಟುವಟಿಕೆಗಳನ್ನು ಮಾಡದಿರಲು ಸಲಹೆ ನೀಡಿದರು.

ಜಿಲ್ಲೆಯ ಆಯಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗಳಲ್ಲಿ ಏಕಗವಾಕ್ಷಿ ವ್ಯವಸ್ಥೆ ಇದ್ದು, ಕಾರ್ಯ ಕ್ರಮಕ್ಕೆ ಸಂಬಂಧಪಟ್ಟಂತೆ ಬಳಸಲಾಗುವ ಸಾಮಗ್ರಿ ಕಾರ್ಯಕ್ರಮದ ಅನುಮತಿ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಅನುಮತಿ ಪಡೆಯಬಹುದಾಗಿದೆ. ಅನುಮತಿ ಇಲ್ಲದೆ ಚುನಾವಣೆಗೆ ಬಳಸುವ ವಾಹನಗಳನ್ನು ಜಪ್ತಿ ಮಾಡುವ ಜೊತೆಗೆ ಪ್ರಕರಣಗಳನ್ನು ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಯಾದಗಿರಿ ಉಪವಿ ಭಾಗದ ಅರಣ್ಯ ಸಂರಕ್ಷಣಾಧಿಕಾರಿ ಕಾಜೊಲ್ ಅಜಿತ್ ಪಟೇಲ್, ರಾಜಕೀಯ ಪಕ್ಷದ ಪ್ರತಿನಿಧಿಗಳಾದ ಅಬ್ದುಲ್ ಕರೀಮ್ ದಾದು, ಶಾಂತಪ್ಪ ಜಾಧವ್, ಮಲ್ಲಿಕಾರ್ಜುನ ಈಟೆ, ಶಂಕರ ಸೋನಾರ್, ಭೀಮರಾಯ ಜಂಗಳಿ, ಜಗನ್ನಾಥ ಚಿಂತನಹಳ್ಳಿ, ನಿಜಲಿಂಗಪ್ಪ, ಶರಣಬಸಪ್ಪ, ಮರಗಪ್ಪ ಸಾಲಿಕೇರಿ, ವಿರೇಶಕುಮಾರ, ಸಯ್ಯದ್ ಆಯುಬ್, ರಮೇಶ ಮಡಿವಾಳ, ಬಿಲಾಲ್ ಕುರೇಶಿ, ಶೇಕ್ ಜಾವೇದ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.