ನಾರಾಯಣಪುರ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಶುಕ್ರವಾರ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಪಾಟೀಲ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಕಲು ತಡೆಯುವ ನಿಟ್ಟನಲ್ಲಿ ತಾಲ್ಲೂಕಿನ ಬಿಇಒಗಳು, ಜಿಲ್ಲಾ ಮಟ್ಟದ ಜಾಗೃತ ದಳದ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಪ್ರತಿ ವಿಷಯದ ಪರೀಕ್ಷೆಗೂ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಸೂಸುತ್ರವಾಗಿ ನಡೆದಿವೆ ಎಂದು ತಿಳಿಸಿದರು.
ಶುಕ್ರವಾರ ನಡೆದ ತೃತೀಯ ಭಾಷೆ ಹಿಂದಿ ವಿಷಯದ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡ 402 ವಿದ್ಯಾರ್ಥಿಗಳ ಪೈಕಿ 11 ವಿದ್ಯಾರ್ಥಿಗಳು ಗೈರಾಗಿದ್ದು, 391 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಶರಣಪ್ಪ ಹೂಗಾರ ತಿಳಿಸಿದರು.
ವಿಷಯ ಪರಿವೀಕ್ಷಕರು ಈರಣ್ಣ ಕುಂಬಾರ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಮಲ್ಲಪ್ಪ ದೊಡಮನಿ, ಸ್ಥಾನಿಕ ಜಾಗೃತದಳ ವಾಣಿಶ್ರೀ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇದ್ದರು.
ಸ್ಥಳೀಯ ಪೊಲೀಸ್ ಠಾಣೆಯ ಸಿಬ್ಬಂದಿ ಪರೀಕ್ಷಾ ಕೇಂದ್ರದ ಸುತ್ತಲು ಸೂಕ್ತ ಬಂದೋಬಸ್ತ್ ಒದಗಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.