ಹುಣಸಗಿ: ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎ ಹಾಗೂ ಒಬಿಸಿ ಪಟ್ಟಿಯಲ್ಲಿ ಸೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಕಚೇರಿ ಎದುರು ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು.
ಸಮಾಜದ ಮುಖಂಡ ಮಲ್ಲನಗೌಡ.ಸಿ.ಪಾಟೀಲ ಮಾತನಾಡಿ, ರಾಜ್ಯದಲ್ಲಿ 86 ಲಕ್ಷ ಪಂಚಮಸಾಲಿ ಸಮಾಜದ ಜನಸಂಖ್ಯೆಯಿದೆ. ಆದರೆ ಸಮಾಜವು ಸೌಲಭ್ಯಗಳಿಂದ ವಂಚಿತವಾಗಿದ್ದು, ಇಂದಿಗೂ ಸಮಾಜದ ಜನರು ಕೃಷಿ ಹಾಗೂ ಕೂಲಿ ಕೆಲಸ ನೆಚ್ಚಿಕೊಂಡು ಜೀವನ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಶಿಕ್ಷಣ ಪ್ರಗತಿಯ ಹಾಗೂ ಉದ್ಯೋಗವಕಾಶ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪಟ್ಟಣದ ವೀರರಾಣಿ ಕಿತ್ತೂರ ಚನ್ನಮ್ಮ ಸಹಕಾರಿ ಸಂಘದ ಅಧ್ಯಕ್ಷ ಬಸವರಾಜ ಮಲಗಲದಿನ್ನಿ ಮಾತನಾಡಿ, ಸಮಾಜದ ಒಳಿತಿಗಾಗಿ ಈ ಹಿಂದಿನಿಂಲೂ ಸಾಕಷ್ಟು ಹೋರಾಟಗಳನ್ನು ಮಾಡುತ್ತಲೇ ಬರಲಾಗಿದೆ. ಆದರೆ ಸಮರ್ಪಕ ಸಂಘಟನೆಯ ಮೂಲಕ ಹೋರಾಟ ನಡೆಸುವ ಅಗತ್ಯವಿದೆ ಎಂದರು.
ತಹಶೀಲ್ದಾರ್ ವಿನಯಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.
ಮುರಿಗೆಣ್ಣ ದೇಸಾಯಿ, ಹೊನ್ನಕೇಶವ ದೇಸಾಯಿ, ಮುದಕಪ್ಪ ದೇಸಾಯಿ, ನಂದನಗೌಡ ಬಿರಾದಾರ, ಸಿದ್ದನಗೌಡ ಮಲ್ಲೆಶ್ವರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.