ADVERTISEMENT

ದಿಬ್ಬಿಕೆರೆ ನಾಲಾ ಹೂಳೆತ್ತುವ ಕಾಮಗಾರಿ ವೀಕ್ಷಣೆ

ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕೆಲಸ

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 1:08 IST
Last Updated 21 ಜನವರಿ 2021, 1:08 IST
ಯಾದಗಿರಿ ತಾಲ್ಲೂಕಿನ ಬಳಿಚಕ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಬ್ಬಿಕೆರೆ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಅಧಿಕಾರಿಗಳು ಪ್ರಗತಿ ಪರಿಶೀಲಿಸಿದರು
ಯಾದಗಿರಿ ತಾಲ್ಲೂಕಿನ ಬಳಿಚಕ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಬ್ಬಿಕೆರೆ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಅಧಿಕಾರಿಗಳು ಪ್ರಗತಿ ಪರಿಶೀಲಿಸಿದರು   

ಯಾದಗಿರಿ: ತಾಲ್ಲೂಕಿನ ಬಳಿಚಕ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಬ್ಬಿಕೆರೆ ನಾಲಾ ಹೂಳೆತ್ತುವ ಕಾಮಗಾರಿಯ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚಂದ್ರಶೇಖರ ಪವಾರ ಹಾಗೂ ಜಿಲ್ಲಾ ಪಂಚಾಯಿತಿ ಐಇಸಿ ಸಂಯೋಜಕ ಪರಶುರಾಮ ಭೇಟಿ ನೀಡಿ, ಕಾಮಗಾರಿಯ ಪ್ರಗತಿ ಪರಿಶೀಲಿಸಿದರು.

‘ನರೇಗಾ ಯೋಜನೆಯಡಿ ಬಳಿಚಕ್ರ ಗ್ರಾಮದ 74 ಜನ ಕೂಲಿ ಕಾರ್ಮಿಕರು ದಿಬ್ಬಿಕೆರೆ ಹೂಳೆತ್ತುವ ಕೆಲಸ ಮಾಡುತ್ತಿದ್ದು, ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಎಲ್ಲ ಕಾರ್ಮಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅಂತರ ಪಾಲಿಸುವ ಜೊತೆಗೆ ಆರೋಗ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಕೆಲಸ ಮಾಡಬೇಕು’ ಎಂದು ತಿಳಿಸಿದರು.

‘ಕಾಮಗಾರಿ ನಡೆಯುವ ಸ್ಥಳದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ತಾಯಂದಿರ ಮಕ್ಕಳ ಪಾಲನೆ ಹಾಗೂ ಆರೋಗ್ಯದ ಸುರಕ್ಷತೆಗೆ ಕೆಲಸದ ಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಕಿಟ್‌ಗಳ ವ್ಯವಸ್ಥೆ ಮಾಡಿ’ ಎಂದು ಪಂಚಾಯಿತಿ ಸಿಬ್ಬಂದಿಗೆ ಸೂಚಿಸಿದರು.

ADVERTISEMENT

‘ಕಾರ್ಮಿಕರು ತಮ್ಮ ಮೇಲೆ ಕೆಲಸದ ಒತ್ತಡ ಹಾಕಿಕೊಳ್ಳದೆ ಕೆಲಸ ಮಾಡಬೇಕು. ಕೂಲಿ ಕೆಲಸ ಮಾಡುವ ಕಾರ್ಮಿಕರಿಗೆ ಒಂದು ದಿನಕ್ಕೆ ₹275 ಒಂದು ಕುಟುಂಬಕ್ಕೆ ವರ್ಷದಲ್ಲಿ 100 ದಿನ ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಯೋಜನೆಯಡಿ ಕೆಲಸ ಕೊಡುತ್ತಾರೆ. ಕೂಲಿ ಹಣ ನೇರವಾಗಿ ತಮ್ಮ ಆಧಾರ್ ಕಾರ್ಡ್‌ ಸಂಖ್ಯೆ ಜೋಡಣೆ ಮಾಡಿರುವ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಇಂಥ ಅವಕಾಶವನ್ನು ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ಬಳಸಿಕೊಂಡಾಗ ತಮ್ಮ ಕುಟುಂಬದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ’ ಎಂದು ಹೇಳಿದರು.

ಈ ವೇಳೆ ಕಾಳೆಬೆಳಗುಂದಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೇತನ್, ತಾಂತ್ರಿಕ ಸಹಾಯಕ ನಿಂಗಪ್ಪ (ಟಿಎಇ), ಜಿಲ್ಲಾ ಪಂಚಾಯಿತಿ ಐಇಸಿ ಸಂಯೋಜಕ ಪರಶುರಾಮ, ಬಳಿಚಕ್ರ ಪಂಚಾಯಿತಿಯ ಡಿಇಒ ಸೋಮು, ಕಾರ್ಯದರ್ಶಿ ಪ್ರಭು, ಟಿಐಇಸಿ ಬಸಪ್ಪ, ಕಾಯಕ ಬಂಧುಗಳು ಸೇರಿದಂತೆ ಪಂಚಾಯಿತಿ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.