ADVERTISEMENT

ಪಡಿತರ ಚೀಟಿ ಇಲ್ಲದಿದ್ದರೂ ಧಾನ್ಯ ವಿತರಿಸಿ: ಸಚಿವ ಗೋಪಾಲಯ್ಯ

ಆಹಾರ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಗೋಪಾಲಯ್ಯ

​ಪ್ರಜಾವಾಣಿ ವಾರ್ತೆ
Published 11 ಜೂನ್ 2020, 16:26 IST
Last Updated 11 ಜೂನ್ 2020, 16:26 IST
ಯಾದಗಿರಿಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಗೋಪಾಲಯ್ಯ ಮಾತನಾಡಿದರು
ಯಾದಗಿರಿಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಗೋಪಾಲಯ್ಯ ಮಾತನಾಡಿದರು   

ಯಾದಗಿರಿ: ಲಾಕ್‍ಡೌನ್‌ನಿಂದಜಿಲ್ಲೆಗೆ ವಾಪಸ್ಸಾದ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದಿದ್ದರೂ ಅವರ ಆಧಾರ್ ಕಾರ್ಡ್ ಮೂಲಕ ಆಹಾರ ಧಾನ್ಯ ವಿತರಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಗೋಪಾಲಯ್ಯ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಮತ್ತು ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ಪಡಿತರ ವಿತರಣೆ ಸಮರ್ಪಕ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಪ್ರತಿಯೊಬ್ಬರಿಗೂ ಪಡಿತರ ತಲುಪುವ ಉದ್ದೇಶದಿಂದ ಕೇಂದ್ರ ಸರ್ಕಾರವು ಆತ್ಮ ನಿರ್ಭರ್ ಭಾರತ ಯೋಜನೆಯಡಿ ರಾಜ್ಯ ಸರ್ಕಾರಕ್ಕೆ ಪಡಿತರ ಆಹಾರ ಧಾನ್ಯ ಬಿಡುಗಡೆ ಮಾಡಿದೆ. ಹೊರ ರಾಜ್ಯದಿಂದ ಹಾಗೂ ಬೇರೆ ಜಿಲ್ಲೆಯಿಂದ ಜಿಲ್ಲೆಗೆ ವಾಪಸ್ಸಾದ ಕಾರ್ಮಿಕರಿಗೆ ಆಧಾರ್ ಕಾರ್ಡ್ ಮುಖಾಂತರ 10 ಕೆ.ಜಿ ಅಕ್ಕಿ ಹಾಗೂ ಎರಡು ಕೆ.ಜಿ ಬೇಳೆ ವಿತರಿಸಬೇಕು ಎಂದು ತಿಳಿಸಿದರು.

ADVERTISEMENT

ಪ್ರಧಾನಮಂತ್ರಿ ಉಜ್ವಲ್ ಯೋಜನೆಯಡಿ ಮತ್ತು ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿಯಲ್ಲಿ ಮೂರು ತಿಂಗಳವರೆಗೆ ಉಚಿತ ಗ್ಯಾಸ್ ನೀಡಲಾಗಿದೆ. ಜಿಲ್ಲೆಗೆ 2,500 ಗ್ಯಾಸ್ ಕನೆಕ್ಷನ್‍ನ್ನು ಹೆಚ್ಚುವರಿಯಾಗಿ ಕೊಡಲಾಗಿದೆ. ಆಹಾರ ಧಾನ್ಯ ಸಂಗ್ರಹಣೆಗಾಗಿ ಜಿಲ್ಲೆಯಲ್ಲಿ ಸುಸಜ್ಜಿತ ಗೋದಾಮು ನಿರ್ಮಾಣ ಮಾಡಲು 5 ಎಕರೆ ಜಮೀನು ಮಂಜೂರು ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಆಹಾರ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಮಾತನಾಡಿ, ಜಿಲ್ಲೆಯಲ್ಲಿ ಸದ್ಯ ಇರುವ ನ್ಯಾಯಬೆಲೆ ಅಂಗಡಿಗಳ ಅಂತರ ಹೆಚ್ಚಿದೆ. ಇದರಿಂದ ಪಡಿತರ ಚೀಟಿದಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನೂ ಹೆಚ್ಚಿನ ನ್ಯಾಯಬೆಲೆ ಅಂಗಡಿಗಳಿಗೆ ಅನುಮತಿ ನೀಡಲು ಕೋರಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿ, ಜಿಲ್ಲೆಯಲ್ಲಿ ಪಡಿತರ ಚೀಟಿಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದ ಮತ್ತು ರದ್ದುಪಡಿಸಿದ ಪಡಿತರ ಚೀಟಿಗಳ ಫಲಾನುಭವಿಗಳಿಗೂ ಕೂಡ ಕೋವಿಡ್-19 ತುರ್ತು ಪರಿಸ್ಥಿತಿ ಸಂಬಂಧ ಪಡಿತರ ವಿತರಣೆ ಮಾಡಲಾಗುತ್ತಿದೆ. ತುರ್ತು ಪರಿಸ್ಥಿತಿ ಸಂಬಂಧ ಎಸ್‍ಡಿಆರ್‌ಎಫ್ ಅನುದಾನ ಬಳಸಿಕೊಂಡು ಪಡಿತರ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.

ಆಹಾರ ಇಲಾಖೆ ಉಪ ನಿರ್ದೇಶಕ ದತ್ತಪ್ಪ ಕಲ್ಲೂರ ಮಾತನಾಡಿ, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿಜಿಲ್ಲೆಯಲ್ಲಿ ಶೇ.94ರಷ್ಟು ಫಲಾನುಭವಿಗಳಿಗೆ ಪಡಿತರ ವಿತರಣೆ ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ ಸೇರಿದಂತೆ ತಹಶೀಲ್ದಾರರು ಸಭೆಯಲ್ಲಿದ್ದರು.

ಹಳ್ಳಿಗಳಿಗೆ ತೆರಳಿ ಪಡಿತರ ಧಾನ್ಯ ವಿತರಿಸಬೇಕು: ಗೋಪಾಲಯ್ಯ

ರಾಜ್ಯದಲ್ಲಿ 40 ಲಕ್ಷ ಜನರಿಗೆ ಆಹಾರ ಧಾನ್ಯ ವಿತರಿಸುವ ಗುರಿಯಿದ್ದು, ನ್ಯಾಯಬೆಲೆ ಅಂಗಡಿಗಳಿಂದ ದೂರವಿರುವ ಹಳ್ಳಿಗಳಿಗೆ ತೆರಳಿ ಪಡಿತರ ಧಾನ್ಯ ವಿತರಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.