ADVERTISEMENT

ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ಮತದಾರರ ಪಟ್ಟಿ ವಿತರಣೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2021, 16:41 IST
Last Updated 2 ಫೆಬ್ರುವರಿ 2021, 16:41 IST
ಮತದಾರರ ಅಂತಿಮ ಪಟ್ಟಿಯನ್ನು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ವಿತರಿಸಿದರು
ಮತದಾರರ ಅಂತಿಮ ಪಟ್ಟಿಯನ್ನು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ವಿತರಿಸಿದರು   

ಯಾದಗಿರಿ: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿಯನ್ನು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ವಿತರಣೆ ಮಾಡಿದರು.

ಕಳೆದ ವರ್ಷದ ಅಂತಿಮ ಮತದಾರರ ಪಟ್ಟಿಯಲ್ಲಿ 9,93,745 ಮತದಾರರು ನೋಂದಾಯಿಸಿಕೊಂಡಿದ್ದರೆ, ಈ ವರ್ಷದ ಮತದಾರರ ಪಟ್ಟಿಯಲ್ಲಿ ಜಿಲ್ಲೆಯಲ್ಲಿ 10,12,777 ಮತದಾರರು ನೋಂದಾಯಿಸಿಕೊಂಡಿದ್ದಾರೆ. ಈ ಬಾರಿ 19,032 ಮಂದಿ ಮತದಾರರು ತಮ್ಮ ಹೆಸರನ್ನು ಹೊಸದಾಗಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ವಿವರಿಸಿದರು.

ಕರಡು ಮತದಾರರ ಪಟ್ಟಿಯನ್ನು ಕೂಲಂಕಷವಾಗಿ ಪರಿಶೀಲಿಸಿ ಮೃತಪಟ್ಟವರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಪಟ್ಟಿಯಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ಕೊಡದಂತೆ ತಯಾರಿಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳ ಸಹಕಾರದಿಂದ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ADVERTISEMENT

ಅಂತಿಮ ಮತದಾರರ ಪಟ್ಟಿಯನ್ನು http://ceokarnataka,kar,nic,in ಹಾಗೂ ಜಿಲ್ಲೆಯ (yadgir.nic.in)
ಅಂತರ್ಜಾಲದಲ್ಲಿಯು ಅಪ್ ಲೋಡ್ ಮಾಡಲಾಗಿದ್ದು, ಸಾರ್ವಜನಿಕರು ತಮ್ಮ ಹೆಸರುಗಳನ್ನು ಪರಿಶೀಲಿಸಬಹುದಾಗಿದೆ ಎಂದರು.

ಅಂತಿಮ ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಒಂದು ವೇಳೆ ಅರ್ಹತಾ ದಿನಾಂಕಕ್ಕೆ ಸಂಬಂಧಿಸಿದಂತೆ ಯುವಕರು, ಯುವತಿಯರು ಅಥವಾ ಸಾರ್ವಜನಿಕರು ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಬೇಕು ಎಂದು
ಹೇಳಿದರು.

ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಸ್ಥಳಾಂತರ ಹೊಂದಿದ್ದಲ್ಲಿ ಅಥವಾ ಮೃತಪಟಿದ್ದಲ್ಲಿ, ಹೆಸರು ಪುನರಾವರ್ತನೆ
ಯಾಗಿದ್ದಲ್ಲಿ ಅವರುಗಳ ಹೆಸರನ್ನು ತೆಗೆದು ಹಾಕಲು ನಮೂನೆ-7ರಲ್ಲಿ, ಹೆಸರು ಇತ್ಯಾದಿ ತಿದ್ದುಪಡಿ ಬಯಸಿದ್ದಲ್ಲಿ ನಮೂನೆ-8ರಲ್ಲಿ ಮತ್ತು ಹೆಸರು ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-8ಎ ರಲ್ಲಿ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಇದು ನಿರಂತರವಾಗಿ ನಡೆಯುತ್ತಿರುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಬಿಎಸ್‍ಪಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಮಹಮದ್ ತಜಮೂಲ್, ಬಿಜೆಪಿ ಮುಖಂಡರಾದ ಬಂಡೆಪ್ಪ ಆಕಳ, ಜೆಡಿಎಸ್ ಮುಖಂಡ ಶಾಂತಪ್ಪ ಜಾಧವ್, ಜೆಡಿಎಸ್‌ ಮಹಿಳಾ ಅಧ್ಯಕ್ಷ ನಾಗರತ್ನ ಅನಪುರ ಹಾಗೂ ಕೆಪಿಸಿಸಿ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಮಾನಸಗಲ್, ಗ್ರಾಮೀಣ ಅಧ್ಯಕ್ಷ ಮರೆಪ್ಪ ಬಿಳ್ಹಾರ, ಚುನಾವಣಾ ಶಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.