ಯಾದಗಿರಿ: ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಶಿವನಗೌಡ, ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೊಡೆ ಅವರು ಜಿಲ್ಲೆಯ ಮುಂಡರಗಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸೀರೆ, ಸ್ಯಾನಿಟೈಸರ್, ಮಾಸ್ಕ್, ಹ್ಯಾಂಡ್ ಗ್ಲೌಸ್ ಒಳಗೊಂಡ ಕಿಟ್ಗಳನ್ನು ವಿತರಿಸಿದರು.
ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಶಿವನಗೌಡ ಮಾತನಾಡಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಕಿಟ್ ಅನ್ನು ಉಪಯೋಗ ಮಾಡುತ್ತಾ ತಮ್ಮ ಆರೋಗ್ಯ ಕಾಪಾಡಿಕೊಂಡು ಸೇವಾ ಮನೋಭಾವನೆಯ ಜೊತೆಗೆ ಕಾರ್ಯನಿರ್ವಹಿಸಬೇಕು. ಸಂಶಯವಿರುವ ಅಥವಾ ರೋಗಲಕ್ಷಣಗಳ ಅನುಸಾರವಾಗಿ ಸಮೀಪದ ಆಸ್ಪತ್ರೆಗಳಿಗೆ ಅಥವಾ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ್ ಬನಸೊಡೆ ಮಾತನಾಡಿ, ತಮ್ಮ ಕುಟುಂಬದ ಆರೋಗ್ಯದ ಜೊತೆಗೆ ಇಲ್ಲಿ ಪ್ರತಿಯೊಬ್ಬರ ಆರೋಗ್ಯದ ಬಗ್ಗೆ ಉತ್ತಮ ಕಾಳಜಿ ತೋರಬೇಕು. ಬೇರೆ ಕಡೆಯಿಂದ ಬಂದಂಥ ವ್ಯಕ್ತಿಗಳ ಬಗ್ಗೆ ನಿಗಾವಹಿಸಿ ಅವರ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆಗಳಿಗೆ ನೀಡಬೇಕು ಹಾಗೂ ಯಾವುದಾದರೂ ಗಂಟಲು ನೋವು, ನೆಗಡಿ, ಕೆಮ್ಮು, ಜ್ವರ ಅಥವಾ ಈ ರೀತಿಯಾದ ಲಕ್ಷಣಗಳು ಕಂಡು ಬಂದಲ್ಲಿ ಸಮೀಪದ ಆರೋಗ್ಯ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಜಿಲ್ಲೆಯ ಅಸಿಸ್ಟೆಂಟ್ ಡ್ರಗ್ಸ್ ಕಂಟ್ರೊಲರ್ ಪುಷ್ಪಾಪ್ರಿಯಾ ಎನ್., ಡಾ.ಪ್ರಕಾಶ್ ಎಚ್.ರಾಜಾಪುರ, ಡಾ.ರಮೇಶ್ ಸಜ್ಜನ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಧಾ ಜಿ.ಮಣ್ಣೂರು, ನಾಗರಾಜ ಕೆಂಭಾವಿ, ಸಂಗಮೇಶ್ ಕೆಂಭಾವಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.